ಬಾಲಕಿಯ ಅಪಹರಿಸಿ ಅತ್ಯಾಚಾರ: ಆರೋಪಿಗೆ ಹೈಕೋರ್ಟ್‍ನಿಂದ ಜಾಮೀನು ನಿರಾಕರಣೆ

Update: 2023-01-29 18:00 GMT

ಬೆಂಗಳೂರು: ಬಾಲಕಿಯನ್ನು ಅಪಹರಿಸಿ ಸತತ ಅತ್ಯಾಚಾರವೆಸಗಿದ್ದ ಆರೋಪಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ. 

ಜಾಮೀನು ಕೋರಿ ದಾವಣಗೆರೆ ತಾಲೂಕಿನ ಹೊಸಕುಂಡುವಾಡ ಗ್ರಾಮದ ಆರೋಪಿ ಎನ್.ಶ್ರೀನಿವಾಸ್ ಎಂಬಾತ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹಕೋರ್ಟ್ ನ್ಯಾಯಪೀಠ, ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. 

ಸಂತ್ರಸ್ತ ಬಾಲಕಿಯನ್ನು ಪರೀಕ್ಷೆಗೊಳಪಡಿಸಿದ್ದಾಗ ವೈದ್ಯಾಧಿಕಾರಿಗಳ ಮುಂದೆ ಆರೋಪಿಯ ವಿರುದ್ಧ ಹೇಳಿಕೆ ನೀಡಿದ್ದಾರೆ. ಮ್ಯಾಜಿಸ್ಟ್ರೇಟ್ ಮುಂದೆ ಸಿಆರ್‍ಪಿಸಿ 164 ಅಡಿಯಲ್ಲಿ ಹೇಳಿಕೆ ನೀಡುವ ಸಂಬಂಧ ಈ ಹೇಳಿಕೆಯನ್ನು ಹಿಂಪಡೆದುಕೊಂಡಿದ್ದಾರೆ. ಆದರೆ ಪ್ರಕರಣ ಅತ್ಯಂತ ಗಂಭೀರ ಸ್ವರೂಪದ್ದು. ಹೀಗಾಗಿ ಅರ್ಜಿ ವಜಾಗೊಳಿಸುತ್ತಿರುವುದಾಗಿ ನ್ಯಾಯಪೀಠವು ತಿಳಿಸಿದೆ. 

ಪ್ರಕರಣ ಸಂಬಂಧ ವಿಚಾರಣೆಯಲ್ಲಿ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧದ ಆರೋಪಗಳು ನಿರಾಧಾರ. ತಪ್ಪಾಗಿ ಅವರನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಸಂತ್ರಸ್ತೆ ಮ್ಯಾಜಿಸ್ಟ್ರೇಟ್ ಮುಂದೆ ನೀಡಿರುವ ಹೇಳಿಕೆಯಲ್ಲಿ ಅರ್ಜಿದಾರರ ಹೆಸರು ಹೇಳಿಲ್ಲ. ಪ್ರಕರಣ ತನಿಖೆ ಪೂರ್ಣಗೊಂಡಿದ್ದು, 2022ರ ಜೂನ್ ತಿಂಗಳಿನಿಂದ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಹೀಗಾಗಿ ಜಾಮೀನು ಮಂಜೂರು ಮಾಡಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.

ಇದೇ ವೇಳೆ ಸರಕಾರದ ಪರ ವಕೀಲರು ವಾದ ಮಂಡಿಸಿ, ಅಪ್ರಾಪ್ತೆಯನ್ನು ಅಪಹರಣ ಮಾಡಿ ಸತತ ಅತ್ಯಾಚಾರವೆಸಗಿರುವ ಕುರಿತು ವೈದ್ಯಕೀಯ ಸಾಕ್ಷ್ಯಾಧಾರಗಳಿವೆ. ಆರೋಪಿಯ ವಿರುದ್ಧ ಗಂಭೀರ ಆರೋಪವಿದೆ. ಹೀಗಾಗಿ ಅರ್ಜಿ ರದ್ದುಗೊಳಿಸಬೇಕು ಎಂದು ಪೀಠಕ್ಕೆ ತಿಳಿಸಿದರು.

ಪ್ರಕರಣವೇನು: ದಾವಣಗೆರೆ ತಾಲೂಕಿನ ಹೊಸಕುಂಡುವಾಡ ಗ್ರಾಮದ ಮಹಿಳೆಯೊಬ್ಬರು ತಮ್ಮ ಮಗಳು ನಾಪತ್ತೆಯಾಗಿದ್ದಾರೆ ಎಂದು 2022ರ ಫೆ.3 ರಂದು ದಾವಣಗೆರೆಯ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ಸಂತ್ರಸ್ತೆಯನ್ನು ರಕ್ಷಣೆ ಮಾಡಿದ್ದರು. ಬಳಿಕ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

Similar News