ಪಂಚಮಸಾಲಿ ಲಿಂಗಾಯತರಿಗೆ 2-ಎ ಮೀಸಲಾತಿ: ವರದಿ ಸಲ್ಲಿಸಲು ಹೈಕೋರ್ಟ್‍ಗೆ ಕಾಲಾವಕಾಶ ಕೋರಿದ ಸರಕಾರ

Update: 2023-01-30 18:15 GMT

ಬೆಂಗಳೂರು, ಜ.30: ಪಂಚಮಸಾಲಿ ಲಿಂಗಾಯತರಿಗೆ ಪ್ರವರ್ಗ 2-ಎ ಮೀಸಲಾತಿ ನೀಡುವ ಕುರಿತು ಹಿಂದುಳಿದ ವರ್ಗಗಳ ಆಯೋಗ ಸರಕಾರಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ನ್ಯಾಯಪೀಠಕ್ಕೆ ಒದಗಿಸಲು ಸರಕಾರ ಹೈಕೋರ್ಟ್‍ಗೆ ಕಾಲಾವಕಾಶ ಕೋರಿದೆ. 

ಪಂಚಮಸಾಲಿ ಲಿಂಗಾಯತ ಉಪ ಜಾತಿಗೆ ಪ್ರವರ್ಗ 2-ಎ ಅಡಿ ಮೀಸಲಾತಿ ನೀಡುವ ಸಂಬಂಧದ ಸರಕಾರದ ಪ್ರಕ್ರಿಯೆ ಪ್ರಶ್ನಿಸಿ ಬೆಂಗಳೂರಿನ ಡಿ.ಜಿ.ರಾಘವೇಂದ್ರ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠಕ್ಕೆ ಸರಕಾರ ಕಾಲಾವಕಾಶ ಕೋರಿದೆ.

ವಿಚಾರಣೆ ವೇಳೆ ಹಾಜರಾಗಿದ್ದ ಸರಕಾರದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಸರಕಾರಕ್ಕೆ ಸಲ್ಲಿಸಿರುವ ವರದಿಯನ್ನು ಫೆ.2ರಂದು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು. ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ, ವಿಚಾರಣೆಯನ್ನು ಮುಂದೂಡಿತು.

ಡಿ.27ರಂದು ವಿಚಾರಣೆಯಲ್ಲಿ ಅರ್ಜಿದಾರರ ಪರ ವಕೀಲರು, 2000ನೆ ಇಸವಿಯಲ್ಲಿ ಲಿಂಗಾಯತ ಸಮುದಾಯದ ಕೆಲವು ಉಪ ಪಂಗಡಗಳ ಮೀಸಲಾತಿ ಕೋರಿಕೆಯನ್ನು ತಿರಸ್ಕರಿಸಿ ಹಿಂದುಳಿದ ವರ್ಗಗಳ ಆಯೋಗವು ಕೆಲ ಶಿಫಾರಸುಗಳನ್ನು ಮಾಡಿತ್ತು. ಅದಾಗ್ಯೂ ಇತ್ತೀಚೆಗೆ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಮಧ್ಯಂತರ ವರದಿ ಆಧರಿಸಿ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸಲು ಸರಕಾರ ಮುಂದಾಗುತ್ತಿದೆ.

ಆದರೆ, ವೀರಶೈವ/ಲಿಂಗಾಯತ ಸಮುದಾಯದ ಉಪ ಪಂಗಡವನ್ನು ತಾತ್ಕಾಲಿಕ ಪ್ರಕ್ರಿಯೆಯ ಮೂಲಕ ಪ್ರವರ್ಗಕ್ಕೆ 2ಎಗೆ ಸೇರಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ಆದರೂ ಸರಕಾರ ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿ ಆಧರಿಸಿ ಮೀಸಲು ಕಲ್ಪಿಸಲು ಮುಂದಾಗಿರುವುದು ಕಾನೂನು ಬಾಹಿರ ಎಂದು ವಾದ ಮಂಡಿಸಿದ್ದರು.

Similar News