ನೀವು ಕೊಟ್ಟರೂ ನನಗೆ ಸಚಿವ ಸ್ಥಾನ ಬೇಡ ಎಂದು ಸಿಎಂಗೆ ಹೇಳಿ ಬಂದಿದ್ದೇನೆ: ಕೆ.ಎಸ್.ಈಶ್ವರಪ್ಪ ಅಸಮಾಧಾನ

Update: 2023-02-03 16:51 GMT

ಬೆಂಗಳೂರು, ಫೆ. 3: ‘ಪಕ್ಷ ಮತ್ತು ರಾಜ್ಯ ಸರಕಾರಕ್ಕೆ ಏನೇನು ಸಮಸ್ಯೆಗಳಿವೆಯೋ ಗೊತ್ತಿಲ್ಲ. ನನಗೆ ಸಚಿವ ಸ್ಥಾನವನ್ನು ನೀಡದೆ ಇದ್ದರೂ ಪರವಾಗಿಲ್ಲ. ಎಲ್ಲ ಸಮಸ್ಯೆಗಳನ್ನು ಮೊದಲು ಬಗೆಹರಿಸಿಕೊಳ್ಳಲಿ’ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇಂದಿಲ್ಲಿ ತಮ್ಮದೆ ದಾಟಿಯಲ್ಲಿ ಅಸಮಾಧಾನ ಹೊರಹಾಕಿದ್ದಾರೆ.

ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಾಲೋಚನೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ತಾನು ನಿರ್ದೋಷಿ ಎಂದು ತನಿಖೆಯಿಂದ ಗೊತ್ತಾಗಿದೆ. ಆ ಬಳಿಕ ಸಂಪುಟಕ್ಕೆ ಮತ್ತೆ ಸೇರ್ಪಡೆ ಮಾಡಿಕೊಳ್ಳುವುದಾಗಿ ಸಿಎಂ ಹೇಳಿದ್ದರು. ಆದರೆ, ಈವರೆಗೂ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಿಲ್ಲ. ರಾಜಕೀಯದಲ್ಲಿ ಏನೇನು ನಡೆಯುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದರು.

ನನ್ನ ಮೇಲೆ ಆರೋಪ ಬಂದಿದ್ದರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ನನ್ನನ್ನು ಮತ್ತೆ ಮಂತ್ರಿ ಮಾಡುವ ಅಗತ್ಯವಿಲ್ಲ ಎಂದು ಸಿಎಂ ನೇರವಾಗಿ ಹೇಳಿ ಬಂದಿದ್ದೇನೆ ಎಂದ ಈಶ್ವರಪ್ಪ, ‘ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಬೇಕೆಂದು ರಮೇಶ ಜಾರಕಿಹೊಳಿ ಒತ್ತಾಯಿಸಿದ್ದು, ಈ ಬಗ್ಗೆ ಸರಕಾರ ತನಿಖೆ ನಡೆಸುವುದು ಸೂಕ್ತ ಎಂದು ಹೇಳಿದರು.

Similar News