ಉಡುಪಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ನಿರ್ಮಾಣಗೊಂಡ ರಸ್ತೆ: ಯಶಸ್ವಿಯಾದ ಪ್ಲಾಸ್ಟಿಕ್ ಮರುಬಳಕೆಯ ಪ್ರಯೋಗ

Update: 2023-02-06 14:42 GMT

ಉಡುಪಿ: ಸಾರ್ವಜನಿಕರ ದೈನಂದಿನ ಜೀವನದಲ್ಲಿ ಹಾಸುಹೊಕ್ಕಾಗಿರುವ ಪ್ಲಾಸ್ಟಿಕ್ ಬಳಕೆಯ ನಂತರ, ಅದರ ತ್ಯಾಜ್ಯ ವಿಲೇವಾರಿ ದೊಡ್ಡ ತಲೆನೋವಾಗಿರುವುದು, ಅದೊಂದು ಬಗೆಹರಿಯದ ಸಮಸ್ಯೆಯಾಗಿ ವಿಶ್ವದೆಲ್ಲೆಡೆ ಕಾಡುತ್ತಿದೆ. ಪ್ಲಾಸ್ಟಿಕ್‌ನಿಂದ ಉಂಟಾಗುವ ದುಷ್ಪರಿಣಾಮಗಳನ್ನು ತಡೆಗಟ್ಟಬೇಕಾದ ಬೃಹತ್ ಸಮಸ್ಯೆಯೂ ಈಗ ನಮ್ಮ ಮುಂದಿದೆ. ಪ್ಲಾಸ್ಟಿಕ್‌ನ್ನು ಒಂದು ತ್ಯಾಜ್ಯವೆಂದು ಪರಿಗಣಿಸುವ ಬದಲಿಗೆ ಅದನ್ನು ಸೂಕ್ತ ರೀತಿಯಲ್ಲಿ ಮರುಬಳಕೆ ಮಾಡಿದರೆ ಅದು ಒಂದು ಸಂಪನ್ಮೂಲವಾಗುತ್ತದೆ ಎಂಬುದಕ್ಕೆ ಉಡುಪಿ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ನಿರ್ಮಿಸಿದ ರಸ್ತೆ ಸಾಕ್ಷಿಯಾಗಿದೆ.

ಪ್ಲಾಸ್ಟಿಕ್ ತ್ಯಾಜ್ಯದ  ಮರುಬಳಕೆ ಕುರಿತಂತೆ  2019ರ ಡಿಸೆಂಬರ್ ಮೊದಲ ವಾರ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಅಡಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ರಸ್ತೆ ನಿರ್ಮಾಣ ಮಾಡುವ ಕಾರ್ಯಾಗಾರವೊಂದನ್ನು ಉಡುಪಿ ಜಿಲ್ಲಾ ಪಂಚಾಯತ್‌ನಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಾಗಾರದಲ್ಲಿ ಪದ್ಮಶ್ರೀ ಪ್ರಶಸ್ತಿ ವಿಜೇತ ಹಾಗೂ ‘ಪ್ಲಾಸ್ಟಿಕ್‌ಮ್ಯಾನ್’ ಎಂದು ಖ್ಯಾತಿ ಪಡೆದ ತಮಿಳುನಾಡಿನ ಡಾ.ವಾಸುದೇವನ್ ಇವರು ಜಿಲ್ಲೆಯ ವಿವಿಧ ಇಲಾಖೆಗಳು ಹಾಗೂ ಸಂಸ್ಥೆಗಳ ಇಂಜಿನಿಯರ್‌ಗಳು ಮತ್ತು ಅಧಿಕಾರಿಗಳಿಗೆ ಈ ಬಗ್ಗೆ ತರಬೇತಿ ನೀಡಿದ್ದರು.

ಉಡುಪಿ ಜಿಲ್ಲೆಯ ಎಸ್‌ಎಲ್‌ಆರ್‌ಎಂ ಕೇಂದ್ರಗಳಲ್ಲಿ ಶೇಖರಣೆಯಾಗಿದ್ದ ಪ್ಲಾಸ್ಟಿಕ್‌ಗಳನ್ನು ವಿಲೇವಾರಿ ಮಾಡುವುದು ಸವಾಲಾಗಿತ್ತು.  ಉತ್ತಮ ಗುಣಮಟ್ಟದ ಪ್ಲಾಸ್ಟಿಕ್‌ಗಳಿಗೆ ಸ್ಥಳೀಯವಾಗಿ ಬೇಡಿಕೆ ಇದ್ದು, ಕಡಿಮೆ ಗುಣಮಟ್ಟದ ಪ್ಲಾಸ್ಟಿಕ್, ಮಲ್ಟಿ ಲೇಯರ್ಡ್‌ ಪ್ಲಾಸ್ಟಿಕ್ (ಎಂಎಲ್‌ಪಿ), ಥರ್ಮೋಕೋಲ್, ಫೋಮ್ಸ್ ಮುಂತಾದವುಗಳಿಗೆ ಯಾವುದೇ ಬೇಡಿಕೆ ಇಲ್ಲದೇ ಇವುಗಳನ್ನು ವಿಲೇವಾರಿ ಮಾಡುವುದೇ ಕಷ್ಟಸಾಧ್ಯವೆನಿಸಿತ್ತು.

ಇಂತಹ ವ್ಯರ್ಥ ಪ್ಲಾಸ್ಟಿಕ್‌ಗಳನ್ನು ರಸ್ತೆ ನಿರ್ಮಾಣಕ್ಕೆ ಮರುಬಳಕೆ ಮಾಡುವ ಮೂಲಕ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಪನ್ಮೂಲವನ್ನಾಗಿ ಪರಿವರ್ತಿಸಬಹುದು ಎಂದು ಡಾ.ವಾಸುದೇವನ್ ಮಾಹಿತಿ ನೀಡಿದ್ದರು. ಒಂದು ಕಿ.ಮೀ. ರಸ್ತೆಗೆ ಸುಮಾರು 100ಕೆಜಿಯಷ್ಟು ವ್ಯರ್ಥ ಪ್ಲಾಸ್ಟಿಕ್‌ನ್ನು ಬಳಕೆ ಮಾಡುವ ಮೂಲಕ ಬಿಟ್ಯುಮನ್(ಡಾಂಬರ್) ಉಳಿತಾಯ ಮಾಡಬಹುದು ಎಂದು ಅವರು ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿದ್ದರು.

ತರಬೇತಿಯ ನಂತರ ಪ್ರಾಯೋಗಿಕವಾಗಿ ಇಂತಹ ವ್ಯರ್ಥ ಪ್ಲಾಸ್ಟಿಕ್‌ಗಳನ್ನು ಮರುಬಳಕೆ ಮಾಡುವ ಉದ್ದೇಶದಿಂದ ಅದೇ ದಿನ ಜಿಲ್ಲೆಯಲ್ಲಿ  ಮೊದಲ ಬಾರಿಗೆ ಉಡುಪಿ ಸಮೀಪದದ ಅಲೆವೂರು ಗ್ರಾಮಪಂಚಾಯತ್ ವ್ಯಾಪಿಯಲ್ಲಿ ಪ್ರಾಯೋಗಿಕವಾಗಿ 300ಮೀ. ಉದ್ದದ ರಸ್ತೆ ನಿರ್ಮಾಣ ಮಾಡುವ ಮೂಲಕ ಇದರ ಪ್ರಾತ್ಯಕ್ಷಿಕೆಯನ್ನು ಮಾಡಲಾಗಿತ್ತು.

ಅಂದು ವ್ಯರ್ಥ ಪ್ಲಾಸ್ಟಿಕ್‌ನಿಂದ ನಿರ್ಮಿಸಿದ ಈ ರಸ್ತೆ, ಪ್ರಸ್ತುತ 3 ವರ್ಷ ಕಳೆದರೂ ಇಂದು ಕೂಡಾ ರಸ್ತೆಯಲ್ಲಿ ಒಂದೇ ಒಂದು ರಸ್ತೆಗುಂಡಿ ಕಾಣಸಿ ಕೊಂಡಿಲ್ಲ. ಪ್ಲಾಸ್ಟಿಕ್ ಬಳಸಿ ನಿರ್ಮಾಣ ಮಾಡುವ ರಸ್ತೆ ಗುಣಮಟ್ಟದಿಂದ ಕೂಡಿದ್ದು, ಬಾಳಿಕೆ ಬರುತ್ತದೆಯೇ ಎಂದು ಅನುಮಾನ  ವ್ಯಕ್ತಪಡಿಸಿದವರಿಗೆ ಸೂಕ್ತ ಉತ್ತರ ನೀಡುವಂತೆ, ರಸ್ತೆಯು ದೀರ್ಘಕಾಲ ಬಳಕೆ ಬರುವುದರ ಜೊತೆಗೆ ನಿರ್ವಹಣೆ ವೆಚ್ಚ ಕೂಡಾ ಕಡಿಮೆ ಎಂಬುದಕ್ಕೆ ಈ ರಸ್ತೆ ಸಾಕ್ಷಿಯಾಗಿದೆ.

ಅಲೆವೂರು ಮಾತ್ರವಲ್ಲದೇ ಜಿಲ್ಲೆಯ ಮರವಂತೆ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿಯೂ ಸಹ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಎರಡು ವರ್ಷಗಳ ಹಿಂದೆ  120ಮೀ. ಉದ್ದದ ರಸ್ತೆಯನ್ನು  ವ್ಯರ್ಥ ಪ್ಲಾಸ್ಟಿಕ್ ಬಳಸಿ ನಿರ್ಮಿಸಲಾಗಿದ್ದು, ಅದೂ ಸಹ ಇಂದಿಗೂ ಉತ್ತಮ ಗುಣಮಟ್ಟದಿಂದ ಕೂಡಿರುವುದನ್ನು ಖುದ್ದಾಗಿ ಕಾಣಬಹುದಾಗಿದೆ.

ಪ್ಲಾಸ್ಟಿಕ್ ಬಳಸಿ ನಿರ್ಮಿಸಿದ ರಸ್ತೆ ದೀರ್ಘಕಾಲ ಬಾಳಿಕೆ ಹಾಗೂ ಉತ್ತಮ ಗುಣಮಟ್ಟದಿಂದ ಕೂಡಿರಲಿದೆ ಎಂಬುದಕ್ಕೆ ಅಲೆವೂರಿನಲ್ಲಿ 3 ವರ್ಷಗಳ ಹಿಂದೆ ನಿರ್ಮಿಸಿರುವ ರಸ್ತೆ ಸಾಕ್ಷಿಯಾಗಿದೆ. ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆ, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗ, ಕೆಆರ್‌ಐಡಿಎಲ್ ಸೇರಿದಂತೆ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳುವ ಎಲ್ಲಾ  ಇಲಾಖೆಗಳಲ್ಲಿನ  ರಸ್ತೆ ಕಾಮಗಾರಿಗಳಲ್ಲಿ ಶೇ.10ರಷ್ಟು ಪ್ಲಾಸ್ಟಿಕ್ ತ್ಯಾಜ್ಯವನ್ನು ಕಡ್ಡಾಯವಾಗಿ ಬಳಕೆ ಮಾಡುವ ಕುರಿತಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಇದಕ್ಕೆ ಅಗತ್ಯವಿರುವ  ವ್ಯರ್ಥ ಪ್ಲಾಸ್ಟಿಕ್ ಸಂಗ್ರಹವು  ವಂಡ್ಸೆ, ಶಂಕರನಾರಾಯಣ, ಹೆಬ್ರಿ ಹಾಗೂ ನಿಟ್ಟೆ ಗ್ರಾಮಪಂಚಾಯತ್ ಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ  ಲಭ್ಯವಿದೆ. ರಸ್ತೆ ನಿರ್ಮಾಣದಲ್ಲಿ ಪ್ಲಾಸ್ಟಿಕ್ ಬಳಕೆಯಿಂದ ವ್ಯರ್ಥ ಪ್ಲಾಸ್ಟಿಕ್ ತ್ಯಾಜ್ಯದ ಸೂಕ್ತ ವಿಲೇವಾರಿ ಜೊತೆಗೆ ರಸ್ತೆ ನಿರ್ಮಾಣಕ್ಕೆ ತಗಲುವ ವೆಚ್ಚವೂ ಕಡಿಮೆಯಾಗಲಿದೆ.
-ಪ್ರಸನ್ನ ಎಚ್., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಡುಪಿ ಜಿಲ್ಲಾ ಪಂಚಾಯತ್

Similar News