×
Ad

ಸರಕಾರ ಭ್ರಷ್ಟಾಚಾರದ ಪರವಾಗಿರುವುದನ್ನು ರಾಜ್ಯಪಾಲರ ಭಾಷಣ ದೃಢೀಕರಿಸುತ್ತಿದೆ: ಸಿದ್ದರಾಮಯ್ಯ

Update: 2023-02-10 18:45 IST

ಬೆಂಗಳೂರು, ಫೆ.10: ರಾಜ್ಯ ಸರಕಾರ ಯಾವ ಸಾಧನೆಯನ್ನೂ ಮಾಡದಿರುವುದನ್ನು ಸ್ವತಃ ಒಪ್ಪಿಕೊಂಡಿರುವುದರಿಂದ ಈ ಸರಕಾರವು ತಯಾರು ಮಾಡಿದ ಈ ಭಾಷಣ ಭೂಸಾ ಅಥವಾ ತೌಡು ಕುಟ್ಟುವ ಭಾಷಣ ಇದ್ದಂತೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಶುಕ್ರವಾರ ವಿಧಾನ ಮಂಡಲ ಉಭಯ ಸದನಗಳನ್ನುದ್ದೇಶಿಸಿ ರಾಜ್ಯಪಾಲರು ಮಾಡಿರುವ ಭಾಷಣ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯಪಾಲರ ಭಾಷಣ ತೌಡು ಕುಟ್ಟಿದಂತೆ ಕಾಣಿಸುತ್ತಿದೆ. ಭತ್ತ ಕುಟ್ಟಿದರೆ ಅಕ್ಕಿ ಬರುತ್ತದೆ. ತೌಡು ಕುಟ್ಟಿದರೆ ಬರಿ ಉಬ್ಬಲು ಬರುತ್ತದೆ. ಅಲ್ಲದೆ, ಈ ಭಾಷಣ ನೋಡಿದರೆ, ಸರಕಾರ ಯಾವ ಕೆಲಸವನ್ನೂ ಮಾಡದೆ ಬರಿ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬ ಜನರ ಆರೋಪವನ್ನು ಸಾಬೀತು ಮಾಡುವಂತೆ ಇದೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯವು ಇಂದು ಮುಖ್ಯವಾಗಿ ನಿರುದ್ಯೋಗ, ಬೆಲೆ ಏರಿಕೆ, ಭ್ರಷ್ಟಾಚಾರ, ಕೋಮುವಾದ ಸಮಸ್ಯೆ, ಕೃಷಿ ಬಿಕ್ಕಟ್ಟು, ನೇಕಾರರ, ಸಮಸ್ಯೆಗಳು, ಮೀನುಗಾರರ ಸಮಸ್ಯೆಗಳು, ಹಾಗೂ ಸಣ್ಣ ಕೈಗಾರಿಕೆಗಳಿಗೆ ಒತ್ತು ಕೊಡದೆ ಇದ್ದದ್ದು ಮುಂತಾದ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದೆ.ಆದರೆ, ರಾಜ್ಯ ಸರಕಾರವು ಇಂದು ರಾಜ್ಯಪಾಲರ ಬಾಯಲ್ಲಿ ಒಂದು ವರ್ಷದ ಸಾಧನೆಗಳ ಕುರಿತು ಭಾಷಣ ಮಾಡಿಸಿದೆ ಎಂದರು.

ರಾಜಸ್ಥಾನ ಬಿಟ್ಟರೆ ಕರ್ನಾಟಕ ಎರಡನೇ ಅತಿದೊಡ್ಡ ಒಣ ಭೂಮಿ ಇರುವ ರಾಜ್ಯ. ಈಗಾಗಲೇ ತೆಲಂಗಾಣದವರು ಕೃಷ್ಣ ಮೇಲ್ದಂಡೆ ಯೋಜನೆಗೆ ಸಂಬಂಧಪಟ್ಟಂತೆ ಕರ್ನಾಟಕಕ್ಕೆ ಹಂಚಿಕೆಯಾಗಿರುವ ನೀರನ್ನು ಬಳಸಿಕೊಳ್ಳುವಲ್ಲಿ ವಿಫಲವಾಗಿದೆ. ಆದ್ದರಿಂದ ಆ ನೀರನ್ನು ತಮಗೆ ಹಂಚಿಕೆ ಮಾಡಿ ಎಂದು ಕೇಂದ್ರ ಸರಕಾರ ಹಾಗೂ ಸುಪ್ರೀಂಕೋರ್ಟ್‍ಗಳ ಮುಂದೆ ಹೋಗಿದ್ದಾರೆ. ರಾಜ್ಯದಲ್ಲಿ ಬಹಳ ಕಾಲದಿಂದ ಮಹದಾಯಿ, ಮೇಕೆದಾಟು, ಭದ್ರಾ-ಕೃಷ್ಣ ಮೇಲ್ದಂಡೆ, ತುಂಗಭದ್ರ ಅಣೆಕಟ್ಟುಗಳ ನಿರ್ಮಾಣ ಮುಂತಾದ ಅನೇಕ ನೀರಾವರಿ ಸಮಸ್ಯೆಗಳನ್ನು ಎದುರಿಸುತ್ತಿದೆ. ಆದರೆ, ಸರಕಾರ ನೀರಾವರಿ ವಿಚಾರದಲ್ಲಿ ಏನನ್ನೂ ಮಾಡಿಲ್ಲ ಎನ್ನುವುದನ್ನು ಒಪ್ಪಿಕೊಂಡಿದೆ ಎಂದು ಆಪಾದಿಸಿದರು.

ಉತ್ತರ ಕರ್ನಾಟಕದಲ್ಲಿ ಯಥೇಚ್ಚವಾಗಿ ಜಲ ಸಂಪನ್ಮೂಲದ ಲಭ್ಯತೆ ಇದ್ದರೂ ಕೊಪ್ಪಳ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಿಗೆ ಸಮರ್ಪಕವಾಗಿ ನೀರಾವರಿ ಸೌಲಭ್ಯವನ್ನು ಒದಗಿಸಲು ಈ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯಪಾಲರ ಭಾಷಣದಲ್ಲಿ ನೀರಾವರಿಯ ಕುರಿತು ಅಥವಾ ಈ ಯೋಜನೆಗಳ ಕುರಿತು ಯಾವುದೇ ಸ್ಪಷ್ಟ ಪ್ರಸ್ತಾಪವಿಲ್ಲ ಎಂದ ಅವರು, ರಾಜ್ಯದ ಆರ್ಥಿಕತೆಯನ್ನು ನಿರ್ಮಾಣ ಮಾಡುವುದರಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ಬಹಳ ದೊಡ್ಡದು. ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಎರಡೂ ವಲಯಗಳು ಸೇರಿದಂತೆ 2 ಕೋಟಿಗೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ.

ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಸರಕಾರ ನಯಾಪೈಸೆ ಕಾರ್ಯಕ್ರಮಗಳನ್ನು ರೂಪಿಸಿಲ್ಲ ಎನ್ನುವುದನ್ನು ಒಪ್ಪಿಕೊಂಡಿದೆ. ಈ ಕುರಿತು ರಾಜ್ಯಪಾಲರ ಭಾಷಣದಲ್ಲಿ ಒಂದೇ ಒಂದು ಮಾತು ಕೂಡ ಪ್ರಸ್ತಾಪವಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿ 88 ಲಕ್ಷ ಕೃಷಿ ಕುಟುಂಬಗಳಿವೆ. ಕೃಷಿಯನ್ನು ಲಾಭದಾಯಕ ಚಟುವಟಿಕೆಯನ್ನಾಗಿಸಲು ಸರಕಾರ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂಬುದು ರಾಜ್ಯಪಾಲರ ಭಾಷಣದಲ್ಲಿ ಸ್ಪಷ್ಟವಾಗಿದೆ. ಕೃಷಿಕರು ಅನುಭವಿಸುತ್ತಿರುವ ಸಂಕಷ್ಟಗಳನ್ನು ಹೋಗಲಾಡಿಸಲು ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂಬುದನ್ನು ಸರಕಾರವೇ ಒಪ್ಪಿಕೊಂಡಂತಾಗಿದೆ. ಭ್ರಷ್ಟಚಾರ ಸಮಸ್ಯೆಯನ್ನು ಹೋಗಲಾಡಿಸಲು ಸರಕಾರ ಏನು ಕ್ರಮ ಕೈಗೊಂಡಿದೆ ಎನ್ನುವ ಬಗ್ಗೆ ಒಂದೂ ಮಾತು ಪ್ರಸ್ತಪವಿಲ್ಲ. ಆದ್ದರಿಂದ ಸರಕಾರ ಭ್ರಷ್ಟಾಚಾರದ ಪರವಾಗಿರುವುದನ್ನು ರಾಜ್ಯಪಾಲರ ಭಾಷಣವು ದೃಢೀಕರಿಸುತ್ತಿದೆ ಎಂದರು.

ಇನ್ನೂ, ರಾಜ್ಯದ ಆದಾಯಕ್ಕೆ ಬೆಂಗಳೂರಿನ ಕೊಡುಗೆ ಶೇ.70 ಕ್ಕಿಂತ ಹೆಚ್ಚಿದೆ. ಆದರೆ, ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಪಟ್ಟಂತೆ ರಾಜ್ಯಪಾಲರ ಭಾಷಣದಲ್ಲಿ ಸ್ಪಷ್ಟವಾದ ಯಾವುದೇ ಕಾರ್ಯಕ್ರಮಗಳು ಇಲ್ಲ. ರಾಜ್ಯಪಾಲರು ತಮ್ಮ ಭಾಷಣದ ಪ್ಯಾರಾ ಸಂಖ್ಯೆ 39 ರಲ್ಲಿ ನಾಡಪ್ರಭು ಕೆಂಪೇಗೌಡ, ಅರ್ಕಾವತಿ, ಡಾ.ಶಿವರಾಮ ಕಾರಂತ ಬಡಾವಣೆಗಳ ಪ್ರಸ್ತಪ ಮಾಡಿದೆ. ಈ ಎಲ್ಲಾ ಬಡಾವಣೆಗಳೂ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಪ್ರಾರಂಭಗೊಂಡ ಬಡಾವಣೆಗಳಾಗಿವೆ ಎಂದು ಉಲ್ಲೇಖಿಸಿದರು.

ಅಡಕೆ, ತೆಂಗು, ಮೆಣಸು ಬೆಳೆಯುವ ಕರಾವಳಿ, ಮಲೆನಾಡಿನ ರೈತರು ಹಾಗೂ ರಾಗಿ ಭತ್ತ, ಜೋಳ, ತೊಗರಿ ಮುಂತಾದವುಗಳನ್ನು ಬೆಳೆಯುವ ಉತ್ತರ ಕರ್ನಾಟಕ ಮತ್ತು ಬಯಲು ಸೀಮೆಯ ರೈತರಿಬ್ಬರೂ ಸಂಕಷ್ಟದಲ್ಲಿದ್ದಾರೆ. ಈ ಸಂಕಷ್ಟಗಳನ್ನು ಹೋಗಲಾಡಿಸುವ ಕುರಿತು ಯಾವುದೇ ಕಾರ್ಯಕ್ರಮಗಳನ್ನು ಕೊಟ್ಟಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನಮ್ಮ ಸರಕಾರದ ಅವಧಿಯಲ್ಲಿ 5 ವರ್ಷದಲ್ಲಿ 15 ಲಕ್ಷಕ್ಕೂ ಹೆಚ್ಚು ಮನೆಗಳನ್ನು ನಿರ್ಮಾಣ ಮಾಡಿದ್ದೆವು. ಆದರೆ, ಈ ಸರಕಾರ ಕೇವಲ 4.93 ಲಕ್ಷ ಮನೆಗಳನ್ನು ಮಾತ್ರ ನಿರ್ಮಿಸಿದ್ದೇವೆ ಎಂದು ಹೇಳುವ ಮೂಲಕ ತಾನೊಂದು ವಿಫಲಗೊಂಡ ಸರಕಾರ, ಜನರ ಸಮಸ್ಯೆಗಳನ್ನು ಬಗೆಹರಿಸುವುದರಲ್ಲಿ ಸೋತ ಸರಕಾರ ಎನ್ನುವುದನ್ನು ಸರ್ಕಾರ ಸ್ವತಃ ಒಪ್ಪಿಕೊಂಡಿದೆ ಎಂದು ಅವರು ತಿಳಿಸಿದರು.

ಯುವಕರಿಗೆ ಉದ್ಯೋಗ ನೀಡುವ ಒಂದೇ ಒಂದು ಕಾರ್ಯಕ್ರಮವನ್ನೂ ನೀಡಿಲ್ಲ. ರಾಜ್ಯಪಾಲರ ಬಾಯಲ್ಲಿ ಸರಕಾರ ಹೇಳಿಸಿರುವ ಅನೇಕ ಕಾರ್ಯಕ್ರಮಗಳು ಕಾಂಗ್ರೆಸ್ ಸರಕಾರದ ಅವಧಿಯ ಕಾರ್ಯಕ್ರಮಗಳಾಗಿವೆ. ಹಾಗೇ, ತಾಂಡಾ, ಗೊಲ್ಲರ ಹಟ್ಟಿ ಕಂದಾಯ ಗ್ರಾಮಗಳನ್ನಾಗಿ ಮಾಡಿದ್ದೂ ಸಹ ನಮ್ಮ ಸರಕಾರದ ಯೋಜನೆ ಮತ್ತು ಸಾಧನೆ ಎಂದರು.

ಬೆಂಗಳೂರಿನ ಮೆಟ್ರೋ, ರಾಜ್ಯದಲ್ಲಿ ಪ್ರಾರಂಭವಾದ ಜವಳಿ ಪಾರ್ಕ್‍ಗಳು, ವಿಮಾನ ನಿಲ್ದಾಣಗಳು ಸಾಧನೆಗಳು ಎಲ್ಲವೂ ಕಾಂಗ್ರೆಸ್ ಮಾಡಿದ್ದು, ಆದರೆ, ಇದನ್ನು ಬಿಜೆಪಿ ಸರಕಾರ ತಮ್ಮ ಸಾಧನೆಗಳು ಎಂದು ಹೇಳಿಕೊಳ್ಳಲು ಹೊರಟಿರುವುದು ನಾಚಿಕೆಗೇಡು ಎಂದು ಸಿದ್ದರಾಮಯ್ಯ ಹೇಳಿದರು.

Similar News