ಯೋಜನೆಗಳನ್ನು ಫಲಾನುಭವಿಗಳಿಗೆ ಮುಟ್ಟಿಸಲು ಎಲ್ಲ ಜಿಲ್ಲೆಗಳಲ್ಲಿ ಸಮ್ಮೇಳನ: ಸಿಎಂ ಬೊಮ್ಮಾಯಿ
ಬೆಂಗಳೂರು, ಫೆ.10: ಸರಕಾರದ ಯೋಜನೆಗಳು ಸಂಪೂರ್ಣವಾಗಿ ಎಲ್ಲ ಫಲಾನುಭವಿಗಳಿಗೆ ಮುಟ್ಟಬೇಕೆಂಬ ಉದ್ದೇಶದಿಂದ ಎಲ್ಲ ಜಿಲ್ಲೆಗಳಲ್ಲಿ ಅಭಿಯಾನ ಕೈಗೊಳ್ಳಲು ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅಧಿಕಾರ ವಹಿಸಿಕೊಂಡ ಮೇಲೆ ಬಹಳಷ್ಟು ಪಾರದರ್ಶಕತೆ ಸಾಧ್ಯವಾಗಿದೆ. ಸರಕಾರದ ಕಾರ್ಯಕ್ರಮಗಳನ್ನು ಫಲಾನುಭವಿಗಳಿಗೆ ನೇರವಾಗಿ ಮುಟ್ಟಿಸಲು ಡಿಬಿಟಿ ವ್ಯವಸ್ಥೆಯಿಂದ ಮಧ್ಯವರ್ತಿಗಳ ಹಾವಳಿ ತಪ್ಪಿದ್ದು, ಜನರು ಕಚೇರಿಗಳಿಗೆ ಒಡಾಡುವುದನ್ನು ತಪ್ಪಿಸಲಾಗಿದೆ ಎಂದರು.
ಪಿಎಂ ಸ್ವನಿಧಿ, ರೈತ ವಿದ್ಯಾ ನಿಧಿ, ರೈತ ಶಕ್ತಿ ಯೋಜನೆಗಳು ಡಿಬಿಟಿ ಮುಖಾಂತರವಾಗಿ ಪಾವತಿಯಾಗುತ್ತಿದೆ. ಈ ಎಲ್ಲವು ರಾಜ್ಯ ಮತ್ತು ಕೇಂದ್ರ ಸರಕಾರದ ಫಲಾನುಭವಿಗಳಿಗೆ ನೇರವಾಗಿ ಮುಟ್ಟಲು ಹಾಗೂ ಸೌಲಭ್ಯ ವಂಚಿತರಾದವರಿಗೆ ಕಾರ್ಯಕ್ರಮ ಮುಟ್ಟಿಸಲು ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಸ್ತ್ರೀ ಶಕ್ತಿ, ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ, ಅಮೃತ ಯೋಜನೆಗಳನ್ನು ಜಾರಿಗೆ ತರಬೇಕಿದ್ದು, ಇದಕ್ಕೆ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಬಾಕಿ ಇರುವ ಫಲಾನುಭವಿಗಳನ್ನು ಗುರುತಿಸಿ ಫಲಾನುಭವಿಗಳಿಗೆ ಮುಟ್ಟಿಸುವ ಕೆಲಸವಾಗಬೇಕು. ಪ್ರತಿ ಜಿಲ್ಲೆಯಲ್ಲಿ ಜಾಗೃತಿ ಅಭಿಯಾನ ಕೈಗೊಂಡು ಒಂದು ಸಮ್ಮೇಳನ ಮಾಡುವ ಮುಖಾಂತರ ಯೋಜನೆಗಳನ್ನು ಮುಟ್ಟಿಸಲಾಗುವುದು. ಇದರಿಂದ ಅತ್ಯಂತ ತಳಸ್ತರದಲ್ಲಿವ ಜನರಿಗೆ ಮಾಹಿತಿ ತಲುಪಿದಂತಾಗುತ್ತದೆ ಎಂದು ಅವರು ಹೇಳಿದರು.
ಈ ಕುರಿತಂತೆ ಅತಿ ಶೀಘ್ರ್ರದಲ್ಲಿಯೆ ಆದೇಶ ಹೊರಬೀಳಲಿದೆ. ಅಭಿಯಾನದಿಂದ ಮಾಹಿತಿ ಇಲ್ಲದವರಿಗೂ ಮಾಹಿತಿ ಮುಟ್ಟಬೇಕು, ಸಮ್ಮೇಳನಕ್ಕೆ ಮುಂಚೆ ಅಭಿಯಾನವಾದರೆ ಜನರಿಗೆ ಮಾಹಿತಿ ದೊರೆತು ಸೌಲಭ್ಯಗಳನ್ನು ಪಡೆಯಬಹುದು. ಈ ಅಭಿಯಾನ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ವಿವರಿಸಿದರು.