ಬಿಡಿಎನಲ್ಲಿ ದೂರುಗಳ ಸುರಿಮಳೆ: ಲೋಕಾಯುಕ್ತ ಅಧಿಕಾರಿಗಳಿಂದ ಪರಿಶೀಲನೆ
Update: 2023-02-15 17:34 GMT
ಬೆಂಗಳೂರು, ಫೆ.15: ಇದೇ ಮೊದಲ ಬಾರಿಗೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಇಲ್ಲಿನ ಬಿಡಿಎ ಕಚೇರಿ ಆವರಣದಲ್ಲಿ ನಡೆಸಿದ ಸಾರ್ವಜನಿಕ ಕುಂದುಕೊರತೆ, ಅಹವಾಲು ಸಭೆಯಲ್ಲಿ ಹಲವು ದೂರುಗಳನ್ನು ಸಲ್ಲಿಕೆ ಮಾಡಲಾಗಿದೆ.
ಬುಧವಾರ ನಡೆದ ಸಭೆಯಲ್ಲಿ ಒಟ್ಟು 45ಕ್ಕೂ ಅಧಿಕ ದೂರುಗಳು ಸಾರ್ವಜನಿಕರಿಂದ ಬಂದಿದ್ದು, ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಬಿಡಿಎ ನಿವೇಶನ, ಪರಿಹಾರ, ಕೋರ್ಟಿನಲ್ಲಿ ದಾವೆ ಹೀಗೆ ವಿವಿಧ ಆರೋಪಗಳಿಗೆ ಸಂಬಂಧಿಸಿದಂತೆ ದೂರುಗಳನ್ನು ಸಲ್ಲಿಸಿದ ಸಾರ್ವಜನಿಕರು, ತಮ್ಮ ಸಮಸ್ಯೆಗಳನ್ನು ಶೀಘ್ರದಲ್ಲಿಯೇ ಬಗೆಹರಿಸುವಂತೆ ಮನವಿ ಮಾಡಿಕೊಂಡರು.
ಈ ವೇಳೆ ಪ್ರತಿಕ್ರಿಯಿಸಿದ ಲೋಕಾಯುಕ್ತ ಅಧಿಕಾರಿಯೊಬ್ಬರು, ಸಭೆಯಲ್ಲಿ ಅನೇಕರು ದೂರುಗಳನ್ನು ಸಲ್ಲಿಸಿ, ಆರೋಪಗಳನ್ನು ಮಾಡಿದ್ದಾರೆ. ಕೆಲವರು ದಾಖಲೆ ಸಮೇತ ದೂರು ನೀಡಿದ್ದಾರೆ.ಈ ಸಂಬಂಧ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.