ಹಾಸನ ಜಿಲ್ಲೆಯ 6 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಗೆಲುವು: ಕನ್ಯಾಕುಮಾರಿ ಸಂಸದ ವಿಜಯ ವಸಂತ್ ವಿಶ್ವಾಸ

Update: 2023-02-16 14:26 GMT

ಹಾಸನ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಪಡೆಯುವುದರ ಮೂಲಕ ಐತಿಹಾಸಿಕ ಜಯ ದಾಖಲಿಸಲಿದೆ ಎಂದು ಎಐಸಿಸಿ ವೀಕ್ಷಕ, ಕನ್ಯಾಕುಮಾರಿ ಸಂಸದ ವಿಜಯವಸಂತ್ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪ್ರವಾಸ ಮಾಡಿ, ಸ್ಥಳೀಯ ಮುಖಂಡರೊಂದಿಗೆ ಸಭೆ ನಡೆಸಿದ್ದೇನೆ. ಜನರೊಂದಿಗೆ ಮಾತನಾಡಿ ನಾಡಿ ಮಿಡಿತ ಅರ್ಥ ಮಾಡಿಕೊಂಡಿದ್ದೇನೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಬೇಕು ಎನ್ನುವ ಭಾವನೆ ಮತದಾರರಲ್ಲಿದೆ. ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ನಿರಂತರ ಪ್ರವಾಸದಿಂದ ಕಾಂಗ್ರೆಸ್ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ಬೇಸತ್ತಿರುವ ಜನರು ಕಾಂಗ್ರೆಸ್ ಸರ್ಕಾರ ರಚಿಸುವುದನ್ನು ಎದುರು ನೋಡುತ್ತಿದ್ದಾರೆ. ಅವರನ್ನು ಬದಲಿಸಲು ಮೋದಿ ಅವರಿಂದ ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟರು.

'ಒಂದು ಕುಟುಂಬದೊಳಗೆ ಸದಸ್ಯರ ನಡುವೆ ಅಭಿಪ್ರಾಯ, ಭೇದ ಇದ್ದೇ ಇರುತ್ತದೆ. ಅದೇ ರೀತಿ ಜಿಲ್ಲಾ ಕಾಂಗ್ರೆಸ್ ನಲ್ಲಿ ಆಕಾಂಕ್ಷಿಗಳ ನಡುವೆ ಪೈಪೋಟಿ ಕಾಣಿಸುತ್ತಿದೆ. ಅದು ಗುಂಪುಗಾರಿಕೆ ಅಲ್ಲ ' ಎಂದರು.

ಈ ಮಾಸಾಂತ್ಯದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದ್ದು, ನಂತರ ಟಿಕೆಟ್ ದೊರೆಯದ ಆಕಾಂಕ್ಷಿಗಳೂ ಒಗ್ಗೂಡಿ ಅಭ್ಯರ್ಥಿ ಪರವಾಗಿ ಕೆಲಸ ಮಾಡುತ್ತಾರೆ. ಎಲ್ಲರೊಂದಿಗೂ ನಾವು ಮಾತನಾಡುತ್ತೇವೆ. ಹಾಸನ ಜಿಲ್ಲೆಯ ಜನರು ಸ್ನೇಹಪರ ವ್ಯಕ್ತಿತ್ವ ಹೊಂದಿದ್ದಾರೆ. ಶ್ರಮಿಕರು ಸೇರಿದಂತೆ ಎಲ್ಲ ವರ್ಗದ ಜನರು ಇಲ್ಲಿದ್ದಾರೆ. ಇಲ್ಲಿ ಜೆಡಿಎಸ್, ಕಾಂಗ್ರೆಸ್ ಗೆ ಪ್ರಮುಖ ಎದುರಾಳಿಯಾಗಿದೆ. ಈ ಬಾರಿ ಜಿಲ್ಲೆಯ ಮತದಾರರು ಬದಲಾವಣೆ ಬಯಸುತ್ತಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವ ಜತೆಗೆ ಪಕ್ಷದ ವತಿಯಿಂದ ಸಮೀಕ್ಷೆಯನ್ನೂ ಕೈಗೊಳ್ಳಲಾಗಿದೆ. ಈ ಸಂಬಂಧ ಶೀಘ್ರದಲ್ಲಿಯೇ ಹೈಕಮಾಂಡ್ ಗೆ ವರದಿ ಸಲ್ಲಿಸಲಾಗುವುದು. ಪಕ್ಷ ಅದನ್ನಾಧರಿಸಿ ಜಿಲ್ಲೆಯ ಅಭ್ಯರ್ಥಿಗಳನ್ನು ನಿರ್ಧರಿಸಲಾಗುವುದು. ನಾನು ಒಂದು ವಾರ ಕಾಲ ಜಿಲ್ಲೆಯಲ್ಲಿದ್ದು, ಪಕ್ಷ ಚುನಾವಣಾ ಪೂರ್ವ ಸಿದ್ಧತೆಯ ಜವಾಬ್ದಾರಿ ನೀಡಿದೆ. ಹಾಸನ ಜಿಲ್ಲೆ ಜೆಡಿಎಸ್ ಭದ್ರಕೋಟೆ ಎಂದು ಬಿಂಬಿತವಾಗಿದೆ. ಆದರೆ ಇಲ್ಲಿ ಕಾಂಗ್ರೆಸ್ ಗೆ ಉತ್ತಮ ಬೆಂಬಲವಿದೆ. ಜೆಡಿಎಸ್ ಜೊತೆಯಿರೊ ಮತದಾರರನ್ನು ನಮ್ಮತ್ತ ಸೆಳೆಯೋದು ನಮಗೆ ಸವಾಲು ಇದೆ. ಹಾಸನ ಜಿಲ್ಲೆಯಲ್ಲಿ ಕನಿಷ್ಠ ಐದು ಸ್ಥಾನವನ್ನು ಗೆಲ್ಲೋ ನಿಟ್ಟಿನಲ್ಲಿ ಯೊಜನೆ ಸಿದ್ದಗೊಳಿಸಲಾಗಿದೆ. ರಾಜ್ಯ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ, ಭ್ರಷ್ಟಾಚಾರ ಮಿತಿ ಮೀರಿದೆ ಹಾಗಾಗಿ ಜನರು ಈಬಾರಿ ಕಾಂಗ್ರೆಸ್ ಬೆಂಬಲಿಸಲಿದ್ದಾರೆ. ಜನಸಾಮಾನ್ಯರಲ್ಲಿ ಈ ವಿಶ್ವಾಸ ಮೂಡಿಸುವುದು ನಮ್ಮ ಮುಂದಿರುವ ಪ್ರಮುಖ ಸವಾಲಾಗಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಈ.ಎಚ್. ಲಕ್ಷ್ಮಣ್, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ, ವೀಕ್ಷಕ ತಂಡದ ಸದಸ್ಯರಾದ ಅನಿಲ್ ಕುಮಾರ್, ಚಾಲ್ರ್ಸ್, ರಾಮಸ್ವಾಮಿ ಇತರರು ಉಪಸ್ಥಿತರಿದ್ದರು.

Similar News