ರಾಜ್ಯ ರಾಜಕಾರಣಕ್ಕೆ ನಾನು ಬರುವುದಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Update: 2023-02-18 11:55 GMT

ಹುಬ್ಬಳ್ಳಿ: ಪ್ರಧಾನಿ ಮೋದಿಯ ಮಂತ್ರಿಮಂಡಲದಲ್ಲಿ ಕೆಲಸ ಮಾಡುವ ಅವಕಾಶ ನನಗೆ ಸಿಕ್ಕಿದೆ. ನಾನು ರಾಜ್ಯ ರಾಜಕಾರಣದತ್ತ ಬರುವುದಿಲ್ಲ. ಹೀಗಿರುವಾಗ, ಮುಖ್ಯಮಂತ್ರಿ ಆಗುವ ಪ್ರಶ್ನೆಯೆ ಉದ್ಭವಿಸುವುದಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಅಪ್ರಬುದ್ಧ ಹೇಳಿಕೆಗಳಿಗೆಲ್ಲ ನಾನು ಪ್ರತಿಕ್ರಿಯಿಸುವುದಿಲ್ಲ. ಮೋದಿ ನೇತೃತ್ವದಲ್ಲಿ ದೇಶವು ಸಾಕಷ್ಟು ಅಭಿವೃದ್ಧಿ ಹೊಂದುತ್ತಿದೆ. ಇಡೀ ವಿಶ್ವವೆ ಇವತ್ತು ಮೋದಿ ನಾಯಕತ್ವವನ್ನು ನಿಬ್ಬೆರಗಾಗಿ ನೋಡುತ್ತಿದೆ ಎಂದರು.

ಸಿಎಂ ಬಸವರಾಜ ಬೊಮ್ಮಾಯಿ ನಿನ್ನೆ ಬಜೆಟ್ ಮಂಡನೆ ಮಾಡುವಾಗ ಕಾಂಗ್ರೆಸ್ ಶಾಸಕರು ಕಿವಿ ಮೇಲೆ ಹೂವು ಇಟ್ಟುಕೊಂಡು ಬಂದಿದ್ದರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷವನ್ನು ಈಗಾಗಲೆ ಜನ ತಿರಸ್ಕರಿಸಿದ್ದಾರೆ. ಅವರು ಇನ್ನು ಮುಂದೆ ಕಿವಿ ಮೇಲೆ ಹೂವಿಟ್ಟುಕೊಂಡೆ ಓಡಾಡಬೇಕಾಗುತ್ತದೆ ಎಂದು ವ್ಯಂಗ್ಯವಾಡಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಕುರಿತು ಸಚಿವ ಅಶ್ವತ್ಥ ನಾರಾಯಣ ನೀಡಿರುವ ಹೇಳಿಕೆ ಸಂಬಂಧ ಈಗಾಗಲೆ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಆದುದರಿಂದ, ಈ ವಿಷಯವನ್ನು ಇನ್ನು ಹೆಚ್ಚು ಬೆಳೆಸವುದರಲ್ಲಿ ಅರ್ಥವಿಲ್ಲ ಎಂದು ಪ್ರಹ್ಲಾದ್ ಜೋಶಿ ಹೇಳಿದರು.

Similar News