ಭ್ರಷ್ಟಾಚಾರದಿಂದ ಮುಕ್ತಗೊಳಿಸಿ, ಕರ್ನಾಟಕವನ್ನು ದಕ್ಷಿಣ ಭಾರತದ ನಂಬರ್ 1 ರಾಜ್ಯ ಮಾಡುತ್ತೇವೆ: ಅಮಿತ್ ಶಾ

ಬಳ್ಳಾರಿಯ ಸಂಡೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಸಮಾವೇಶ

Update: 2023-02-23 14:15 GMT

ಬಳ್ಳಾರಿ: 'ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೇಲೆ ಭರವಸೆ ಇಡಿ. ಭ್ರಷ್ಟಾಚಾರಮುಕ್ತ, ದಕ್ಷಿಣ ಭಾರತದ ನಂಬರ್ ಒನ್ ಅಭಿವೃದ್ಧಿ ಹೊಂದಿದ ರಾಜ್ಯವಾಗಿ ಕರ್ನಾಟಕವನ್ನು ಮಾಡಲಿದ್ದೇವೆ' ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ.

ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಇಂದು ವಿಜಯ ಸಂಕಲ್ಪ ಸಮಾವೇಶದ ಅಂಗವಾಗಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ''ಬಿಜೆಪಿ ಅಪಾರ ಜನಬೆಂಬಲ ಪಡೆದಿದೆ ಎಂಬುದಕ್ಕೆ ಇಲ್ಲಿ ಸೇರಿದ ಜನರೇ ಸಾಕ್ಷಿ ಎಂದ ಅವರು, ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಆಡಳಿತದಲ್ಲಿ ಭ್ರಷ್ಟಾಚಾರ ಗರಿಷ್ಠ ಪ್ರಮಾಣದಲ್ಲಿತ್ತು. ಇವರೆಡೂ ಕುಟುಂಬವಾದದ ಪಕ್ಷಗಳು. ಅವು ಜನರ ಅಭಿವೃದ್ಧಿ ಮಾಡುವುದಿಲ್ಲ'' ಎಂದು ಟೀಕಿಸಿದರು.

''ಜೆಡಿಎಸ್‍ಗೆ ನೀಡಿದ ಪ್ರತಿ ಮತವೂ ಕಾಂಗ್ರೆಸ್‍ಗೆ ಹೋಗಲಿದೆ. ಕಾಂಗ್ರೆಸ್‍ಗೆ ಮತ ಕೊಟ್ಟರೆ ಅದು ಪಕ್ಷ, ಸರಕಾರವನ್ನು ಹೈಕಮಾಂಡಿನ ಎಟಿಎಂ ಮಾಡುವ ಸಿದ್ದರಾಮಯ್ಯರಿಗೆ ಹೋಗಲಿದೆ. ಆದ್ದರಿಂದ ದೇಶದ ಒಳಿತಿಗೆ ಮತ್ತು ಅಭಿವೃದ್ಧಿಗೆ ಕೆಲಸ ಮಾಡುವ ಬಿಜೆಪಿಯನ್ನೇ ಬೆಂಬಲಿಸಿ'' ಎಂದು ವಿನಂತಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಈ ಪರಿಸರದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದರು. ಕೇಂದ್ರ- ರಾಜ್ಯದ ಜನಪರ ಯೋಜನೆಗಳನ್ನು ಗಮನಿಸಿ ಮತ ಕೊಡಿ. ಪಕ್ಷವು 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಚಿವ ಬಿ.ಶ್ರೀರಾಮುಲು ಅವರು ಈ ಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆದು ಬಿಜೆಪಿಗೆ ಅಧಿಕಾರ ಕೊಡಿ ಎಂದು ವಿನಂತಿಸಿದರು.

ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಚಿವರಾದ ಶಶಿಕಲಾ ಜೊಲ್ಲೆ, ಆನಂದ್ ಸಿಂಗ್, ಸಂಸದರಾದ ದೇವೇಂದ್ರಪ್ಪ, ಕರಡಿ ಸಂಗಣ್ಣ, ಪಕ್ಷದ ಮುಖಂಡರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಿದ್ದರು.

Similar News