ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬಂದಲ್ಲಿ ಭೋಜೇಗೌಡರನ್ನು ಮಂತ್ರಿ ಮಾಡುತ್ತೇನೆ: ಕುಮಾರಸ್ವಾಮಿ

Update: 2023-02-28 17:47 GMT

ಚಿಕ್ಕಮಗಳೂರು, ಫೆ.28: ಜಿಲ್ಲೆಯ ಮಲೆನಾಡು ಭಾಗದ ತಾಲೂಕುಗಳಾದ ಕೊಪ್ಪ, ಶೃಂಗೇರಿ, ನರಸಿಂಹರಾಜಪುರದಲ್ಲಿ ಸಂಚರಿಸಿ ಸೋಮವಾರ ಬಿಡುವು ಪಡೆದಿದ್ದ ಮಾಜಿ ಸಿಎಂ ಎಚ್ .ಡಿ.ಕುಮಾರಸ್ವಾಮಿ ನೇತೃತ್ವದ ಪಂಚರತ್ನ ಯಾತ್ರೆ ಮಂಗಳವಾರ ಚಿಕ್ಕಮಗಳೂರು ವಿಧಾನಸಭೆ ಕ್ಷೇತ್ರದಲ್ಲಿ ಮತ್ತೆ ಯಾತ್ರೆ ಮುಂದುವರಿಸಿತು.

ದೇವನೂರು ಗ್ರಾಮದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ, 'ಈ ಬಾರಿ ಜೆಡಿಎಸ್ ಸರಕಾರ ಅಧಿಕಾರಕ್ಕೆ ಬಂದರೆ ಚಿಕ್ಕಮಗಳೂರು ಜಿಲ್ಲೆಯವರಾದ ಎಸ್.ಎಲ್ .ಭೋಜೇಗೌಡರವರನ್ನು ಮಂತ್ರಿ ಮಾಡುತ್ತೇನೆ. ಹಿಂದೆ ಲಕ್ಷ್ಮಯ್ಯ ಅವರು ಧರ್ಮೇಗೌಡರನ್ನು ಮಂತ್ರಿ ಮಾಡಬೇಕು ಎಂದು ನನಗೆ ಹೇಳಿದ್ದರು. ಆಗ ಆಗಲಿಲ್ಲ. ಈ ಬಾರಿ ಸರಕಾರ ಬಂದರೆ ಭೋಜೇಗೌಡ ಅವರನ್ನು ಮಂತ್ರಿ ಮಾಡಿ ಲಕ್ಷ್ಮಯ್ಯ ಅವರಿಗೆ ಗೌರವ ಸಲ್ಲಿಸುತ್ತೇನೆ' ಎಂದು ಹೇಳಿದರು. 

'ಬಯಲು ಸೀಮೆ ಭಾಗದಲ್ಲಿ ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೆ ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾರೆ. ರಾಜ್ಯದ ಬಡವರು, ರೈತರು, ವಿದ್ಯಾರ್ಥಿಗಳು ಹಾಗೂ ಮಹಿಳೆಯರ ಕಲ್ಯಾಣಕ್ಕಾಗಿ ಪಂಚರತ್ನ ಯೋಜನೆಯನ್ನು ತರುವ ಉದ್ದೇಶದಿಂದ ಯಾತ್ರೆ ನಡೆಸಿ ಜಾಗೃತಿ ಮೂಡಿಸಲಾಗುತ್ತಿದೆ. ಜೆಡಿ ಎಸ್ ಸರಕಾರ ಅಧಿಕಾರಕ್ಕೆ ಬಂದಲ್ಲಿ ಬಡವರ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಎಲ್‌ಕೆಜಿಯಿಂದ ಪಿಯುಸಿವರೆಗೂ ಉಚಿತ ಶಿಕ್ಷಣ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಮೋದಿ ಸರಕಾರ ರೈತರ ಖಾತೆಗೆ ಎರಡು ಸಾವಿರ ಹಾಕಿದ ಮಾತ್ರಕ್ಕೆ ರೈತರ ಸಂಕಷ್ಟ ತೀರುವುದಿಲ್ಲ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬಿ.ಎಂ.ತಿಮ್ಮಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಸೇರಿದಂತೆ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

Similar News