ತಾಕತ್ತಿದ್ದರೆ ನಮ್ಮ ಅಶ್ವಮೇಧ ಕುದುರೆಯನ್ನು ಕಟ್ಟಿ ಹಾಕಿ: ವಿಪಕ್ಷಗಳಿಗೆ ಡಿ.ವಿ.ಸದಾನಂದ ಗೌಡ ಸವಾಲು

ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ

Update: 2023-03-01 12:44 GMT

ತುಮಕೂರು.ಮಾ.01:ಧರ್ಮ ಸಂಸ್ಥಾಪನಾರ್ಥವಾಗಿ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ನಡೆಯುತ್ತಿರುವ ಚುನಾವಣೆ ಎಂಬ ಆಶ್ವಮೇಧಯಾಗಕ್ಕೆ ಸುರೇಶಗೌಡ ಎಂಬ ಕುದುರೆಯನ್ನು ಬಿಟ್ಟಿದ್ದೇವೆ. ವಿರೋಧ ಪಕ್ಷಗಳಿಗೆ ತಾಕತ್ತು ಇದ್ದರೆ ಈ ಕುದುರೆಯನ್ನು ಕಟ್ಟಿ ಹಾಕಿ ಎಂದು ಮಾಜಿ ಮುಖ್ಯಂಮತ್ರಿ ಹಾಗೂ ಸಂಸದ ಡಿ.ವಿ.ಸದಾನಂದ ಗೌಡ ಸವಾಲು ಹಾಕಿದ್ದಾರೆ.

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೊನ್ನುಡಿಕೆ ಮತ್ತು ಹೆಬ್ಬೂರು ಹೋಬಳಿಗಳ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು,10 ವರ್ಷಗಳ ಕಾಲ ಕ್ಷೇತ್ರದ ಅಭಿವೃದ್ದಿ ಹೊಳೆಯನ್ನೇ ಹರಿಸಿದ ಬಿ.ಸುರೇಶಗೌಡ,2018ರ ಚುನಾವಣೆಯಲ್ಲಿ ಕಾರ್ಯಕರ್ತರು ಅತಿಯಾದ ಆತ್ಮವಿಶ್ವಾಸದಿಂದ ಕೂದಲೆಳೆಯ ಅಂತರದಲ್ಲಿ ಸೋಲು ಕಂಡಿದ್ದಾರೆ. ಆದರೆ ಈ ಬಾರಿ ಅದು ಸಾಧ್ಯವಿಲ್ಲ.ಶೇ100ಕ್ಕೆ ನೂರರಷ್ಟು ಗೆಲುವು ಖಚಿತ ಎಂದರು.

ತಮ್ಮ ಹತ್ತುವರ್ಷಗಳ ಶಾಸಕ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ದಿಗಾಗಿ 2000 ಕೋಟಿಗೂ ಅಧಿಕ ಅನುದಾನವನ್ನು ತಂದು ರಸ್ತೆ, ಚರಂಡಿ,ಸಮುದಾಯ ಭವನ, ವಿದ್ಯುತ್ ಸಂಪರ್ಕ, ಪ್ರಾಥಮಿಕ ಶಾಲೆಗಳ ಅಭಿವೃದ್ದಿ ಸೇರಿದಂತೆ ಕ್ಷೇತ್ರದ ಮೂಲಭೂತ ಸೌಕರ್ಯಗಳಿಗೆ ಹೆಚ್ಚು ಒತ್ತು ನೀಡಿದರೆ, ಈಗಿನ ಶಾಸಕರು ಕೇಂದ್ರದಿಂದ ಬಿಡುಗಡೆಯಾದ 10 ಕೋಟಿ ರೂಗಳ ಅಭಿವೃದ್ದಿ ಕಾಮಗಾರಿಯ ಗುತ್ತಿಗೆದಾರರು ಕಮಿಷನ್ ನೀಡಿಲ್ಲ ಎಂಬ ಕಾರಣಕ್ಕೆ ಕೆಲಸ ಮಾಡಲೇ ಬಿಟ್ಟಿಲ್ಲ.ಇಂತಹ ಶಾಸಕರ ಅಗತ್ಯ ಕ್ಷೇತ್ರಕ್ಕೆ ಇದೆಯೇ ಎಂಬುದನ್ನು ಮತದಾರರು ತೀರ್ಮಾನಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಪ್ರಶ್ನಿಸಿದರು.

ರಾಜ್ಯದಲ್ಲಿ ಅಧಿಕಾರದ ಆಸೆಗಾಗಿ ನಡೆಯುತ್ತಿರುವ ಜೆಡಿಎಸ್‍ನ ಪಂಚರತ್ನ ಯಾತ್ರೆ, ಪಂಚರ್ ಆಗಿದೆ.ಕಾಂಗ್ರೆಸ್‍ನ ಪ್ರಜಾದ್ವನಿಗೆ ಉಸಿರೇ ಇಲ್ಲದಂತಾಗಿದೆ.ಡಿ.ಕೆ.ಶಿ, ಸಿದ್ದರಾಮಯ್ಯ ಅವರದ್ದು ಒಂದೊಂದು ದ್ವನಿಯಾದರೆ, ಮಲ್ಲಿಕಾರ್ಜುನ ಖರ್ಗೆಅವರದೇ ಬೇರೆ ಆಲೋಚನೆಯಾಗಿದೆ.ದೇಶ, ನಾಡಿನ ಅಭಿವೃದ್ದಿ ಪರಿಕಲ್ಪನೆಯಲ್ಲಿ ದುಡಿಯುತ್ತಿರುವ ಎಕೈಕ ಪಕ್ಷವೆಂದರೆ ಅದು ಬಿಜೆಪಿ ಮಾತ್ರ.ಒಂದು ಕಾಲದಲ್ಲಿ ಹೊರದೇಶಗಳಿಂದ ಬೇಡುವ ಸ್ಥಿತಿಯಲ್ಲಿದ್ದ ಭಾರತ, ಇಂದು ಬೇರೆ ರಾಷ್ಟ್ರಗಳಿಗೆ ನೀಡುವ ಸ್ಥಿತಿಯಲ್ಲಿದೆ ಎಂದರೆ ಅದಕ್ಕೆ ಕಾರಣ ಪ್ರಧಾನಿ ನರೇಂದ್ರಮೋದಿ ಅವರ ಆಡಳಿತ ಎಂದು ಸದಾನಂದ ಗೌಡ ನುಡಿದರು.

ಅಭಿವೃದ್ಧಿ ಮತ್ತು ಒಳ್ಳೆಯ ಆಡಳಿತ ಬಿಜೆಪಿ ಪಕ್ಷದ ಎರಡು ಪ್ರಮುಖ ಸಿದ್ಧಾಂತಗಳಾಗಿದ್ದು, ದ್ವೇಷ ರಹಿತ, ಜಾತಿ, ಧರ್ಮ ರಹಿತ ಆಡಳಿತಕ್ಕೆ ಇತ್ತೀಚಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ ಸರ್ವರನ್ನು ಒಳಗೊಳ್ಳುವ 2023-24ನೇ ಸಾಲಿನ ಬಜೆಟ್ ಸಾಕ್ಷಿಯಾಗಿದೆ. ರೈತರಿಗೆ 5 ಲಕ್ಷ ರೂ ವರೆಗೆ ಬಡ್ಡಿರಹಿತ ಸಾಲ,ಭದ್ರಮೇಲ್ದಂಡೆ ಯೋಜನೆಗೆ 5300 ಕೋಟಿ ರೂ ಅನುದಾನ, ವಿದ್ಯಾಸಿರಿ ಯೋಜನೆ ವಿಸ್ತರಣೆ ನಾಡಿನ ಎಲ್ಲಾ ವರ್ಗಗಳ ಅಭಿವೃದ್ದಿಗೆ ಪೂರಕವಾಗಿವೆ.ನಾವು ಮಾತನಾಡುವುದನ್ನೇ ಕೆಲಸ ಮಾಡಿಕೊಂಡಿಲ್ಲ. ಇಂದು ನಮ್ಮ ಕೆಲಸಗಳು ಮಾತನಾಡುತ್ತಿವೆ. ಕ್ಷೇತ್ರದ ಸಮಗ್ರ ಅಭಿವೃದ್ದಿಗೋಸ್ಕರ ಬಿ.ಸುರೇಶಗೌಡರನ್ನು ಮತ್ತೊಮ್ಮೆ ಶಾಸಕರನ್ನಾಗಿ ಮಾಡಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಿ.ಸುರೇಶಗೌಡ ಮಾತನಾಡಿ,ನನ್ನ 10 ವರ್ಷಗಳ ಆಡಳಿತದಲ್ಲಿ ಕುಡಿಯುವ ನೀರು, ಸರಕಾರಿ ಶಾಲೆಗಳ ಉನ್ನತ್ತೀಕರಣ, ವಿದ್ಯುತ್ ಸ್ಥಾವರಗಳ ನಿರ್ಮಾಣ, ಹೆಬ್ಬೂರು, ಗೂಳೂರು ಏತ ನೀರಾವರಿ, ಒಂದು ಐಪಿಸೇಟ್‍ಗೆ ಒಂದು ಟಿ.ಸಿ. ಪ್ರಾಯೋಗಿಕ ಯೋಜನೆಗಳ ತಂದು ಇಡೀ ದೇಶವನ್ನು ಮಾದರಿಯಾಗಿ ಮಾಡಿದ್ದೇನೆ.ಇದಕ್ಕೆ ಸದಾನಂದಗೌಡ ಬೆಂಬಲವೂ ಇತ್ತು. ಅವರು ಮುಖ್ಯಮಂತ್ರಿಗಳಾಗಿದ್ದ ಕಾಲದಲ್ಲಿ ಕ್ಷೇತ್ರಕ್ಕೆ ನೂರಾರು ಕೋಟಿ ರೂಗಳ ಅನುದಾನ ನೀಡಿ, ಸಹಕರಿಸಿದ್ದಾರೆ ಎಂದರು.

ವೇದಿಕೆಯಲ್ಲಿ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಶಿವಪ್ರಸಾದ್,ಜಿ.ಪಂ.ಮಾಜಿ ಅಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಮಂಡಲ ಅಧ್ಯಕ್ಷ ಶಂಕರ್, ಜಿ.ಪಂ.ಮಾಜಿ ಸದಸ್ಯರಾದ ರಾಜೇಗೌಡ,ರಾಮುಸ್ವಾಮಿಗೌಡ, ಆಂದಾನಪ್ಪ,ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ನರಸಿಂಹಮೂರ್ತಿ, ಎಪಿಎಂಸಿ ಅಧ್ಯಕ್ಷ ಉಮೇಶಗೌಡ,ಬಿಜೆಪಿ ಮುಖಂಡ ಕುಮಾರ್,ತುಮುಲ್ ನಿರ್ದೇಶಕ ರೇಣುಕಾಪ್ರಸಾದ್, ಪ್ರಕಾಶ್,ಸಿದ್ದೇಗೌಡ,ವೈ.ಟಿ.ನಾಗರಾಜು, ಅರೆಕೆರೆ ರವಿ, ವಿಜಯಕುಮಾರ್, ಮಾಸ್ತಿಗೌಡ,ತಾರಾದೇವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Similar News