ಬಿಜೆಪಿಗೆ ಬೆಂಬಲ ನೀಡಿದ್ದೇನೆ, ಅದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ: ಸುಮಲತಾ ಅಂಬರೀಶ್

Update: 2023-03-01 14:25 GMT

ಮಂಡ್ಯ, ಮಾ.1: ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಪಕ್ಷ ಸೇರುವಂತೆ ಆಹ್ವಾನ ಬಂದಿದೆ. ಆದರೆ, ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಮತ್ತೊಮ್ಮೆ ಜನಾಭಿಪ್ರಾಯ ಕೇಳಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟಪಡಿಸಿದ್ದಾರೆ.

ಬುಧವಾರ ಮದ್ದೂರು ತಾಲೂಕಿನ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಿದ್ದ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಚುನಾವಣೆಗೆ ಎಷ್ಟು ದಿನವಿದೆ ಎನ್ನುವುದು ಮುಖ್ಯವಲ್ಲ. ಆದರೆ, ಅನುಕೂಲಕರ ವಾತಾವರಣ ಹೇಗಿದೆ ಎಂಬುದು ಮುಖ್ಯ ಎಂದು ಪ್ರತಿಕ್ರಿಯಿಸಿದರು.

ಕೆಲವು ಅಭಿವೃದ್ಧಿ ಕೆಲಸಗಳ ವಿಚಾರದ ಹಿನ್ನೆಲೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದೇನೆ, ಅದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ. ಬೆಂಗಳೂರು ಮೈಸೂರು ಎಕ್ಸ್‍ಪ್ರೆಸ್ ಹೈವೆ ಉದ್ಘಾಟನೆಗೆ ಪ್ರಧಾನಮಂತ್ರಿ ಬರುತ್ತಿದ್ದಾರೆ. ಸಂಸದೆಯಾಗಿ ನಾನೂ ಭಾಗವಹಿಸುತ್ತಿದ್ದೇನೆ. ಪ್ರಧಾನಿ ಅವರಿಗೆ ಕೆಲವು ಕೆಲಸಗಳ ಬಗ್ಗೆ ಮನವಿ ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.

ನನ್ನ ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಬಾರದು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ಏಕೆ ಹೇಳಿದ್ದಾರೆಯೋ ಗೊತ್ತಿಲ್ಲ. ಆದರೆ, ತಾವು ಇಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹೋಗಲು ಅಂಬರೀಶ್ ಅವರ ಕೊಡುಗೆ ಏನು ಎಂಬುದನ್ನು ಗಂಗಾಧರ್ ನೆನಪು ಮಾಡಿಕೊಳ್ಳಬೇಕು ಎಂದು ಸುಮಲತಾ ತಿರುಗೇಟು ನೀಡಿದರು.

Similar News