ನಾವು ಅಧಿಕಾರಕ್ಕೆ ಬಂದ ಕೂಡಲೇ ಆರು ತಿಂಗಳ ಟೆಂಡರ್ ಕಾಮಗಾರಿ ಪುನರ್ ಪರಿಶೀಲನೆ: ಸಿದ್ದರಾಮಯ್ಯ

Update: 2023-03-04 08:12 GMT

ಬೆಂಗಳೂರು, ಮಾ.4: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೇವೆ. ನಾವು ಅಧಿಕಾರಕ್ಕೆ ಬಂದ ತಕ್ಷಣ ಕೊನೆಯ 6 ತಿಂಗಳಿಂದ ಟೆಂಡರ್‌ ನೀಡಿರುವ ಕಾಮಗಾರಿಗಳನ್ನು ಪುನರ್‌ ಪರಿಶೀಲನೆಗೆ ಒಳಪಡಿಸುತ್ತೇವೆ. ಆದ್ದರಿಂದ ಯಾವುದೇ ಗುತ್ತಿಗೆದಾರರು ಈಗ ಲಂಚ ನೀಡಿ ಗುತ್ತಿಗೆ ಕೆಲಸ ಹಿಡಿಯಬೇಡಿ, ಕಾರಣ ನಾವು ಬಂದ ಮೇಲೆ ಆ ಎಲ್ಲಾ ಕಾಮಗಾರಿಗಳನ್ನು ರದ್ದು ಮಾಡುತ್ತೇವೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಬಿಜೆಪಿ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ಕೆಪಿಸಿಸಿ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

 ಕೇವಲ ಪ್ರಶಾಂತ್‌ ಮಾಡಾಳ್‌ ಅವರನ್ನು ಬಂಧಿಸುವುದಲ್ಲ, ಅವರ ತಂದೆ ಮಾಡಾಳ್‌ ವಿರೂಪಾಕ್ಷಪ್ಪರನ್ನು ತಕ್ಷಣ ಬಂಧಿಸಬೇಕು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ರಾಜ್ಯ ಸರ್ಕಾರದ ವಿರುದ್ಧದ ಎಲ್ಲಾ ಭ್ರಷ್ಟಾಚಾರದ ಆರೋಪಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ದಾಖಲೆ ಕೇಳುತ್ತಾರೆ, ಆದರೆ ನಮ್ಮ ಸರ್ಕಾರದ ಅವಧಿಯಲ್ಲಿ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಾಗ ಕೆ.ಜೆ.ಜಾರ್ಜ್‌ ತಪ್ಪು ಮಾಡದಿದ್ದರೂ ರಾಜೀನಾಮೆ ನೀಡಿದ್ದರು, ನಾನು ಜಾರ್ಜ್‌ ಅವರಿಗೆ ನೀವು ರಾಜೀನಾಮೆ ಕೊಡುವುದು ಬೇಡ ಎಂದು ಹೇಳಿದ್ದೆ, ಆದರೂ ಅವರು ನೈತಿಕತೆ ಆಧಾರದಲ್ಲಿ ರಾಜೀನಾಮೆ ನೀಡಿದ್ದರು. ದೇವೇಗೌಡರು ನಮ್ಮ ವಿರುದ್ಧ ಒಂದಂಕಿ ಲಾಟರಿ ಆರೋಪ ಮಾಡಿದಾಗ ಕೂಡಲೇ ಸುದ್ದಿಗೋಷ್ಠಿ ಕರೆದು ಅದನ್ನು ಸಿಬಿಐ ಗೆ ವಹಿಸಿದ್ದೆ, ಪರೇಶ್‌ ಮೇಸ್ತಾ ಎಂಬ ಯುವಕ ಕಾಲುಜಾರಿ ಬಿದ್ದು ಮೃತಪಟ್ಟಾಗ ಅದನ್ನು ಕೊಲೆ ಎಂದು ದೊಂಬಿ, ಗಲಾಟೆ ಎಬ್ಬಿಸಿದರು, ಅದನ್ನು ಕೂಡ ಸಿಬಿಐ ತನಿಖೆಗೆ ವಹಿಸಿದ್ದೆ. ಈ ಯಾವುದೇ ಪ್ರಕರಣದಲ್ಲಿ ನಾವು ಬಿಜೆಪಿಯವರಿಂದ ದಾಖಲೆ ಕೇಳಿಲ್ಲ, ನಮ್ಮ ಸರ್ಕಾರದ ಅವಧಿಯಲ್ಲಿ ಒಟ್ಟು 8 ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿದ್ದೆ, ಇಂದು ಆ ಎಲ್ಲಾ ಪ್ರಕರಣಗಳಲ್ಲಿ ಸಿಬಿಐ ಬಿ ರಿಪೋರ್ಟ್‌ ನೀಡಿದೆ. ನಮ್ಮ ಮೇಲಿನ ಎಲ್ಲಾ ಆರೋಪಗಳು ಸುಳ್ಳು ಎಂದು ಸಾಬೀತಾಗಿದೆ. ಈ ಬಸವರಾಜ ಬೊಮ್ಮಾಯಿಗೆ ಮಾನ ಮರ್ಯಾದೆ ಇದೆಯಾ? ಅಧಿಕಾರಕ್ಕೆ ಅಂಟಿಕೊಂಡು ಕೂತಿದ್ದಾರೆ. ಒಂದನ್ನಾದರೂ ತನಿಖೆ ಮಾಡಿಸಿದ್ರಾ? ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿಕೊಂಡು ಸಚಿವರು, ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು ಇಂತಿಷ್ಟು ಲಂಚ ಕಲೆಕ್ಷನ್ ಮಾಡಿಕೊಡಬೇಕು ಎಂದು ನಿಗದಿ ಮಾಡಿದ್ದಾರೆ. ಅವರಿಗೆ ಈ ಬಾರಿ ಜಾತಿ, ಧರ್ಮಗಳ ಆಧಾರದಲ್ಲಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂಬುದು ಅರಿವಾಗಿದೆ. ಮುಂದಿನ ಚುನಾವಣೆಯಲ್ಲಿ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲಲು ಕನಿಷ್ಠ 100 ಕೋಟಿ ರೂ. ಖರ್ಚು ಮಾಡಿದರೂ ಆಶ್ಚರ್ಯ ಇಲ್ಲ ಎಂದರು.

ಸಿದ್ದರಾಮಯ್ಯ ಅವರ ಸರ್ಕಾರ ಎಐಸಿಸಿಗೆ ಎಟಿಎಂ ಆಗಿತ್ತು ಎಂದು ಅಮಿತ್‌ ಶಾ ಅವರು ನಿನ್ನೆ ಆರೋಪ ಮಾಡಿದ್ದಾರೆ, ಇದಕ್ಕೇನು ಹೇಳ್ತೀರಿ ಶಾ? ಗಡಿಪಾರಾಗಿದ್ದ, ಜೈಲಿಗೆ ಹೋಗಿದ್ದ ಶಾ ಅವರಿಂದ ಪಾಠ ಕಲಿಯಬೇಕ ನಾವು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

Similar News