ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ: ರೈತರಿಗೆ ಸಿಎಂ ಬೊಮ್ಮಾಯಿ ಭರವಸೆ

Update: 2023-03-08 17:43 GMT

ಬೆಂಗಳೂರು, ಮಾ. 8: ‘ಬೇಸಿಗೆಯಲ್ಲಿ ಬೆಳೆಗಳಿಗೆ ನೀರು ಹರಿಸಲು ವಿದ್ಯುತ್ ಸಮಸ್ಯೆಯಾಗದಂತೆ ರಾಜ್ಯ ಸರ್ಕಾರ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ರೈತರ ನಿಯೋಗದೊಂದಿಗೆ ರೈತರ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿದ ಬಳಿಕ ಮಾತನಾಡಿದ ಅವರು, ವಿದ್ಯುತ್ ಕೊರತೆ ಉಂಟಾದಲ್ಲಿ ಹೊರ ರಾಜ್ಯಗಳಿಂದ ಪೂರೈಕೆ ಮಾಡುವ ಕುರಿತು ಚಿಂತನೆ ಮಾಡಲಾಗುವುದು. ಅಲ್ಲದೆ ರೈತರ ಪಂಪ್‍ಸೆಟ್‍ಗೆ ನಿರಂತರ ಏಳು ತಾಸು 3 ಫೇಸ್ ವಿದ್ಯುತ್ ಪೂರೈಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡುವದು ಎಂದು ತಿಳಿಸಿದರು.

ರಾಜ್ಯದ ವಿವಿಧೆಡೆ ಕೆಐಎಡಿಬಿಯು ಭೂಸ್ವಾಧೀನ ಪಡಿಸಿಕೊಳ್ಳುವ ಸಂದರ್ಭದಲ್ಲಿ ಜಮೀನು ಕಳೆದುಕೊಂಡವರಿಗೆ ಅಲ್ಲಿ ಸ್ಥಾಪನೆಯಾಗುವ ಉದ್ಯಮಗಳಲ್ಲಿ ಉದ್ಯೋಗ ಕೊಡಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿ ರಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಸರಕಾರವೇ ನಡೆಸಲು ನಿರ್ಧರಿಸಿ, ಚಾಲನೆಯೂ ನೀಡಲಾಗಿದೆ. ಮುಂದಿನ ಹಣಕಾಸು ವರ್ಷದಲ್ಲಿ ಇನಷ್ಟು ಸಶಕ್ತಗೊಳಿಸಲಾಗುವುದು. ಕಬ್ಬಿಗೆ ಎಸ್‍ಎಪಿ ನೀಡುವ ಕುರಿತಂತೆ ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಭೆಯಲ್ಲಿ ರೈತ ಮುಖಂಡ ಬಡಗಲಪುರ ನಾಗೇಂದ್ರ, ಸಚಿವರಾದ ಗೋಪಾಲಯ್ಯ, ವಿ.ಸೋಮಣ್ಣ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಕೃಷಿ ಇಲಾಖೆ ಕಾರ್ಯದರ್ಶಿ ಶಿವಯೋಗಿ ಕಳಸದ ಹಾಜರಿದ್ದರು.

Similar News