ಕೇಂದ್ರ-ರಾಜ್ಯ ಸರಕಾರಗಳ ಯೋಜನೆ ಅನುಷ್ಠಾನದಲ್ಲಿ ಉಡುಪಿ ಜಿಲ್ಲೆ ಶೇ.98ರಷ್ಟು ಸಾಧನೆ: ಸಚಿವ ಎಸ್.ಅಂಗಾರ
"ಸವಲತ್ತು ವಿತರಣೆಯಲ್ಲಿ ಗುರಿ ಸಾಧನೆ"
ಉಡುಪಿ, ಮಾ.10: ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿವಿಧ ಯೋಜನೆಗಳ ಅನುಷ್ಠಾನ ಹಾಗೂ ಯೋಜನೆಗಳ ಸವಲತ್ತುಗಳನ್ನು ಫಲಾನುಭವಿಗಳಿಗೆ ತಲುಪಿಸುವಲ್ಲಿ ಉಡುಪಿ ಜಿಲ್ಲೆ ಶೇ.98ರಷ್ಟು ಸಾಧನೆಯನ್ನು ಮಾಡಿದೆ ಎಂದು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಎಸ್. ಅಂಗಾರ ಹೇಳಿದ್ದಾರೆ.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ಗಳ ವತಿಯಿಂದ ಶುಕ್ರವಾರ ಕಟಪಾಡಿ ಮೈದಾನದಲ್ಲಿ ಆಯೋಜಿಸ ಲಾದ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಜಿಲ್ಲೆಯ ಶೇ.98ರಷ್ಟು ಮಂದಿಗೆ ಯೋಜನೆಗಳನ್ನು ತಲುಪಿಸಲಾಗಿದೆ. ಮಾರ್ಚ್ ತಿಂಗಳ ಒಳಗೆ ಸಂಪೂರ್ಣ ಗುರಿ ಸಾಧಿಸುವ ವಿಶ್ವಾಸವಿದೆ ಎಂದ ಅವರು, ಎಲ್ಲಾ ಪರಿಸ್ಥಿತಿಗಳಲ್ಲೂ ರಾಜ್ಯ ಸರಕಾರ ದಿಟ್ಟ ಆಡಳಿತದ ಮೂಲಕ ಅಭಿವೃದ್ಧಿಗೆ ಆದ್ಯತೆ ನೀಡಿದೆ. ಕೇಂದ್ರ ಸರಕಾರವೂ ದೇಶದ ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ ಜನತೆಯ ಹಿತದೃಷ್ಟಿಯಿಂದ, ಭವಿಷ್ಯದ ದೃಷ್ಚಿಯಿಂದ ಆಡಳಿತ ನಡೆಸುತ್ತಿದೆ ಎಂದರು.
ಜಿಲ್ಲೆಯಲ್ಲಿ ಮಾತೃವಂದನಾ ಯೋಜನೆಯಡಿ 38,915 ಫಲಾನುಭವಿ ಗರ್ಭಿಣಿಯರಿಗೆ 17.14 ಕೋಟಿರೂ. ನೀಡಲಾಗಿದ್ದು, ಈ ಮೂಲಕ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿ ಪ್ರತೀ ಮನೆಗೆ ಶುದ್ಧಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಇದುವರೆಗೆ 1,78,265 ಮನೆಗಳಿಗೆ ನಳ್ಳಿ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ಇದಕ್ಕಾಗಿ 269 ಕೋಟಿ ರೂ.ವೆಚ್ಚ ಮಾಡಲಾಗಿದ್ದು, 7,31,918 ಮಂದಿ ಕುಡಿಯುವ ನೀರಿನ ಸೌಲಭ್ಯ ಪಡೆದಿದ್ದಾರೆ ಎಂದು ಅಂಗಾರ ವಿವರಿಸಿದರು.
ಮೀನುಗಾರರ ಅನುಕೂಲಕ್ಕಾಗಿ ಸಫ್ಟಂಬರ್ನಿಂದ ಎಲ್ಲಾ 8030 ನಾಡದೋಣಿಗಳಿಗೆ 10 ತಿಂಗಳ ಕಾಲ ತಲಾ 300 ಲೀ.ಸೀಮೆಎಣ್ಣೆ ಹಾಗೂ ಯಾಂತ್ರೀಕೃತ ಬೋಟುಗಳಿಗೆ ಒಟ್ಟು 2 ಲಕ್ಷ ಕಿ.ಲೋ. ಲೀಟರ್ ಡೀಸೆಲ್ ವಿತರಿಸಲಾಗುವುದು. ಮೀನಿನ ಉತ್ಪಾದನೆಯಲ್ಲಿ ರಾಜ್ಯ ದೇಶದಲ್ಲೇ 3ನೇ ಸ್ಥಾನದಲ್ಲಿದೆ ಎಂದು ಮೀನುಗಾರಿಕಾ ಸಚಿವರು ನುಡಿದರು.
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಾರ್ವಜನಿ ಕರಿಗೆ ಮೂಲಭೂತ ಸೌಕರ್ಯಗಳನ್ನು ಮನೆಮನೆಗೆ ತಲುಪಿಸಲು ಆದ್ಯತೆ ನೀಡಿವೆ. ಪ್ರತೀ ಮನೆಯಲ್ಲಿ ಶೌಚಾಲಯಗಳ ನಿರ್ಮಾಣ, ಮನೆ ಮನೆಗೆ ಶುದ್ಧ ಕುಡಿಯವ ನೀರಿನ ಪೂರೈಕೆ, ಕೋವಿಡ್ ಸಂದರ್ಭದಲ್ಲಿ 240 ಕೋಟಿ ಗೂ ಅಧಿಕ ಉಚಿತ ಲಸಿಕೆ ವಿತರಣೆ ಮಾಡಲಾಗಿದೆ ಎಂದರು.
ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆ, ಜನೌಷಧಿ ಕೇಂದ್ರಗಳ ಮೂಲಕ ಅತ್ಯಂತ ಕಡಿಮೆ ದರದಲ್ಲಿ ಔಷಧಗಳ ಪೂರೈಕೆ ಹಾಗೂ ವಸತಿ ಸೌಲಭ್ಯಗಳನ್ನು ಒದಗಿಸುವ ಮೂಲಕ ಎಲ್ಲಾ ಸಮುದಾಯಗಳ ಜನರ ಅಭಿವೃದ್ಧಿಗೆ ಕಾರ್ಯ ನಿರ್ವಹಿಸುತ್ತಿದೆ. ಜನರು ಸರಕಾರದ ಎಲ್ಲಾ ಯೋಜನೆಗಳ ಪ್ರಯೋಜನವನ್ನು ಪಡೆಯುವಂತೆ ತಿಳಿಸಿದರು.
ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಮಾತನಾಡಿ, ರಾಜ್ಯದ ಡಬಲ್ ಇಂಜಿನ್ ಸರಕಾರದಿಂದ ನಾಗರಿಕರಿಗೆ ಉತ್ತಮ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ. ಜಿಲ್ಲೆಯಲ್ಲಿ 7475 ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ 51 ಕೋಟಿ ರೂ.ಗಳನ್ನು ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ನೀಡಲಾಗಿದೆ. ಪಿಎಂ ಕಿಸಾನ್ ಯೋಜನೆಯಡಿ ಜಿಲ್ಲೆಯ 1,53,000 ರೈತರಿಗೆ ತಲಾ 10,000ರೂ.ಗಳನ್ನು ನೀಡಲಾಗಿದೆ. 4 ಹೊಸ ತಾಲೂಕುಗಳಲ್ಲಿ ನೂತನ ತಾಲೂಕು ಆಡಳಿತ ಸೌಧಗಳನ್ನು ನಿರ್ಮಿಸಿ ಆಡಳಿತ ಯಂತ್ರವನ್ನು ಚುರುಕುಗೊಳಿಸಲಾಗಿದೆ ಎಂದರು.
ಪಶ್ಚಿಮ ವಾಹಿನಿ ಯೋಜನೆಯ ಮೂಲಕ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಿ ಅಂತರ್ಜಲ ವೃದ್ಧಿಸುವ ಮೂಲಕ ಕೃಷಿ ಚಟುವಟಿಕೆಗಳಿಗೆ ನೆರವು ನೀಡಲಾಗಿದೆ. ಜಿಲ್ಲೆಯ ಬಹುಕಾಲದ ಡೀಮ್ಡ್ ಫಾರೆಸ್ಟ್ ಸಮಸ್ಯೆಯನ್ನು ಬಗೆಹರಿಸಿ ಜಿಲ್ಲೆಯಲ್ಲಿ 35,000 ಎಕ್ರೆ ಜಮೀನನ್ನು ಮತ್ತೆ ಕಂದಾಯ ಇಲಾಖೆಗೆ ನೀಡುವ ಮೂಲಕ ಸಾವಿರಾರು ಮಂದಿಗೆ ಹಕ್ಕುಪತ್ರ ವಿತರಿಸಲು ಸಾಧ್ಯವಾಗಿದೆ ಎಂದರು.
ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಉಡುಪಿ ಶಾಸಕ ರಘುಪತಿ ಭಟ್, ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿ. ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ಕಟಪಾಡಿ ಗ್ರಾಪಂ ಅಧ್ಯಕ್ಷೆ ಇಂದಿರಾ ಎಸ್. ಆಚಾರ್ಯ, ಪ್ರೊಬೇಷನರಿ ಐಎಎಸ್ ಅಧಿಕಾರಿ ಯತೀಶ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ಎಎಸ್ಪಿ ಸಿದ್ದಲಿಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು.
ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಸ್ವಾಗತಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಷನ್ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.