ಕಾನ್ಪುರ: ಗುಡಿಸಲಿಗೆ ಬೆಂಕಿ, ಮೂವರು ಮಕ್ಕಳು ಸೇರಿದಂತೆ ಐವರು ಸಜೀವ ದಹನ

Update: 2023-03-12 05:02 GMT

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರ ದೇಹತ್‌ನಲ್ಲಿ ರವಿವಾರ ಗುಡಿಸಲೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಐವರು ಸಜೀವ ದಹನಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರೂರಾ ಪೊಲೀಸ್ ಠಾಣಾ ವ್ಯಾಪ್ತಿಯ ಹರ್ಮೌ ಬಂಜಾರದೇರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಸತೀಶ್ ಕುಮಾರ್, ಅವರ ಪತ್ನಿ ಕಾಜಲ್ ಹಾಗೂ ಅವರ ಮೂವರು ಮಕ್ಕಳು ಮಲಗಿದ್ದಾಗ ಇದ್ದಕ್ಕಿದ್ದಂತೆ ಗುಡಿಸಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಅವರೆಲ್ಲರೂ ಬೆಂಕಿಯಲ್ಲಿ ಸಜೀವ ದಹನವಾಗಿದ್ದರು.

ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಯಂತ್ರಗಳು ಗ್ರಾಮಕ್ಕೆ ಧಾವಿಸಿದರೂ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ.

ಘಟನೆಯಲ್ಲಿ ಬೆಂಕಿ ನಂದಿಸಲು ಯತ್ನಿಸಿದ ಸತೀಶ್ ಅವರ ತಾಯಿಗೂ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಹಿತಿ ಪಡೆದ ಜಿಲ್ಲಾ ಮ್ಯಾಜಿಸ್ಟ್ರೇಟ್, ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮತ್ತು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.

ಬೆಂಕಿಯ ಕಾರಣವನ್ನು ಕಂಡುಹಿಡಿಯಲು ವಿಧಿವಿಜ್ಞಾನ ತಂಡ ಮತ್ತು ಶ್ವಾನದಳಕ್ಕೆ ಆಹ್ವಾನ ನೀಡಲಾಗಿದೆ.

Similar News