ಶಿಕ್ಷಣ ಸಚಿವರ ರಾಜೀನಾಮೆಗೆ ಸಿಪಿಐ ಒತ್ತಾಯ
Update: 2023-03-12 12:57 GMT
ಮಂಗಳೂರು: ಕೇಂದ್ರ ಹಾಗೂ ರಾಜ್ಯ ಸರಕಾರಗಳು ದೇಶದ ಶಿಕ್ಷಣ ನೀತಿಗಳನ್ನು ಯದ್ವಾತದ್ವ ಬದಲಾಯಿಸಲು ಹೊರಟ ಕಾರಣ ಶಿಕ್ಷಣ ಕ್ಷೇತ್ರದಲ್ಲಿ ಗೊಂದಲ ಸೃಷ್ಟಿಯಾಗಿದೆ. ಹಾಗಾಗಿ ತಕ್ಷಣ ಶಿಕ್ಷಣ ಸಚಿವರು ರಾಜೀನಾಮೆ ಸಲ್ಲಿಸಬೇಕು ಎಂದು ದ.ಕ. ಮತ್ತು ಉಡುಪಿ ಜಿಲ್ಲಾ ಸಿಪಿಐ ಕಾರ್ಯದರ್ಶಿ ಬಿ. ಶೇಖರ್ ಒತ್ತಾಯಿಸಿದ್ದಾರೆ.
ಕೇಂದ್ರದ ಶಿಕ್ಷಣ ನೀತಿಯನ್ನು ಅನುಸರಿಸುತ್ತಿರುವ ರಾಜ್ಯ ಸರಕಾರ ಇನ್ನೊಂದು ಹೆಜ್ಜೆ ಮುಂದೆ ಹೋಗಿ 5ನೇ ಮತ್ತು 8ನೇ ತರಗತಿ ದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ಎಂದು ಘೋಷಿಸಿ ವಿದ್ಯಾರ್ಥಿಗಳನ್ನು ಗೊಂದಲಕ್ಕೀಡು ಮಾಡಿತ್ತು. ಸರಕಾರದ ಈ ಅನಗತ್ಯ ಹಾಗೂ ಅವೈಜ್ಞಾನಿಕ ಕ್ರಮವನ್ನು ಹೈಕೋರ್ಟ್ ರದ್ದುಗೊಳಿಸಿರುವುದು ಸ್ವಾಗತಾರ್ಹ ಎಂದು ಶೇಖರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.