ಪ್ರಚೋದನಾಕಾರಿ ಭಾಷಣ ಆರೋಪ: ಕೆ.ಎಸ್.ಈಶ್ವರಪ್ಪ ವಿರುದ್ಧ ಗೋಣಿಕೊಪ್ಪಲು ಪೊಲೀಸ್ ಠಾಣೆಗೆ ದೂರು

Update: 2023-03-14 12:37 GMT

ಮಡಿಕೇರಿ ಮಾ.14 : ಇತ್ತೀಚೆಗೆ ಗೋಣಿಕೊಪ್ಪಲಿನಲ್ಲಿ ನಡೆದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಮಾವೇಶದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಜಾತ್ಯತೀತ ಜನತಾದಳದ ಕೊಡಗು ಜಿಲ್ಲಾ ಘಟಕ ದೂರು ನೀಡಿದೆ.

ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರು ಗೋಣಿಕೊಪ್ಪಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈಶ್ವರಪ್ಪ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. 

ಒಂದು ಸಮುದಾಯದ ಧಾರ್ಮಿಕ ಆಚರಣೆ ಕುರಿತು ಅವಹೇಳನಕಾರಿ ಭಾಷಣ ಮಾಡುವ ಮೂಲಕ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಕೀಳು ಮಟ್ಟದ ರಾಜಕಾರಣವನ್ನು ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿದರು.

ಮತ್ತೊಂದೆಡೆ ವಿಜಯ ಸಂಕಲ್ಪ ಯಾತ್ರೆಯ ಸಂದರ್ಭ ಬಿಜೆಪಿ ಕಟೌಟ್ ಗಳನ್ನು ಅಳವಡಿವಾಗ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಪ್ರಕರಣದ ಬಗ್ಗೆಯೂ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. 

ಈ ಸಂದರ್ಭದಲ್ಲಿ ಜೆಡಿಎಸ್ ಪ್ರಮುಖರು ಹಾಗೂ ಕಾರ್ಯಕರ್ತರು ಹಾಜರಿದ್ದರು.

Similar News