ಘಟಪ್ರಭಾ ದಡದಲ್ಲಿ 108 ಅಡಿ ಎತ್ತರದ ಬಸವಣ್ಣ ಪ್ರತಿಮೆ ಸ್ಥಾಪನೆ: ಸಿಎಂ ಬೊಮ್ಮಾಯಿ

Update: 2023-03-15 13:49 GMT

ಬೆಳಗಾವಿ, ಮಾ.15: ಘಟಪ್ರಭಾ ದಡದಲ್ಲಿ 108 ಅಡಿ ಎತ್ತರದ ಭವ್ಯವಾದ ಬಸವಣ್ಣನ ಪ್ರತಿಮೆಯನ್ನು ಸ್ಥಾಪಿಸುವ ಬಗ್ಗೆ ಸೂಕ್ತ ಆದೇಶ ನೀಡಲಾಗುವುದು. ಈ ಪ್ರದೇಶವನ್ನು ವಿಶ್ವಮಟ್ಟದ  ಪ್ರವಾಸಿ ತಾಣವಾಗಿಸುವ ಧ್ಯೇಯ ಸರಕಾರದ್ದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬುಧವಾರ ನಗರದ ಬಸವೇಶ್ವರ ವೃತ್ತದ ಸಮೀಪದ ತಿನಿಸುಕಟ್ಟೆ ಬಳಿ ಶ್ರೀ ಬಸವೇಶ್ವರ ಪ್ರತಿಮೆ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜಾ ಕಾರ್ಯವನ್ನು ನೆರವೇರಿಸಿ ಅವರು ಮಾತನಾಡಿದರು.

ಬೆಳಗಾವಿಯಲ್ಲಿ ಬಸವೇಶ್ವರರ ಪ್ರತಿಮೆ ಪ್ರತಿಷ್ಠಾಪಿಸಿರುವುದು ಅತ್ಯಂತ ಸಂತೋಷದ ಸಂಗತಿ. ಬಸವಣ್ಣನವರ ವಿಚಾರಧಾರೆಗಳು ನಮ್ಮೆಲ್ಲರ ಬದುಕಿನಲ್ಲಿ ಹಾಸುಹೊಕ್ಕಾಗಿದೆ. 12ನೆ ಶತಮಾನದಲ್ಲಿ ಬಸವಣ್ಣನವರು ಸನ್ಮಾರ್ಗವನ್ನು ತೋರಿದ್ದಾರೆ. ವಿಶ್ವದ ಮೊದಲ ಸಂಸತ್ತು ಎಂದೆ ಕರೆಸಿಕೊಳ್ಳುವ ಅನುಭವ ಮಂಟಪ ಸ್ಥಾಪಿಸಿದರು ಎಂದು ಅವರು ಹೇಳಿದರು.

ಅನುಭವ ಮಂಟಪದಲ್ಲಿ ಚರ್ಚಿಸಲಾಗುತ್ತಿದ್ದ ಎಲ್ಲ ವಿಷಯಗಳು ಇಂದಿಗೂ ಪ್ರಸ್ತುತ.  ಅಸಮಾನತೆ, ಲಿಂಗಭೇದ, ಮೂಢನಂಬಿಕೆ, ಅನಿಷ್ಟ ಪದ್ಧತಿಗಳನ್ನು ವಿರೋಧಿಸಿದ್ದರು. ಈ ವಿಷಯಗಳ ಬಗ್ಗೆ ಸಮಾಜದಲ್ಲಿ ಸ್ಪಷ್ಟತೆ ದೊರೆಯುವ ತನಕ ಬಸವಣ್ಣನವರೂ ಪ್ರಸ್ತುತರಾಗಿಯೆ ಇರುತ್ತಾರೆ. ಬಸವಣ್ಣನವರ ತತ್ವಾದರ್ಶಗಳನ್ನು ಪಾಲಿಸುವ ಕೆಲಸವಾಗಬೇಕು ಎಂದು ಮುಖ್ಯಮಂತ್ರಿ ಹೇಳಿದರು.

ನಮ್ಮ ದೇಶಕ್ಕೆ ಚರಿತ್ರೆ ಇದೆ, ಚಾರಿತ್ರ್ಯ ಬೇಕಾಗಿದೆ, ಸಂಘರ್ಷವಿದೆ, ಸಮನ್ವಯ ಬೇಕಾಗಿದೆ.  ಸಾಮಾಜಿಕ ಪರಿವರ್ತನೆಯಾಗುವಂತಹ, ವೈಚಾರಿಕವಾಗಿ  ಮುನ್ನಡೆಯಲು ಬಸವ ತತ್ವಗಳು ಪ್ರೇರಣೆ ನೀಡಲಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಸಂದರ್ಭದಲ್ಲಿ ಕೆ.ಎಲ್.ಇ ಸಂಸ್ಥೆಗಳ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್,  ಅಭಯ್ ಪಾಟೀಲ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Similar News