ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ, ಯಾವುದೇ ಕಾರಣಕ್ಕೂ ಮುಷ್ಕರ ನಡೆಯಲ್ಲ: ಸಚಿವ ಶ್ರೀರಾಮುಲು

Update: 2023-03-15 15:43 GMT

ಬೆಂಗಳೂರು, ಮಾ.14: ಯಾವುದೇ ಕಾರಣಕ್ಕೂ ಸಾರಿಗೆ ನೌಕರರು ಮುಷ್ಕರ ಮಾಡುವುದಿಲ್ಲ. ಸಾರಿಗೆ ಸಿಬ್ಬಂದಿಗಳೊಂದಿಗೆ ಈಗಾಗಲೇ ಮಾತುಕತೆ ನಡೆಸಿದ್ದು, ಅವರ ವೇತನ ಪರಿಷ್ಕರಣೆ ಬಗ್ಗೆ ಶೀಘ್ರದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಮಾ.21ರಿಂದ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆಕೊಟ್ಟಿರುವ ಬಗ್ಗೆ ಬಳ್ಳಾರಿಯಲ್ಲಿ ಬುಧವಾರ ಪ್ರತಿಕ್ರಿಯಿಸಿದ ಅವರು, ವೇತನ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಅವರನ್ನು ಕರೆದು ಮಾತನಾಡಿದ್ದೇನೆ. ಹಣಕಾಸಿನ ಇತಿಮಿತಿಯಲ್ಲಿ ಒಂದಷ್ಟು ವೇತನ ಹೆಚ್ಚಳ ಮಾಡ್ತೇನೆ ಎಂದು ಭರವಸೆ ನೀಡಿದ್ದೆ. ಆದರೆ, ಅದಕ್ಕೆ ಅವರು ಒಪ್ಪಿಲ್ಲ. ಈ ಕುರಿತು ಮುಖ್ಯಮಂತ್ರಿ ಜೊತೆಗೆ ಮಾತನಾಡಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

ಸಾರಿಗೆ ನೌಕರರ ಫೆಡರೇಶನ್ ಪದಾಧಿಕಾರಿಗಳೊಂದಿಗೆ ಮಾತನಾಡಲು ಕೆಎಸ್ಸಾರ್ಟಿಸಿ ಎಂಡಿ ಅನ್ಬುಕುಮಾರ್ ಅವರಿಗೆ ಈಗಾಗಲೇ ಸೂಚಿಸಿದ್ದೇನೆ. ಸಾರಿಗೆ ನೌಕರರನ್ನು ಮನವೊಲಿಸಲು ಸೂಚನೆ ನೀಡಿದ್ದೇನೆ. ಸಾರಿಗೆ ಸಿಬ್ಬಂದಿಗಳ ವೇತನವನ್ನು ಪರಿಷ್ಕರಣೆ ಮಾಡುವುದು ಖಚಿತ. ಆದರೆ, ಹಣಕಾಸಿನ ಸ್ಥಿತಿಗತಿ ನೋಡಿಕೊಂಡು ಸ್ಪಲ್ಪ ಮಟ್ಟಿನ ಹೆಚ್ಚಳ ಮಾಡಲಾಗುತ್ತದೆ ಎಂದು ಅವರು ಹೇಳಿದರು.

ಸಾರಿಗೆ ನೌಕರರ ಮುಷ್ಕರದ ಹಿಂದೆ ಯಾರ ಕೈವಾಡವೂ ಇಲ್ಲ. ಸಾರಿಗೆ ನೌಕರರಿಗೆ ತೃಪ್ತಿಯಾಗೋ ರೀತಿ ಕೆಲಸ ಮಾಡುತ್ತೇವೆ. ನೌಕರರ ಮರು ನೇಮಕ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಿಎಂಟಿಸಿಯಲ್ಲಿ ಕ್ರಿಮಿನಲ್ ಹಿನ್ನೆಲೆ ಇದ್ದವರು ಮಾತ್ರ ಕೆಲವರು ಉಳಿದಿದ್ದಾರೆ. ಅವರನ್ನು ಕೂಡ ಕೆಲಸಕ್ಕೆ ತೆಗೆದುಕೊಳ್ಳುತ್ತೇವೆ ಎಂದರು.

ನೌಕರರ ಮುಷ್ಕರದ ಹಿನ್ನೆಲೆ ಮಾ.20ರ ರಾತ್ರಿಯಿಂದಲೇ ಬಸ್ ಸಂಚಾರ ಸ್ಥಗಿತಗೊಳ್ಳಲಿದ್ದು, ಯುಗಾದಿಗೆ ಊರಿಗೆ ತೆರಳುವ ಪ್ರಯಾಣಿಕರಿಗೆ ಸಮಸ್ಯೆಯಾಗಲಿದೆ. ಇನ್ನು, ಈ ಬಗ್ಗೆ ಪ್ರತಿಕ್ರಿಯಿಸಿರುವ ಸಾರಿಗೆ ನೌಕರರು, ಸಾರಿಗೆ ಸಚಿವ ಶ್ರೀರಾಮುಲು ಮಾ.8ರಂದು ಸಭೆ ಕರೆದು ಮೂಲ ವೇತನದ ಶೇ.10ರಷ್ಟು ಹೆಚ್ಚಳದ ಭರವಸೆ ನೀಡಿದ್ದರು. ಆದರೆ, ಸಚಿವರ ಭರವಸೆಗೆ ನಾವು ಸಮ್ಮತಿಸಲಿಲ್ಲ. ಆದುದರಿಂದ, ಎರಡು ದಿನಗಳೊಳಗೆ ಮತ್ತೊಮ್ಮೆ ಸಭೆ ನಡೆಸಿ, ಅಂತಿಮ ತೀರ್ಮಾನ ಪ್ರಕಟಿಸುವುದಾಗಿ ಶ್ರೀರಾಮುಲು ಹೇಳಿದ್ದರು. ಆದರೆ, ಇದುವರೆಗೂ ಸಭೆ ಕರೆಯದ ಕಾರಣ ನಾವು ಮುಷ್ಕರಕ್ಕೆ ಕರೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ಸಾರಿಗೆ ನೌಕರರ ಬೇಡಿಕೆ ಏನು?: ಸಾರಿಗೆ ನೌಕರರ ಮೂಲ ವೇತನವನ್ನು ಶೇ.25ರಷ್ಟು ಹೆಚ್ಚಿಸಬೇಕು. ವೇತನ ಹೆಚ್ಚಳವು ಪರಿಷ್ಕೃತ ಮೂಲ ವೇತನದ ಶೇ.3ರಷ್ಟಿರಬೇಕು. ಎಲ್ಲ ನೌಕರರಿಗೂ ಹಾಲಿ ಇರುವ ಭತ್ತೆ, ಮಾಸಿಕ, ದೈನಂದಿನ ಭತ್ತೆಗಳನ್ನು ಐದು ಪಟ್ಟು ಹೆಚ್ಚಳ ಮಾಡಬೇಕು.

Similar News