ಕುಂದಾಪುರ: ಲಾರಿ ಢಿಕ್ಕಿ; ಕೆಎಸ್ಸಾರ್ಟಿಸಿ ಬಸ್ ಪಲ್ಟಿ

Update: 2023-03-16 11:42 GMT

ಕುಂದಾಪುರ: ಕೆಎಸ್ಸಾರ್ಟಿಸಿ ಬಸ್ಸಿಗೆ ಲಾರಿಯೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿಯಾದ ಘಟನೆ ಕುಂದಾಪುರದ ಸಂತೆ ಮಾರ್ಕೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ‌ ಬೆಳಗ್ಗೆ ಸಂಭವಿಸಿದೆ.

ಕುಂದಾಪುರದ ಬಸ್ರೂರು ಮೂರುಕೈ ಬಳಿಯ ಕೆಎಸ್ಸಾರ್ಟಿಸಿ ಡಿಪ್ಪೋದಿಂದ ಹೊರಟು ಬಸ್ ನಿಲ್ದಾಣಕ್ಕೆ ತೆರಳುವ ವೇಳೆ ಇಲ್ಲಿನ ಸಂತೆ ಮಾರುಕಟ್ಟೆ (ಹಳೆ ಆದರ್ಶ ಆಸ್ಪತ್ರೆ) ಎದುರಿನ ಡಿವೈಡರ್‌ನಲ್ಲಿ ಯೂ ಟರ್ನ್ ತೆಗೆದುಕೊಳ್ಳುವಾಗ ಉಡುಪಿ ಕಡೆಯಿಂದ ಬೈಂದೂರಿನತ್ತ ಸಾಗುತ್ತಿದ್ದ ಲಾರಿಯೊಂದು ಹಿಂಬದಿಯಿಂದ ಬಂದು ಢಿಕ್ಕಿ ಹೊಡೆದ ಪರಿಣಾಮ ಕೆಎಸ್ಸಾರ್ಟಿಸಿ ಬಸ್ ಪಲ್ಟಿಯಾಗಿದ್ದು ಬಸ್ ಚಾಲಕ ಭಾಸ್ಕರ್‌ ಎನ್‌ ನಾಯ್ಕ್‌ ಎಂಬವರು ಗಾಯಗೊಂಡಿದ್ದಾರೆ.

ಲಾರಿ ಚಾಲಕ ಈರಪ್ಪ ಆರ್‌ ಹಡಗಲಿ ಎನ್ನುವವರ ನಿರ್ಲಕ್ಷ್ಯ ಹಾಗೂ ಅತಿ ವೇಗದ ಚಾಲನೆ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಎರಡೂ ವಾಹನಗಳು ಜಖಂಗೊಂಡಿವೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ಥವಾಗಿತ್ತು.

ಕುಂದಾಪುರ ಸಂಚಾರ ಪೊಲೀಸ್ ಠಾಣೆ ಪಿಎಸ್ಐ ನಾಸೀರ್‌ ಹುಸೇನ್‌ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಆರೋಪಿ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News