‘ನಮ್ಮ ಸಹಮತಿ ಪಡೆಯದೆ ಅಧಿಕಾರಿಗಳ ವರ್ಗಾವಣೆ’: ಮುಖ್ಯ ಚುನಾವಣಾಧಿಕಾರಿ ಅಸಮಾಧಾನ, ಸಿಎಸ್‌ಗೆ ಪತ್ರ

Update: 2023-03-16 18:15 GMT

ಬೆಂಗಳೂರು, ಮಾ. 16: 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯು ಸನ್ನಿಹಿತವಾಗುತ್ತಿದ್ದು, ಭಾರತ ಚುನಾವಣಾ ಆಯೋಗವು ಸದ್ಯದಲ್ಲಿಯೆ ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಲಿದ್ದು, ಈ ಹಂತದಲ್ಲಿ ಚುನಾವಣಾ ಕಾರ್ಯದಲ್ಲಿ ನಿರತರಾದ ಅಧಿಕಾರಿ, ಸಿಬ್ಬಂದಿಗಳನ್ನು ನಮ್ಮ ಸಹಮತಿ ಪಡೆಯದೆ ವರ್ಗಾವಣೆ ಮಾಡುತ್ತಿರುವುದು ಕಂಡು ಬಂದಿದೆ ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುರುವಾರ ಈ ಸಂಬಂಧ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರಿಗೆ ಪತ್ರ ಬರೆದಿರುವ ಅವರು, ಮಾ.8ರಂದು ಅರೆ ಸರಕಾರಿ ಪತ್ರದ ಮೂಲಕ ಎಲ್ಲ ವರ್ಗಾವಣೆ ಪ್ರಕ್ರಿಯೆಗಳಿಗೆ ಮುಖ್ಯ ಚುನಾವಣಾಧಿಕಾರಿಯವರ ಸಹಮತಿ ಪಡೆಯಲು ತಿಳಿಸಿದ್ದಾಗ್ಯೂ, ಹಲವು ಇಲಾಖೆಗಳು ಈ ನಿರ್ದೇಶನವನ್ನು ಪರಿಗಣಿಸದೆ ವರ್ಗಾವನೆ ಪ್ರಕ್ರಿಯೆಗಳನ್ನು ಕೈಗೊಳ್ಳುತ್ತಿವೆ ಎಂದು ತಿಳಿಸಿದ್ದಾರೆ.

ಎಲ್ಲ ರೀತಿಯ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳುವ ಪೂರ್ವದಲ್ಲಿ ಮುಖ್ಯ ಚುನಾವಣಾಧಿಕಾರಿಯ ಸಹಮತಿ ಪಡೆದು, ನಂತರ ವರ್ಗಾವಣೆ ಆದೇಶಗಳನ್ನು ಹೊರಡಿಸುವಂತೆ ಎಲ್ಲ ಸಕ್ಷಮ ಪ್ರಾಧಿಕಾರಗಳಿಗೆ ಇಂದೆ ಸೂಕ್ತ ನಿರ್ದೇಶನ ನೀಡುವಂತೆ ಮತ್ತೊಮ್ಮೆ ತಮ್ಮನ್ನು ಕೋರುತ್ತಾ, ಇನ್ನು ಮುಂದೆ ಈ ಕಚೇರಿ ಸಹಮತಿ ಪಡೆಯದೆ ವರ್ಗಾವಣೆ ಪ್ರಕ್ರಿಯೆ ಕೈಗೊಂಡಲ್ಲಿ ಅಂತಹ ಅಂಶಗಳನ್ನು ಭಾರತ ಚುನಾವಣಾ ಆಯೋಗದ ಗಮನಕ್ಕೆ ತರಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

Similar News