ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಅರ್ಜಿ ವಿಚಾರಣೆ ಪೂರ್ಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್

Update: 2023-03-17 15:14 GMT

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ(ಕೆಎಸ್‍ಡಿಎಲ್)ಕ್ಕೆ ರಾಸಾಯನಿಕಗಳನ್ನು ಪೂರೈಕೆ ಮಾಡುವುದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಸಂಬಂಧ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.

ಕೆಎಸ್‍ಡಿಎಲ್ ಮಾಜಿ ಅಧ್ಯಕ್ಷ ಕೆ.ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ನ್ಯಾಯಪೀಠವು ಅಂತಿಮ ಆದೇಶ ಕಾಯ್ದಿರಿಸಿದೆ.

ಲೋಕಾಯುಕ್ತ ಪರವಾಗಿ ವಾದಿಸಿದ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಅವರು, ಪ್ರಕರಣದಲ್ಲಿ ಮೊದಲ ಆರೋಪಿ ಮಾಡಾಳ್ ವಿರೂಪಾಕ್ಷಪ್ಪರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಬೇಕಾಗಿದೆ. ಹೀಗಾಗಿ, ಅರ್ಜಿದಾರರಿಗೆ ಮಂಜೂರು ಮಾಡಿರುವ ನಿರೀಕ್ಷಣಾ ಜಾಮೀನು ರದ್ದು ಮಾಡಬೇಕು ಎಂದು ಪೀಠಕ್ಕೆ ತಿಳಿಸಿದರು.

ಅಲ್ಲದೆ, ಆರೋಪಿಗೆ ಈಗಾಗಲೇ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಅವರು ತನಿಖೆಗೆ ಹಾಜರಾಗುತ್ತಿದ್ದಾರೆ. ಆದರೆ, ಯಾವುದೇ ವಿಚಾರಗಳನ್ನು ತಿಳಿಸುತ್ತಿಲ್ಲ. ಏನೇ ಕೇಳಿದರೂ ಗೊತ್ತಿಲ್ಲ ಎಂದು ಹೇಳುತ್ತಿದ್ದಾರೆ. ಇದರಿಂದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಾಗಿದೆ. ಹೀಗಾಗಿ, ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ವಶಕ್ಕೆ ಪಡೆದು ತನಿಖೆ ನಡೆಸುವುದು ಎಂದರೆ ಸಿನಿಮಾದಲ್ಲಿ ತೋರಿಸುವಂತೆ ಹಿಂಸೆ ನೀಡಿ ಬಾಯಿ ಬಿಡಿಸುತ್ತಾರೆಯೇ ಎಂದು ಪ್ರಶ್ನಿಸಿತು. ಅಲ್ಲದೆ, ಪ್ರತಿ ದಿನ ತನಿಖೆಗಾಗಿ ತನಿಖಾಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ. ಇನ್ನೇನಾಗಬೇಕು ಎಂದು ಮರು ಪ್ರಶ್ನೆ ಮಾಡಿತು.

ವಾದ ಮುಂದುವರೆಸಿದ ಲೋಕಾಯುಕ್ತ ಪರ ವಕೀಲರು, ಆರೋಪಿಯನ್ನು ವಶಕ್ಕೆ ಪಡೆಯದಿದ್ದರೆ ತನಿಖೆ ನಡೆಸುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ, ಜಾಮೀನು ರದ್ದುಪಡಿಸಬೇಕು ಎಂದು ಪೀಠಕ್ಕೆ  ಕೋರಿದರು.

ಮಾಡಾಳ್ ಪರ ವಾದಿಸಿದ ಹಿರಿಯ ವಕೀಲ ಸುಮಂತ್ ಅವರು, ಅರ್ಜಿದಾರ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‍ಐಆರ್ ನಲ್ಲಿ ಯಾವುದೇ ಆರೋಪ ಇಲ್ಲ. ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಲಂಚ ಕೇಳಿರುವುದು, ಸ್ವೀಕರಿಸಿರುವ ಸಂಬಂಧ ಸಾಕ್ಷ್ಯಾಧಾರಗಳಿಲ್ಲ. ಹೀಗಾಗಿ, ಮೊದಲ ಆರೋಪಿಯನ್ನು ಪ್ರಕರಣದಿಂದ ಮುಕ್ತಗೊಳಿಸಬೇಕೆಂದು ಪೀಠಕ್ಕೆ ಕೋರಿದರು. ಇದಕ್ಕೆ ಪೀಠ, ತನಿಖೆಗೆ ಸಹಕಾರ ನೀಡದಿದ್ದಲ್ಲಿ ತನಿಖಾಧಿಕಾರಿಗಳು ಜಾಮೀನು ಮಂಜೂರು ಮಾಡಿರುವುದನ್ನು ರದ್ದು ಕೋರಿ ನ್ಯಾಯಾಲಯದ ಮೊರೆ ಹೋಗುವುದಕ್ಕೆ ಅವಕಾಶವಿದೆ ಎಂದು ತಿಳಿಸಿತು. ವಕೀಲರ ವಾದವನ್ನು ಆಲಿಸಿದ ನ್ಯಾಯಪೀಠ ಅಂತಿಮ ಆದೇಶವನ್ನು ಕಾಯ್ದಿರಿಸಿದೆ.

ಇದನ್ನೂ ಓದಿ: ಉರಿಗೌಡ-ನಂಜೇಗೌಡ ಸಿನೆಮಾ ಶೀರ್ಷಿಕೆ ನೋಂದಣಿ ಮಾಡಿದ ಮುನಿರತ್ನ: ಒಕ್ಕಲಿಗರಿಗೆ ಟಿಪ್ಪು ಕೊಲೆಯ ಕಳಂಕ ಎಂದ ಕುಮಾರಸ್ವಾಮಿ

Similar News