ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಶಾಸಕ ತನ್ವೀರ್ ಸೇಠ್ ಹೇಳಿದ್ದೇನು?
ಮೈಸೂರು: ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕೇ? ಬೇಡವೇ ಎಂಬ ಚರ್ಚೆಯಲ್ಲಿದ್ದೇನೆ ಎಂದು ಮೈಸೂರು ನಗರದ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ತಿಳಿಸಿದ್ದಾರೆ.
ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಟಿಕೆಟ್ ಘೋಷಣೆ ಹಿನ್ನಲೆಯಲ್ಲಿ ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಲೂ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕೇ ಅಥವಾ ಬೇಡವೇ ಎಂಬ ಚರ್ಚೆಯಲ್ಲಿದ್ದೇನೆ. ಈಗಾಗಲೆ ಪಕ್ಷದ ಹೈಕಮಾಂಡ್ ಜೊತೆ ಮಾತನಾಡಿದ್ದೇನೆ. ನಿನ್ನೆಯೂ ಕೂಡ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರ ಜೊತೆ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದರು.
ಕಾಂಗ್ರೆಸ್ ನನಗೆ ಟಿಕೆಟ್ ನೀಡಿದ್ದಾರೆ. ಆದರೆ ಸ್ಪರ್ಧೆಯ ಬಗ್ಗೆ ಯೋಚನೆಯಲ್ಲಿದ್ದೇನೆ. ನನ್ನ ಇಂಗಿತವನ್ನು ಪಕ್ಷದ ನಾಯಕರುಗಳಲ್ಲಿ ತಿಳಿಸಿದ್ದೇನೆ. ಕಾಂಗ್ರೆಸ್ ಟಿಕೆಟ್ ನೀಡಿ ಸ್ಪರ್ಧೆ ಮಾಡಬೇಕು ಎಂದು ಹೈಕಮಾಂಡ್ ಸೂಚಿಸಿದರೆ ನನ್ನ ಆರೋಗ್ಯ ಮತ್ತು ಜನರ ಬಯಕೆಯನ್ನು ನೋಡಿಕೊಂಡು ನಾನು ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದರು.