ಕಡಬ: ಅರಣ್ಯ, ಪೊಲಿಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಧಿತ 7 ಮಂದಿಗೆ ಜಾಮೀನು

Update: 2023-03-18 11:04 GMT

ಕಡಬ, ಮಾ.18: ಕೆಲ ದಿನಗಳ ಹಿಂದೆ ರೆಂಜಿಲಾಡಿ ಮೀನಾಡಿ ಸಮೀಪದ ನೈಲ ಎಂಬಲ್ಲಿ ಕಾಡಾನೆಯೊಂದು ಅಮಾಯಕರಿಬ್ಬರನ್ನು ಬಲಿ ತೆಗೆದುಕೊಂಡ ನಂತರದ ಬೆಳವಣಿಗೆಯಲ್ಲಿ ಅರಣ್ಯ ಹಾಗೂ ಪೊಲೀಸ್ ಇಲಾಖಾ ವಾಹನಗಳಿಗೆ ಕಲ್ಲು ತೂರಾಟ ಮಾಡಿ ಹಾನಿ ಉಂಟು ಮಾಡಿದ್ದಲ್ಲದೆ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಧಿತ ಏಳು ಮಂದಿಗೆ ಜಿಲ್ಲಾ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಉಮೇಶ್ ಕಮರ್ಕಜೆ, ರಾಜೇಶ್ ಕಮರ್ಕಜೆ, ಜನಾರ್ದನ ರೈ ಕೊಲ್ಯ, ಕೋಕಿಲ ಕಮರ್ಕಜೆ, ತೀರ್ಥಕುಮಾರ ಕೋಲ್ಪೆ, ಗಂಗಾಧರ ಗೌಡ ಬಾರ್ಯ ಸಿರಿಬಾಗಿಲು ಮತ್ತು ಅಜಿತ್ ಕುಮಾರ್ ಕೆಂಜಾಳ ಎಂಬವರನ್ನು ಕಡಬ ಪೊಲೀಸರು ಬಂಧಿಸಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಕೋರಿ ನ್ಯಾಯವಾದಿ ಮಹೇಶ್ ಕಜೆ ಅವರ ಮೂಲಕ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಜಿಲ್ಲಾ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

Similar News