×
Ad

ಮೀನುಗಾರಿಕೆಯನ್ನು ಆದ್ಯತಾ ವಲಯವಾಗಿ ಪರಿಗಣಿಸಲು ಚಿಂತನೆ: ಸಚಿವ ಪರಷೋತ್ತಮ್ ರೂಪಾಲ

Update: 2023-03-19 19:56 IST

ಮಲ್ಪೆ, ಮಾ.19: ಕೇಂದ್ರ ಸರಕಾರದ ಯೋಜನೆಯಲ್ಲಿ ಕೃಷಿಯಂತೆ ಮೀನುಗಾರಿಕಾ ಕ್ಷೇತ್ರವನ್ನು ಆದ್ಯತಾ ವಲಯದಲ್ಲಿ  ಪರಿಗಣಿಸುವ ಬಗ್ಗೆ ಸರಕಾರ ಚಿಂತನೆ ನಡೆಸಿದೆ. ಈ ಮೂಲಕ ಮೀನುಗಾರಿಕೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕಾಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಪರಷೋತ್ತಮ ರೂಪಾಲಾ ಹೇಳಿದ್ದಾರೆ. 

ರವಿವಾರ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದ ಸಾಗರ ಪರಿಕ್ರಮದ 2023ನೇ ಸಾಲಿನ ನಾಲ್ಕನೇ ಹಂತದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್‌ನ ಮಾದರಿಯಲ್ಲಿ ಮೀನುಗಾರರಿಗೂ ನಿಬಡ್ಡಿ ಸಾಲ ನೀಡಲಾಗುತ್ತಿದೆ ಎಂದರು.

ನರೇಂದ್ರ ಮೋದಿ ನೇತೃತ್ವದ ಸರಕಾರ ಬಂದ ಬಳಿಕ ಮೀನುಗಾರರಿಗಾಗಿ ಪ್ರತ್ಯೇಕ ಮೀನುಗಾರಿಕಾ ಸಚಿವಾಲಯವನ್ನು ಪ್ರಾರಂಭಿಸಲಾಗಿದೆ.  ಈ ಸಚಿವಾಲಯ ಭಾರತದ 75ನೇ ಆಜಾದಿ ಕಾ ಅಮೃತ ಮಹೋತ್ಸವದ ಸಂದರ್ಭದಲ್ಲಿ ‘ಸಾಗರ ಪರಿಕ್ರಮ’ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಇದರಲ್ಲಿ ಮೀನುಗಾರಿಕೆ ವಲಯದ ಅಭಿವೃದ್ಧಿಗಾಗಿ ‘ಪ್ರಧಾನ ಮಂತ್ರಿ ಮತ್ಸ್ಯ ಸಂಪದ’ ಯೋಜನೆಯ  ಮೂಲಕ ಮೀನುಗಾರಿಕಾ ವಲಯ ದಲ್ಲಿ 20,050 ಕೋಟಿ ರೂ.ಗಳ ಹೂಡಿಕೆಯೊಂದಿಗೆ ಪ್ರಮುಖ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ರೂಪಾಲಾ ವಿವರಿಸಿದರು.

ಪಿಎಂಎಂಎಸ್‌ವೈ ಯೋಜನೆಯಲ್ಲಿ ಮೀನಿನ ಉತ್ಪಾದಕತೆಯಲ್ಲಿ ಹೆಚ್ಚಳ, ಮೀನುಗಾರರು, ಮೀನು ಕೃಷಿಕರ ಅನುಕೂಲಕ್ಕಾಗಿ ವಿವಿಧ  ಕಾರ್ಯಕ್ರಮ ಗಳನ್ನು ಜಾರಿಗೆ ತರಲಾಗಿದ್ದು ಮೀನುಗಾರರರು ವಿವಿಧ ಚಟುವಟಿಕೆಗಳ ಮೂಲಕ ತಮ್ಮ ಆದಾಯವನ್ನು ಹೆಚ್ಚು ಮಾಡಿಕೊಳ್ಳಲು ಯೋಜನೆಗಳನ್ನು ರೂಪಿಸಲಾಗಿದೆ ಎಂದರು.

ಪಿಎಂಎಂಎಸ್‌ವೈ ಯೋಜನೆಯಡಿ ಫಲಾನುಭವಿ ಆಧಾರಿತ ಚಟುವಟಿಕೆಗಳನ್ನು ಕೈಗೊಳ್ಳಲು ಒಟ್ಟು 12,340 ಕೋಟಿ ರೂ.ಗಳನ್ನು ಹೂಡಿಕೆ ಮಾಡಲು ಉದ್ದೇಶಿಸಲಾಗಿದೆ. ಈ ಯೋಜನೆ ಎಲ್ಲಾ ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 2020-21ನೇ ಆರ್ಥಿಕ ವರ್ಷದಿಂದ ಜಾರಿಗೆ ಬಂದಿದ್ದು, ಇದು 2024-25ರವರೆಗೆ ಒಟ್ಟು ಐದು ವರ್ಷಗಳ  ಅವಧಿಯಲ್ಲಿ ಅನುಷ್ಠಾನಗೊಳ್ಳುತ್ತದೆ ಎಂದರು.  

ಸಾಗರ ಪರಿಕ್ರಮ ಯೋಜನೆಯ ಮೂಲಕ ದೇಶದ 8000 ಕಿ.ಮೀ. ಉದ್ದದ ಕರಾವಳಿ ವ್ಯಾಪ್ತಿಯಲ್ಲಿನ ಎಲ್ಲಾ ಮೀನುಗಾರಿಕಾ ಬಂದರುಗಳಲ್ಲಿ ಆ  ಭಾಗದ ಮೀನುಗಾರರನ್ನು ಭೇಟಿ ಮಾಡಿ ಕೇಂದ್ರದ ಮೀನುಗಾರಿಕಾ ಯೋಜನೆಗಳ ಬಗ್ಗೆ ಅವರಿಗೆ  ವ್ಯಾಪಕ ಅರಿವು ಮೂಡಿಸುವುದರ ಜೊತೆಗೆ ಅವರ ಸಮಸ್ಯೆಗಳನ್ನು ಆಲಿಸಿ, ಅವರುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶ ಹೊಂದಲಾಗಿದೆ. ಈಗಾಗಲೇ ಗುಜರಾತ್, ಮಹಾರಾಷ್ಟ್ರ ಹಾಗೂ ದಾಮನ್-ದಿಯು ರಾಜ್ಯಗಳಿಗೆ ಭೇಟಿ ನೀಡಿದ್ದು, ನಾಲ್ಕನೇ ಹಂತದಲ್ಲಿ ನಿನ್ನೆ ಮತ್ತು ಇಂದು ಕರ್ನಾಟಕದ ವಿವಿಧ ಬಂದರುಗಳಿಗೆ ಭೇಟಿ ನೀಡುತ್ತಿರುವುದಾಗಿ ತಿಳಿಸಿದರು.

ಸಾಗರ ಪರಿಕ್ರಮ ಯೋಜನೆಯಡಿ ದೇಶದ ಕರಾವಳಿಯ ಎಲ್ಲಾ ಪ್ರಮುಖ ಬಂದರುಗಳಿಗೆ ಭೇಟಿ ನೀಡಿ ಮೀನುಗಾರರೊಂದಿಗೆ ಸಂವಾದ ನಡೆಸಿದ ಬಳಿಕ ಮೀನುಗಾರರ ಸಮಸ್ಯೆಗಳ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯಲಿದ್ದು, ಬಳಿ ಈ ಎಲ್ಲಾ ಸಮಸ್ಯೆಗಳನ್ನು ಕ್ರೂಡೀಕರಿಸಿ ಅವುಗಳ ನಿವಾರಣೆಗೆ ಕೇಂದ್ರದಿಂದ ಅಗತ್ಯವಿರುವ ಯೋಜನೆಗಳನ್ನು ರೂಪಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಕೇಂದ್ರ ಸರ್ಕಾರದ ಮೀನುಗಾರಿಕಾ ಇಲಾಖೆಯ ಜಂಟಿ ಕಾರ್ಯದರ್ಶಿ ಡಾ.ಬಾಲಾಜಿ, ಸಾಗರ ಪರಿಕ್ರಮ ಯೋಜನೆಯ ಅಂಗವಾಗಿ ಈಗಾಗಲೇ ಗುಜರಾತ್, ಮಹಾರಾಷ್ಟ್ರ, ಡಿಯು ಮತ್ತುಡಾಮನ್‌ಗೆ ಭೇಟಿ ನೀಡಲಾಗಿದೆ. ಮೀನುಗಾರಿಕಾ ಉತ್ಪಾದನೆ ಯಲ್ಲಿ ಕರ್ನಾಟಕವು ಕಳೆದ ಸಾಲಿನಲ್ಲಿ ರಾಷ್ಟ್ರದಲ್ಲೇ ಪ್ರಥಮ ಸ್ಥಾನ ಪಡೆದಿದ್ದು, ಈ ವರ್ಷವೂ ಸಹ ಉತ್ತಮ ಪ್ರಗತಿಯಲ್ಲಿದೆ. ಕೇಂದ್ರದ ಮೀನುಗಾರಿಕಾ ಯೋಜನೆಗಳ ಅನುಷ್ಠಾನದಲ್ಲಿ ಸಹ ರಾಜ್ಯ ಅತ್ಯುತ್ತಮ ಸಾಧನೆ ತೋರಿಸಿದೆ ಎಂದರು.

ಕಾರ್ಯಕ್ರಮದಲ್ಲಿ ಮೀನುಗಾರಿಕಾ ಇಲಾಖೆಯ ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ಕೇಂದ್ರ ಮೀನುಗಾರಿಕಾ ಸಚಿವರು ವಿತರಿಸಿದರು. 

ವೇದಿಕೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಉಡುಪಿ ಶಾಸಕ ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್.ಮೆಂಡನ್,  ಮೈಸೂರು ಎಲೆಕ್ಟ್ರಿಕಲ್ಸ್  ಇಂಡಸ್ಟ್ರೀಸ್ ನಿಯಮಿತದ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮಿ ಮಂಜುನಾಥ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ರಾಜ್ಯ ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಸಲ್ಮಾ ಫಾಹಿಮ್, ಕೋಸ್ಟ್‌ಗಾರ್ಡ್ ಡಿಐಜಿ ಪಿ.ಕೆ.ಮಿಶ್ರಾ, ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ, ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ಅಧ್ಯಕ್ಷ ಜಯ ಸಿ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯ ಮೀನುಗಾರಿಕೆ ಇಲಾಖೆ ನಿರ್ದೇಶಕ ರಾಮಾಚಾರ್ಯ ಅವರು ಸ್ವಾಗತಿಸಿದರು.

Similar News