ಇತಿಹಾಸ ತಿರುಚುವ ಷಡ್ಯಂತ್ರದ ವಿರುದ್ಧ ಹೋರಾಟಕ್ಕೆ ನಿರ್ಮಲಾನಂದ ಸ್ವಾಮೀಜಿ ನೇತೃತ್ವ ವಹಿಸಲಿ: ಡಿಕೆಶಿ

Update: 2023-03-20 08:03 GMT

ಬೆಳಗಾವಿ, ಮಾ.20: ಉರಿಗೌಡ-ನಂಜೇಗೌಡ ಹೆಸರಿನಲ್ಲಿ ಇತಿಹಾಸ ತಿರುಚುವ ಷಡ್ಯಂತ್ರದ ಹೋರಾಟದ ಅಗತ್ಯವಿದೆ. ಒಕ್ಕಲಿಗ ಸಮುದಾಯದ ಮಾರ್ಗದರ್ಶಕರಾದ ಆದಿಚುಂಚನಗಿರಿಯ ಶ್ರೀ ನಿರ್ಮಲಾನಂದ ಸ್ವಾಮೀಜಿ ನೇತೃತ್ವ ವಹಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆಶಿವಕುಮಾರ್ ಒತ್ತಾಯಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಇತಿಹಾಸ ತಿರುಚುವಲ್ಲಿ ಬಿಜೆಪಿಯವರದು ಎತ್ತಿದ ಕೈ. ಬಸವಣ್ಣ, ಕುವೆಂಪು, ನಾರಾಯಣ ಗುರು, ಅಂಬೇಡ್ಕರ್ ಸೇರಿದಂತೆ ಹಲವು ಮಹನೀಯರ ಇತಿಹಾಸ ತಿರುಚಿದ್ದ ಬಿಜೆಪಿ, ಈಗ ಉರಿಗೌಡ ನಂಜೇಗೌಡ ಎಂಬ ಹೆಸರಲ್ಲಿ ಇತಿಹಾಸ ತಿರುಚುತ್ತಿದ್ದಾರೆ. ಆ ಮೂಲಕ ಜಾತಿ, ಕೋಮುಗಳ ನಡುವೆ ದ್ವೇಷ ತಂದು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಇದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ. ಈ ಹೋರಾಟಕ್ಕೆ ಶ್ರೀ ನಿರ್ಮಲಾನಂದ ಸ್ವಾಮೀಜಿ ಬೆಂಬಲ ನೀಡಬೇಕು ಎಂದು ಮನವಿ ಮಾಡುತ್ತೇನೆ ಎಂದು ಡಿಕೆಶಿ ಹೇಳಿದರು.

ಸ್ವಾಮೀಜಿಗಳು ಈ ಹೋರಾಟದ ನೇತೃತ್ವ ವಹಿಸಬೇಕು. ಒಕ್ಕಲಿಗ ಸಮುದಾಯದ ಮುಖಂಡರ ಸಭೆ ಕರೆದು ಹೋರಾಟದ ರೂಪುರೇಷೆ ಬಗ್ಗೆ ಮಾರ್ಗದರ್ಶನ ಮಾಡಬೇಕು. ಸ್ವಾಮೀಜಿ ಈ ವಿಚಾರದಲ್ಲಿ ಯಾರ ಜತೆಗೂ ಸಂಧಾನ ಮಾಡಿಕೊಳ್ಳಬಾರದು. ಒಂದು ವೇಳೆ ಸಂದಾನಕ್ಕೆ ಮುಂದಾದರೆ ಈ ಒಕ್ಕಲಿಗ ಸಮಾಜಕ್ಕೆ ಅಗೌರವ ಮಾಡಿದಂತೆ ಆಗುತ್ತದೆ ಎಂದು ಡಿಕೆಶಿ ನುಡಿದರು.

 ಟಿಪ್ಪು ಸುಲ್ತಾನ್ ಸಾವನ್ನಪ್ಪಿ ಎರಡು ಶತಮಾನಗಳೇ ಕಳೆದಿವೆ. ಈಗ ಊರಿಗೌಡ, ನಂಜೇಗೌಡರನ್ನು ಬಿಜೆಪಿ ಸೃಷ್ಟಿಸಿದೆ ಎಂದರು.

 ಮಂಡ್ಯ ಜಿಲ್ಲೆಗೆ 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಾ.ದೇ.ಜವರೇಗೌಡ ಅವರ ಸಂಪಾದಕತ್ವದಲ್ಲಿ 'ಸುವರ್ಣ ಮಂಡ್ಯ ' ಎಂಬ ಸಂಚಿಕೆ ತರಲಾಗಿತ್ತು. ಅದರ ಪರಿಸ್ಕೃತ ಸಂಚಿಕೆಯಲ್ಲಿ ಸಂಶೋಧಕ ಹ.ಕ. ರಾಜೇಗೌಡರು ಮಂಡ್ಯ ಐವತ್ತು; ಒಂದು ಪಕ್ಷಿ ನೋಟ ಎಂಬ ಲೇಖನ ಬರೆದಿದ್ದರು. ಅದರಲ್ಲಿ ದೊಡ್ಡನಂಜೆಗೌಡ, ಉರಿಗೌಡ ಎಂಬುವರು ಹೈದರಲಿ, ಟಿಪ್ಪು ಸುಲ್ತಾನ್ ವಿರುದ್ಧ ಸೆಟೆದು ನಿಂತಿದ್ದರು ಎಂದು ಉಲ್ಲೇಖಿಸಿದ್ದರು. ಇತಿಹಾಸದಲ್ಲಿ ಇಲ್ಲದ ಉರಿಗೌಡ, ನಂಜೇಗೌಡರ ಬಗ್ಗೆ ಉಲ್ಲೇಖ ಮಾಡಿರುವ ಬಗ್ಗೆ ಕೆಲವರು ರಾಜೇಗೌಡರನ್ನು ಪ್ರಶ್ನೆ ಮಾಡಿದಾಗ ಒಕ್ಕಲಿಗರಿಗೆ ಪ್ರಾಮುಖ್ಯತೆ ಸಿಗಲಿ ಎಂದು ಹೀಗೆ ಬರೆದಿದ್ದೇನೆ, ಇರಲಿ ಬಿಡಿ ಎಂದು ಹೇಳಿದ್ದಾರೆ. ಈ ವಿಚಾರವಾಗಿ ಸ್ಪಷ್ಟನೆ ನೀಡಲು ಈಗ ಹ.ಕ. ರಾಜೇಗೌಡರು ಜೀವಂತವಾಗಿ ಇಲ್ಲ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡು ಬಿಜೆಪಿಯ ವಾಟ್ಸಾಪ್ ಯೂನಿವರ್ಸಿಟಿ ಹೊಸ ಇತಿಹಾಸ ಸೃಷ್ಟಿಸಲು ಹೊರಟಿದೆ ಎಂದು ಡಿಕೆಶಿ ವ್ಯಂಗ್ಯವಾಡಿದರು.

ಅನೇಕ ಇತಿಹಾಸ ತಜ್ಞರು, ಸಂಶೋಧಕರು ಉರಿಗೌಡ, ನಂಜೇಗೌಡ ಕೇವಲ ಕಾಲ್ಪನಿಕ ಪಾತ್ರ ಎಂದು ಹೇಳುತ್ತಿದ್ದರೂ ಬಿಜೆಪಿಯವರು ಮಾತ್ರ ಇದನ್ನು ಬಿಡಲು ರೆಡಿ ಇಲ್ಲ. ಇತಿಹಾಸದ ಯಾವ ದಾಖಲೆಯಲ್ಲಿ ಉರಿಗೌಡ ನಂಜೇಗೌಡ ಟಿಪ್ಪು ಸುಲ್ತಾನ್ ಕೊಂದರು ಎಂಬುದು ಇದೆ ನೀವೇ ಹೇಳಿ ನೋಡೋಣ ಎಂದ ಡಿಕೆಶಿ, ಬ್ರಿಟಿಷರ ವಿರುದ್ಧ ಹೋರಾಡಿದ ಟಿಪ್ಪು ಸುಲ್ತಾನನನ್ನು ಒಕ್ಕಲಿಗರು ಕೊಂದರು, ಆ ಮೂಲಕ ಒಕ್ಕಲಿಗರು ದೇಶವಿರೋಧಿಗಳು, ಕೊಲೆಗಡುಕರು ಎಂದು ಅವರ ಗೌರವ, ಸ್ವಾಭಿಮಾನಕ್ಕೆ ಮಸಿ ಬಳಿಯಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿ.ಟಿ.ರವಿ ಹಾಗೂ ಅಶ್ವತ್ಥನಾರಾಯಣ ಅವರು ಒಕ್ಕಲಿಗ ಸಮುದಾಯದ ಹೆಸರನ್ನು ಬಳಸಿಕೊಂಡು ರಾಜಕೀಯವಾಗಿ ಬೆಳೆಯುತ್ತಿರುವವರು. ಈಗ ಅದೇ ಸಮಾಜದ ಸ್ವಾಭಿಮಾನ ಹಾಗೂ ಘನತೆಗೆ ಮಸಿ ಬಳಿಯುತ್ತಿದ್ದಾರೆ. ಇದಕ್ಕೆ ನಾವು ಅವಕಾಶ ನೀಡುವುದಿಲ್ಲ. ಹಲವು ಸಂಘಟನೆಗಳು ನನಗೆ ಒತ್ತಡ ಹೇರುತ್ತಿದ್ದು, ಇತಿಹಾಸ ತಿರುಚುವ ಈ ಷಡ್ಯಂತ್ರ ಖಂಡಿಸಿ, ಅದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಎಂದು ಡಿಕೆಶಿ ಹೇಳಿದರು.

 ಈ ಹೋರಾಟಕ್ಕೆ ಒಕ್ಕಲಿಗ ಸಮುದಾಯದ ಮಾರ್ಗದರ್ಶಕರಾದ ಆದಿಚುಂಚನಗಿರಿಯ ಶ್ರೀಗಳಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಬೆಂಬಲ ನೀಡಬೇಕು ಎಂದು ಮನವಿ ಮಾಡುತ್ತೇನೆ ಎಂದು ಡಿಕೆಶಿ ಹೇಳಿದರು.

ಸ್ವಾಮೀಜಿಗಳು ಈ ಹೋರಾಟದ ನೇತೃತ್ವ ವಹಿಸಬೇಕು. ಒಕ್ಕಲಿಗ ಸಮುದಾಯದ ಮುಖಂಡರ ಸಭೆ ಕರೆದು ಹೋರಾಟದ ರೂಪುರೇಷೆ ಬಗ್ಗೆ ಮಾರ್ಗದರ್ಶನ ಮಾಡಬೇಕು. ಸ್ವಾಮೀಜಿಗಳು ಈ ವಿಚಾರದಲ್ಲಿ ಯಾರ ಜತೆಗೂ ಸಂಧಾನ ಮಾಡಿಕೊಳ್ಳಬಾರದು. ಒಂದು ವೇಳೆ ಸಂದಾನಕ್ಕೆ ಮುಂದಾದರೆ ಈ ಒಕ್ಕಲಿಗ ಸಮಾಜಕ್ಕೆ ಅಗೌರವ ಮಾಡಿದಂತೆ ಆಗುತ್ತದೆ.

ಬಿಜೆಪಿ ಅಪಪ್ರಚಾರದ ವಿರುದ್ಧ ಹೋರಾಟ ಮಾಡಿ ಸಮಾಜದ ಸ್ವಾಭಿಮಾನ ಉಳಿಸಿಕೊಳ್ಳಬೇಕು ಎಂದು ಡಿಕೆಶಿ ಮನವಿ ಮಾಡಿದರು.

Similar News