ರಾಹುಲ್ ಗಾಂಧಿಯವರ ಹೋರಾಟ ನಿಲ್ಲದು, ಇಡೀ ದೇಶ ಅವರ ಜೊತೆಗಿದೆ: ಸಿದ್ದರಾಮಯ್ಯ

Update: 2023-03-20 12:40 GMT

ಬೆಂಗಳೂರು, ಮಾ. 20: ‘ಮಹಿಳಾ ಪೀಡಕರ ಕೂಟಕ್ಕೆ ಮಹಿಳಾ ರಕ್ಷಕರೇ ಅಪರಾಧಿಗಳಾಗಿ ಕಾಣುತ್ತಾರೆ ಎನ್ನುವುದಕ್ಕೆ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರಿಗೆ, ನರೇಂದ್ರ ಮೋದಿ ಸರಕಾರ ಪೊಲೀಸರ ಮೂಲಕ ನೀಡುತ್ತಿರುವ ಕಿರುಕುಳವೇ ಸಾಕ್ಷಿ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಕಾಶ್ಮೀರದಲ್ಲಿ ಮಹಿಳೆಯರೆಲ್ಲರೂ ಸುರಕ್ಷಿತರಾಗಿದ್ದಾರೆಯೇ? ಅವರ ಮೇಲೆ ಯಾವುದೇ ದೌರ್ಜನ್ಯಗಳು ನಡೆಯುತ್ತಿಲ್ಲವೇ? ಅಪರಾಧಿಗಳನ್ನು ಪತ್ತೆ ಹಚ್ಚಿ ಶಿಕ್ಷಿಸುವ ಬದಲಿಗೆ ದೂರುದಾರರ ಬೆನ್ನು ಹತ್ತಿರುವ ಸರಕಾರದ ದುರುದ್ದೇಶ ಅರ್ಥವಾಗದಷ್ಟು ದೇಶದ ಜನ ಮೂರ್ಖರಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಉದ್ಯಮಿ ಅದಾನಿ ಹಗರಣಗಳ ಬಗ್ಗೆ ದನಿ ಎತ್ತಿದ ದಿನದಿಂದ ನರೇಂದ್ರ ಮೋದಿ ಅವರ ಬಿಜೆಪಿ ಸರಕಾರ, ರಾಹುಲ್ ಗಾಂಧಿ ಅವರ ಬೆನ್ನು ಹತ್ತಿದೆ ಎಂದರೆ ಆರೋಪದಲ್ಲಿ ಸತ್ಯ ಇದೆ ಎಂದರ್ಥ ಅಲ್ಲವೇ? ಕಳ್ಳರ ಮನಸ್ಸು ಹುಳ್ಳಗೆ’ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

‘ಬಿಜೆಪಿಗೆ ಮಹಿಳೆಯರ ಬಗ್ಗೆ ಅಷ್ಟೊಂದು ಕಾಳಜಿ-ಗೌರವ ಇರುವುದಾಗಿದ್ದರೆ ಮೊದಲು ತಮ್ಮ ಪಕ್ಷದಲ್ಲಿ ಮಹಿಳಾ ಪೀಡನೆಯ ಆರೋಪ ಹೊತ್ತಿರುವವರ ಬಗ್ಗೆ ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ನೀಡಲಿ. ಆರೋಪಿಗಳ ಪಟ್ಟಿ ಉದ್ದ ಇದೆ’ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

‘ಭಾರತ್ ಜೋಡೊ ಯಾತ್ರೆಯ ಯಶಸ್ಸು  ಆಡಳಿತಾರೂಢ ಬಿಜೆಪಿ ಪಕ್ಷದ ನಿದ್ದೆಗೆಡಿಸಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ಜನಪ್ರಿಯತೆ ಅವರಲ್ಲಿ ಅಸೂಯೆ ಹುಟ್ಟಿಸಿದೆ. ಇವರಿಗೆಲ್ಲ ನನ್ನ ಸಂತಾಪಗಳು. ರಾಹುಲ್ ಗಾಂಧಿಯವರ ಹೋರಾಟ ನಿಲ್ಲದು, ಇಡೀ ದೇಶ ಅವರ ಜೊತೆಗಿದೆ’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Similar News