ವಿನಾಯಕ ಬಾಳಿಗಾ ಕೊಲೆ ಪ್ರಕರಣ: ನ್ಯಾಯಕ್ಕೆ ಆಗ್ರಹಿಸಿ ದೇಶಪ್ರೇಮಿ ಸಂಘಟನೆಗಳ ಒಕ್ಕೂಟದಿಂದ ಕಾಲ್ನಡಿಗೆ ಜಾಥಾ

Update: 2023-03-21 14:30 GMT

ಮಂಗಳೂರು: ಅನ್ಯಾಯದ ವಿರುದ್ಧ ರಾಜಿರಹಿತ ಹೋರಾಟ ನಡೆಸಿದ್ದ, ಸಮಾಜದ ಬಲಾಢ್ಯರ ವಿರುದ್ಧ ಸೆಣೆಸಿದ್ದ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣ ನಡೆದು ಮಾ.21ಕ್ಕೆ 7ವರ್ಷ ಸಂದರೂ ನ್ಯಾಯ ಮರೀಚಿಕೆಯಾಗಿರುವುದನ್ನು ಖಂಡಿಸಿ ದೇಶಪ್ರೇಮಿ ಸಂಘಟನೆಗಳ ಒಕ್ಕೂಟದಿಂದ ಮಂಗಳವಾರ ನಗರದಲ್ಲಿ ಕಾಲ್ನಡಿಗೆ ಜಾಥಾ ನಡೆಸಿತು.

ನಗರದ ಕಾರ್‌ಸ್ಟ್ರೀಟ್‌ನಲ್ಲಿರುವ ವೆಂಕಟ್ರಮಣ ದೇವಸ್ಥಾನದಿಂದ ಬಾಳಿಗಾರ ಮನೆಯವರಿಗೆ ರ್ಯಾಲಿ ನಡೆಸಿದ ಸಮಾನ ಮನಸ್ಕರು ನ್ಯಾಯಕ್ಕಾಗಿ ಆಗ್ರಹಿಸಿದರು.

ವೆಂಕಟ್ರಮಣ ದೇವಸ್ಥಾನದ ಮುಂದೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಾ.ಪಿ.ವಿ.ಭಂಡಾರಿ ‘ವಿನಾಯಕ ಬಾಳಿಗಾರ ಕೊಲೆ ನಡೆದು ಏಳು ವರ್ಷ ಸಂದರೂ ರಾಜ್ಯ ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಇಂತಹ ಸರಕಾರ ಯಾಕೆ ಬೇಕು? ಇದೊಂದು ನಪುಂಸಕ, ನರಸತ್ತ ಸರಕಾರ. ಸರಕಾರದ ನಿರ್ಲಕ್ಷ್ಯದಿಂದ ನ್ಯಾಯಕ್ಕಾಗಿ ಹೋರಾಡುವವರ ಮೇಲೆ ದಬ್ಬಾಳಿಕೆ, ದೌರ್ಜನ್ಯ ಹೆಚ್ಚಾಗುತ್ತಿದೆ. ಇದರ ವಿರುದ್ಧ ಹೋರಾಟ ತೀವ್ರಗೊಳಿಸುವ ಅಗತ್ಯವಿದೆ ಎಂದರು.

ವಿಚಾರವಾದಿ ಪ್ರೊ. ನರೇಂದ್ರ ನಾಯಕ್, ನಾಗರಿಕ ಸೇವಾ ಟ್ರಸ್ಟ್‌ನ ಸೋಮನಾಥ ನಾಯಕ್, ವಿನಾಯಕ ಬಾಳಿಗಾರ ಸಹೋದರಿಯರಾದ ಹರ್ಷಾ ಬಾಳಿಗಾ, ಅನುರಾಧಾ ಬಾಳಿಗಾ, ಮಾಜಿ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್, ಪ್ರಮುಖರಾದ ಎಂ. ದೇವದಾಸ್, ವಾಸುದೇವ ಉಚ್ಚಿಲ್, ಸುನಿಲ್ ಬಜಿಲಕೇರಿ, ಸುನೀಲ್ ಕುಮಾರ್ ಬಜಾಲ್, ಬಿ.ಕೆ. ಇಮ್ತಿಯಾಝ್, ಮಂಜುಳಾ ನಾಯಕ್, ಪ್ರಕಾಶ್ ಸಾಲ್ಯಾನ್, ವಹಾಬ್ ಕುದ್ರೋಳಿ, ಸಂಜನಾ ಚಲವಾದಿ, ನಿತಿನ್ ಕುತ್ತಾರ್, ರಘು ಎಕ್ಕಾರ್, ರೇವಂತ್ ಕದ್ರಿ, ಕದ್ರಿ ಜೆರಾಲ್ಡ್ ಟವರ್ಸ್‌ ಮತ್ತಿತರರು ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು. ಡಿವೈಎಫ್‌ಐ ದ.ಕ.ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಕಾರ್ಯಕ್ರಮ ನಿರೂಪಿಸಿದರು.

Similar News