ಉಡುಪಿ: ರಾಮಾಂಜಿಗೆ ಬ್ಯಾಂಕ್ ಆಫ್ ಬರೋಡಾ ಸಾಧಕ ಪುರಸ್ಕಾರ ಪ್ರದಾನ

Update: 2023-03-21 18:30 GMT

ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಪದವಿ ಕೋರ್ಸ್‌ಗಳಲ್ಲಿ ಸರ್ವಾಂಗೀಣ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ನಾಮ ನಿರ್ದೇಶನಗೊಂಡ ಉಡುಪಿಯ ರಾಮಾಂಜಿ ನಮ್ಮಭೂಮಿ ಅವರಿಗೆ ಬ್ಯಾಂಕ್ ಆಫ್ ಬರೋಡಾ ಸಾಧಕ ಪುರಸ್ಕಾರವನ್ನು ಮಾ.18ರಂದು ಮಂಗಳೂರು ವಿವಿಯ ಸಿಂಡಿಕೇಟ್ ಸಭಾಂಗಣದಲ್ಲಿ ಪ್ರದಾನ ಮಾಡಲಾಯಿತು.

ಪುರಸ್ಕಾರವನ್ನು ಪ್ರದಾನ ಮಾಡಿದ ಮಂಗಳೂರು ವಿವಿಯ ಕುಲಪತಿ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಮಾತನಾಡಿ, ಅರ್ಹರಿಗೆ ಈ ಪುರಸ್ಕಾರ ದೊರೆತಿರುವುದು ಅದರ ಮೌಲ್ಯ ಇನ್ನಷ್ಟು ಹೆಚ್ಚಿದೆ. ಬ್ಯಾಂಕ್ ಆಫ್ ಬರೋಡಾ ಪ್ರತಿಭಾವಂತರನ್ನು ಗುರುತಿಸುವ ಕಾರ್ಯ ಶ್ಲಾಘನೀಯವಾಗಿದೆ ಎಂದು ತಿಳಿಸಿದರು.

ಪುರಸ್ಕಾರ ಸ್ವೀಕರಿಸಿ ಮಾತನಾಡಿದ ರಾಮಾಂಜಿ, ಈ ಪುರಸ್ಕಾರ ಮುಂದೆ ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಲು ಪ್ರೇರಣೆ ನೀಡಲಿದೆ. ಆದುದರಿಂದ ಪುರಸ್ಕಾರ ನೀಡಿದ ಸಂಸ್ಥೆಗಳಿಗೆ ಅಭಾರಿಯಾಗಿರುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬ್ಯಾಂಕ್ ಆಫ್ ಬರೋಡಾ ಕೊಣಾಜೆ ಶಾಖೆಯ ಹಿರಿಯ ಶಾಖಾ ವ್ಯವಸ್ಥಾಪಕ ಡೇರಿಕ್ ಡಿಸೋಜ, ಮಂಗಳೂರು ವಿವಿಯ ಕುಲಸಚಿವ ಡಾ.ಕಿಶೋರ್ ಕುಮಾರ್ ಸಿ.ಕೆ., ಹಣಕಾಸು ಅಧಿಕಾರಿ ಪ್ರೊ.ವೈ.ಸಂಗಪ್ಪ, ಪ್ರೊ.ಮೊನಿಕಾ ಸದಾನಂದ, ಪ್ರೊ.ಕಿಶೋರಿ ನಾಯಕ್ ಕೆ. ಮೊದಲಾದವರು ಉಪಸ್ಥಿತರಿದ್ದರು.

Similar News