PSI ನೇಮಕಾತಿ ಹಗರಣದಲ್ಲಿ ವಿಚಾರಣೆಗೆ ಒಳಗಾಗಿದ್ದ ವ್ಯಕ್ತಿ ಆತ್ಮಹತ್ಯೆ

Update: 2023-03-24 18:09 GMT

ಸಿದ್ದಾಪುರ (ಉ.ಕ.), ಮಾ.24: ರಾಜ್ಯದಲ್ಲಿ ಇತ್ತೀಚೆಗೆ ಪೊಲೀಸ್ ನೇಮಕಾತಿ ಅಕ್ರಮ ಹಗರಣದಲ್ಲಿ ವಿಚಾರಣೆಗೆ ಒಳಗಾಗಿದ್ದ ಓರ್ವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಾವು ಹೇರೂರು ಗ್ರಾಮದಲ್ಲಿ ಶುಕ್ರವಾರ ವರದಿಯಾಗಿದೆ.

ಗಣಪತಿ ಬಿ. ಭಟ್ (55) ಆತ್ಮಹತ್ಯೆಗೈದ ವ್ಯಕ್ತಿ. ಮೃತರು ನೆಲಮಾವು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರೆನ್ನಲಾಗಿದೆ. ಈ ಹಿಂದೆ ರಾಜ್ಯದಲ್ಲಿ ನಡೆದ ಪಿಎಸ್ಸೈ ನೇಮಕಾತಿಯ ಅಕ್ರಮ ಹಗರಣದಲ್ಲಿ ಗಣಪತಿಯವರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದು ಕೆಲ ದಿನಗಳ ವಿಚಾರಣೆ ನಡೆಸಿ ಬಿಡುಗಡೆ ಮಾಡಿದ್ದರು. ಬಳಿಕ ಅವರು ತಮ್ಮ ಊರಲ್ಲೇ ಉಳಿದುಕೊಂಡಿದ್ದು, ಈಗಲೂ ವಿಚಾರಣೆಗೆ ಹಾಜರಾಗುತ್ತಿದ್ದರೆಂದು ತಿಳಿದು ಬಂದಿದೆ.

ಗಣಪತಿ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಸಿದ್ದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Similar News