ಕೋಲಾರ ಕ್ಷೇತ್ರದಿಂದಲೂ ಟಿಕೆಟ್ ಕೇಳಿದ್ದೇನೆ: ಸಿದ್ದರಾಮಯ್ಯ

''ಯಾವುದೇ ಕ್ಷೇತ್ರದಿಂದ ಯತೀಂದ್ರ ಸ್ಪರ್ಧೆ ಮಾಡಲ್ಲ...''

Update: 2023-03-25 13:10 GMT

ಬೆಂಗಳೂರು, ಮಾ. 25: ‘ನಾನು ಮೈಸೂರಿನ ವರುಣಾ ಮತ್ತು ಕೋಲಾರ ಎರಡು ಕ್ಷೇತ್ರದಲ್ಲಿಯೂ ಟಿಕೆಟ್ ಕೇಳಿದ್ದು, ಹೈಕಮಾಂಡ್ ವರುಣಾ ಕ್ಷೇತ್ರದಲ್ಲಿ ನಿಲ್ಲಲು ಸೂಚಿಸಿದೆ. ವರಿಷ್ಠರ ತೀರ್ಮಾನವೇ ಅಂತಿಮ’ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಶನಿವಾರ ಮುಂಬರಲಿರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗೊಂದಲ ಇಲ್ಲದ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿದೆ. ಸ್ಕ್ರೀನಿಂಗ್ ಹಾಗೂ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ಚರ್ಚೆ ನಡೆದು ಪಟ್ಟಿ ಬಿಡುಗಡೆ ಮಾಡಲಾಗಿದೆ’ ಎಂದು ಹೇಳಿದರು.

‘ಹಾಲಿ ಶಾಸಕರ ಆರು ಕ್ಷೇತ್ರದಲ್ಲಿ ಹೆಚ್ಚು ಆಕಾಂಕ್ಷಿಗಳು ಇದ್ದಾರೆ. ಹೀಗಾಗಿ, ಆ ಕ್ಷೇತ್ರಗಳಿಗೆ ಘೋಷಣೆ ಮಾಡಿಲ್ಲ. ಎರಡನೆ ಪಟ್ಟಿಯಲ್ಲಿ ಆ ಕ್ಷೇತ್ರಗಳ ಟಿಕೆಟ್ ಘೋಷಣೆ ಆಗಲಿದೆ. ಟಿಕೆಟ್ ನೀಡಲು ಸಮೀಕ್ಷೆ ಒಂದೇ ಮಾನದಂಡ ಅಲ್ಲ. ಕಾರ್ಯಕರ್ತರ ಅಭಿಪ್ರಾಯವೂ ಮುಖ್ಯವಾಗಿದೆ. ಪಕ್ಷದ ಪದಾಧಿಕಾರಿಗಳ ವರದಿಯನ್ನು ಆಧರಿಸಿ ಟಿಕೆಟ್ ಹಂಚಿಕೆ ಮಾಡಲಾಗಿದೆ’ ಎಂದು ಅವರು ಸ್ಪಷ್ಟಪಡಿಸಿದರು.

''ಯತೀಂದ್ರ ಅವರ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುತ್ತಿರೋದರಿಂದ ಅವರು ಬೇರೆ ಯಾವುದೇ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ'' ಎಂದು ಇದೇ ವೇಳೆ ಸ್ಪಷ್ಟಪಡಿಸಿದರು. 

‘ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರನ್ನು ತರಾತುರಿಯಲ್ಲಿ ಅನರ್ಹ ಮಾಡಲಾಗಿದೆ. ರಾಹುಲ್ ವರ್ಚಸ್ಸಿಗೆ ಧಕ್ಕೆ ತರಲು ಬಿಜೆಪಿ ಸರಕಾರ ಹೊರಟಿದ್ದಾರೆ. ದೇಶದಲ್ಲಿ ಇಂತಹ ಬೆಳವಣಿಗೆ ಎಂದೂ ಆಗಿರಲಿಲ್ಲ. ಭಾರತ್ ಜೋಡೊ ಯಶಸ್ಸು ಬಿಜೆಪಿಗೆ ತಡೆಯಲಾಗಲಿಲ್ಲ. ಈ ಅನರ್ಹತೆಯಿಂದ ರಾಹುಲ್ ಮತ್ತಷ್ಟು ಜನಪ್ರಿಯರಾಗಲಿದ್ದಾರೆ’ ಎಂದು ಸಿದ್ದರಾಮಯ್ಯ ನುಡಿದರು.

Similar News