ಮುಸ್ಲಿಂ ಮೀಸಲಾತಿ ರದ್ದು ಮಾಡುವ ಮೂಲಕ ದ್ವೇಷದ ರಾಜಕಾರಣ: ಸಿದ್ದರಾಮಯ್ಯ

Update: 2023-03-26 08:40 GMT

ಬೆಂಗಳೂರು,ಮಾ.26: ಬಿಜೆಪಿ ಸರ್ಕಾರ ಮೀಸಲಾತಿ ವಿಚಾರವಾಗಿ ಗೊಂದಲ ಸೃಷ್ಟಿಸಿ ಸೇಡಿನ ರಾಜಕಾರಣ ಮಾಡಿ ಜನರನ್ನು ಧರ್ಮ, ಜಾತಿ ಆಧಾರದ ಮೇಲೆ ವಿಭಜನೆ ಮಾಡುವ, ಜನರಿಗೆ ತಪ್ಪು ಮಾಹಿತಿ ನೀಡಿ ಮೋಸ ಮಾಡುವ ಪ್ರಯತ್ನವನ್ನು ಮಾಡಿದೆ. ಮೀಸಲಾತಿಯ ಹೊಸ ವರ್ಗೀಕರಣ ಮಾಡುವ ಮೂಲಕ ಬಿಜೆಪಿ ಸರ್ಕಾರ ನಾಡಿಗೆ ದ್ರೋಹ ಎಸಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವರು ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ ಅವರ ಜೊತೆಗೂಡಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. 

ಅಂಬೇಡ್ಕರರು ನೀಡಿರುವ ಸಂವಿಧಾನದ ಉದ್ದೇಶ ಯಾವುದೇ ಜಾತಿ, ದರ್ಮ, ಲಿಂಗದ ಆಧಾರದ ಮೇಲೆ ತಾರತಮ್ಯ ಮಾಡದೆ ಸಮಾನ ರಕ್ಷಣೆ ನೀಡಬೇಕು. ಇದನ್ನೇ ಸಂವಿಧಾನದ 14ನೇ ಪರಿಚ್ಛೇದ ಹೇಳುವುದು. 15 ಮತ್ತು 16ನೇ ಪರಿಚ್ಛೇದವು ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿದೆ. ಯಾರು ಅವಕಾಶಗಳಿಂದ ವಂಚಿತರಾಗಿದ್ದಾರೆ ಆ ಜನರಿಗೆ ವಿಶೇಷ ಸವಲತ್ತು ನೀಡಿ, ಅವರನ್ನು ಕೂಡ ಮುಖ್ಯವಾಹಿನಿಗೆ ತರಬೇಕು ಎಂಬುದು ಇದರ ಉದ್ದೇಶ. ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದೆ ಇರುವವರನ್ನು ಮುಖ್ಯವಾಹಿನಿಗೆ ತಂದಾಗ ಮಾತ್ರ ಸಮಸಮಾಜ ಸ್ಥಾಪನೆಯ ಕಡೆಗೆ ಹೋಗಲು ಸಾಧ್ಯವಾಗುತ್ತದೆ. ಇದನ್ನು ಸಂವಿಧಾನ ಸ್ಟಷ್ಟವಾಗಿ ಹೇಳಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮೀಸಲಾತಿ ನೀಡುತ್ತ ಬಂದಿತ್ತು ಎಂದರು. 

ಎಲ್ಲಿಯವರೆಗೆ ಜಾತಿ ವ್ಯವಸ್ಥೆ ಇರುತ್ತದೆ ಅಲ್ಲಿಯವರೆಗೆ ಮೀಸಲಾತಿ ಇರಬೇಕು ಎಂದು ಬಾಬಾ ಸಾಹೇಬರು ಹೇಳಿದ್ದಾರೆ. ಜಾತಿ ವ್ಯವಸ್ಥೆ ಇರುವುದರಿಂದಲೇ ಅಸಮಾನತೆ ನಿರ್ಮಾಣವಾಗಿರುವುದು. 1949ರ ನವೆಂಬರ್‌ 25ರಂದು ಅಂಬೇಡ್ಕರರು ಮಾಡಿದ ಭಾಷಣದಲ್ಲಿ, 1950ರ ಜನವರಿ 26ರಿಂದ ನಾವು ವೈರುದ್ಯತೆ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ, ಇಲ್ಲಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ, ಆರ್ಥಿಕವಾಗಿ ಅಸಮಾನತೆ ಇದೆ. ಇದನ್ನು ಹೋಗಲಾಡಿಸಬೇಕಿರುವುದು ನಮ್ಮೆಲ್ಲರ ಕರ್ತವ್ಯ. ಇದನ್ನು ಮಾಡದೆ ಹೋದರೆ ನಮಗೆ ಸ್ವಾತಂತ್ರ್ಯ ಬಂದಿದ್ದಕ್ಕೆ ಅರ್ಥವಿರುವುದಿಲ್ಲ. ನಾವು ಈ ಅಸಮಾನತೆಯನ್ನು ಹೋಗಲಾಡಿಸದೆ ಹಾಗೆಯೇ ಮುಂದುವರೆಸಿಕೊಂಡು ಹೋದರೆ ಯಾರು ಅಸಮಾನತೆ, ಅನ್ಯಾಯಕ್ಕೆ ಒಳಗಾಗಿದ್ದಾರೆ ಆ ಜನರೇ ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆ ಎಂಬ ಎಚ್ಚರಿಕೆ ನೀಡಿದ್ದರು. 

ಪರಿಶಿಷ್ಟ ಜಾತಿ ಮತ್ತು ವರ್ಗದ ಜನರಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು ಎಂದು ಸಂವಿಧಾನ ಹೇಳಿದೆ. ಹಿಂದುಳಿದವರಿಗೆ ಮೀಸಲಾತಿ ನೀಡಬೇಕು ಎಂಬುದು ಆರಂಭದಲ್ಲಿ ಸಂವಿಧಾನದಲ್ಲಿ ಇಲ್ಲದಿದ್ದರು 1951ರಲ್ಲಿ ಮೊದಲನೇ ತಿದ್ದುಪಡಿ ತಂದು ಸೇರಿಸಲಾಗಿದೆ. ರಾಜ್ಯದಲ್ಲಿ ನಾಗನಗೌಡ ಆಯೋಗ, ಎಲ್.ಜಿ ಹಾವನೂರು, ಚಿನ್ನಪ್ಪರೆಡ್ಡಿ, ವೆಂಕಟಸ್ವಾಮಿ ಅವರ ಸಮಿತಿ ಹೀಗೆ 4 ಸಮಿತಿಗಳು ರಚನೆಯಾಗಿ ವರದಿ ನೀಡಿವೆ. ಕೇಂದ್ರದಲ್ಲಿ ಮಂಡಲ್‌ ಕಮಿಷನ್‌ ರಚನೆಯಾಗಿ ವರದಿ ನೀಡಿದೆ. ಇದರ ಆಧಾರದ ಮೇಲೆ ಮೀಸಲಾತಿ ನಿಗದಿಯಾಗಿದೆ ಎಂದರು.

ಮೇ 1995ರಿಂದ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಲಾಗಿದೆ. ಇದನ್ನು ರದ್ದು ಮಾಡಿ ಎಂದು ಈ ವರೆಗೆ ಯಾವುದೇ ನ್ಯಾಯಾಲಯದ ತೀರ್ಪು ಬಂದಿಲ್ಲ, ಯಾವ ಸಮಿತಿಯ ವರದಿಗಳು ಬಂದಿಲ್ಲ. ಹೀಗಿರುವಾಗ ರಾಜ್ಯ ಸರ್ಕಾರ ಯಾಕೆ ಮುಸ್ಲಿಂಮರ ಮೀಸಲಾತಿ ರದ್ದು ಮಾಡುವ ನಿರ್ಧಾರ ಕೈಗೊಂಡಿದೆ. ಇದರಿಂದ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ. ಮುಸ್ಲಿಂಮರಿಗೆ 4% ಮೀಸಲಾತಿ ಹಿಂದಿನಿಂದ ಇದೆ, ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಲಾಗಿಲ್ಲ ಎಂಬುದು ನಿಜ ಎಂದಿದ್ದಾರೆ.

ತಮ್ಮ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಒಕ್ಕಲಿಗರು 12% ಮೀಸಲಾತಿ ಕೇಳಿದ್ದರು, ವೀರಶೈವ ಲಿಂಗಾಯತರು 15% ಮೀಸಲಾತಿ ಮತ್ತು ತಮ್ಮನ್ನು 2ಎ ಗೆ ಸೇರಿಸುವಂತೆ ಕೇಳಿದ್ದರು. 1992ರಲ್ಲಿ ಇಂದಿರಾ ಸಹಾನಿ ಪ್ರಕರಣದಲ್ಲಿ 9 ಮಂದಿ ನ್ಯಾಯಮೂರ್ತಿಗಳ ಪೀಠವು ಮೀಸಲಾತಿ 50% ಮೀರಬಾರದು ಎಂದು ಹೇಳಿತ್ತು, ರಾಜ್ಯದಲ್ಲಿ ಈಗ ಮೀಸಲಾತಿ 50% ಇದೆ, ನ್ಯಾಯಾಲಯದ ಈ ತೀರ್ಪನ್ನು ಬದಲಾವಣೆ ಮಾಡಬೇಕಾಗಿರುವುದು ಸಂಸತ್ತು. ಬದಲಾವಣೆ ಮಾಡಿರುವುದು ಊರ್ಜಿತವಾಗಬೇಕಾದರೆ ಸಂವಿಧಾನದ 9ನೇ ಶೆಡ್ಯೂಲ್‌ ಗೆ ಸೇರಿಸಬೇಕು. ಇವರು ಇದ್ಯಾವುದನ್ನಾದರೂ ಮಾಡಿದ್ದಾರ? ಎಂದು ಪ್ರಶ್ನಿಸಿದರು. 

ಇಂದಿರಾ ಸಹಾನಿ ಪ್ರಕರಣದ ತೀರ್ಪಿನ ಪ್ರಕಾರ ಪ್ರತೀ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ರಚನೆಯಾಗಬೇಕು ಮತ್ತು 10 ವರ್ಷಕ್ಕೊಮ್ಮೆ ಅದರ ಪರಿಶೀಲನೆ ಮಾಡಬೇಕು ಎಂದು ಹೇಳಿದ್ದಾರೆ. ಯಾವುದನ್ನೇ ಹಿಂದುಳಿದ ವರ್ಗಗಳ ಪಟ್ಟಿಯಿಂದ ತೆಗೆದುಹಾಕಬೇಕಾದರೆ ಅಥವಾ ಸೇರಿಸಬೇಕಾದರೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಶಿಫಾರಸು ಬೇಕು. ಅಲ್ಪಸಂಖ್ಯಾತರನ್ನು ಮೀಸಲಾತಿಯಿಂದ ತೆಗೆದುಹಾಕಿ ಎಂದು ರಿಪೋರ್ಟ್‌ ಎಲ್ಲಿದೆ? ಇದು ಅಲ್ಪಸಂಖ್ಯಾತರಿಗೆ ಮಾಡುತ್ತಿರುವ ಅನ್ಯಾಯ ಅಲ್ಲವಾ? 1995ರಿಂದ ಈ ವರೆಗೆ ನೀಡುತ್ತಿದ್ದ ಮೀಸಲಾತಿಯನ್ನು ಈಗ ತೆಗೆದುಹಾಕಲು ಕಾರಣವೇನು? ಅವರನ್ನು ಇ.ಡಬ್ಲ್ಯು.ಎಸ್‌ ಗೆ ಸೇರಿಸಿ ಎಂದು ಯಾರಾದರೂ ಕೇಳಿದ್ದರಾ ಅಥವಾ ಯಾವುದಾದರೂ ವರದಿ ಇದೆಯಾ? ಎಂದರು.

ಕಾಂಗ್ರೆಸ್‌ ಪಕ್ಷ ಸಾಮಾಜಿಕ ನ್ಯಾಯದ ಪರ ಇದೆ. ನಾವು ಯಾವುದೇ ಜಾತಿ, ಧರ್ಮ, ಲಿಂಗದ ಜನರಿಗೆ ತಾರತಮ್ಯ ಮಾಡದೆ ರಕ್ಷಣೆ ಸಿಗಬೇಕು ಎಂದು ಪ್ರತಿಪಾದಿಸುವವರು. ಎಲ್ಲಾ ಕಾಲದಲ್ಲೂ ಮೀಸಲಾತಿ ನೀಡಿದವರು ಕಾಂಗ್ರೆಸ್‌ ನವರೇ, ಎಲ್ಲಾ ಕಾಲದಲ್ಲೂ ಅವಕಾಶವಂಚಿತರಿಗೆ ಮೀಸಲಾತಿ ಕಲ್ಪಿಸಲು ಸಂವಿಧಾನ ತಿದ್ದುಪಡಿ ಮಾಡಿದವರು ಕಾಂಗ್ರೆಸ್‌ ನವರೇ. ಬಿಜೆಪಿ ಮಾಡಿರುವ ಏಕೈಕ ತಿದ್ದುಪಡಿ ಎಂದರೆ ಆರ್ಥಿಕವಾಗಿ ದುರ್ಬಲರಾದ ಸಾಮಾನ್ಯ ವರ್ಗದ ಜನರಿಗೆ ಮೀಸಲಾತಿ ನೀಡಲು ತಿದ್ದುಪಡಿ ತಂದಿದ್ದು. ಬಿಜೆಪಿ ಒಮ್ಮೆಯಾದರೂ ಸಾಮಾಜಿಕ ನ್ಯಾಯದ ಪರ ಮಾತನಾಡಿರುವ ಒಂದೇ ಒಂದು ವಾಕ್ಯ ಇದ್ದರೆ ತೋರಿಸಲಿ ನೋಡೋಣ. ಕಾಂಗ್ರೆಸ್‌ ಪಕ್ಷ ಮಾತ್ರ ಹಿಂದಿನಿಂದಲೂ ಸಂವಿಧಾನದ ಧ್ಯೇಯೋದ್ದೇಶಗಳನ್ನು ಗೌರವಿಸಿಕೊಂಡು ಬಂದು, ಅದರ ಆಶಯದಂತೆ ನಡೆಯುತ್ತಿದೆ ಎಂದರು.

ಸಮಿತಿಯ ಶಿಫಾರಸಿಗೆ ವಿರುದ್ಧವಾಗಿ ಮೀಸಲಾತಿ ಪರಿಷ್ಕರಣೆ ಮಾಡಿರುವ ರಾಜ್ಯ ಸರ್ಕಾರವನ್ನು ವಜಾ ಮಾಡುವಂತೆ ಆಗ್ರಹಿಸುತ್ತೇನೆ. ಕೇಂದ್ರ ಸರ್ಕಾರ ಈ ಕೂಡಲೇ ಮಧ್ಯಪ್ರವೇಶ ಮಾಡಬೇಕು. ಈ ಸರ್ಕಾರಕ್ಕೆ ಸಂವಿಧಾನಾತ್ಮಕವಾಗಿ ಮುಂದುವರೆಯುವ ಹಕ್ಕು ಇಲ್ಲ ಎಂದರು.

Similar News