ಬಿಜೆಪಿ ಮಾಜಿ ಸಂಸದ ಮಂಜುನಾಥ್ ಕುನ್ನೂರು, ಕೆ.ಆರ್.ಪೇಟೆ ದೇವರಾಜ್ ಸೇರಿ ಹಲವರು ಕಾಂಗ್ರೆಸ್ ಸೇರ್ಪಡೆ

Update: 2023-03-27 13:09 GMT

ಬೆಂಗಳೂರು, ಮಾ.27: ಮಾಜಿ ಸಂಸದ ಶಿಗ್ಗಾಂವಿಯ ಮಂಜುನಾಥ್ ಕುನ್ನೂರು, ಕೆ.ಆರ್.ಪೇಟೆ ಜೆಡಿಎಸ್ ಮುಖಂಡ ದೇವರಾಜ್ ಹಾಗೂ ಚಿಂತಾಮಣಿ ಕಾಂಗ್ರೆಸ್ ಅಭ್ಯರ್ಥಿ ಡಾ.ಎಂ.ಸಿ.ಸುಧಾಕರ್ ಸೇರಿದಂತೆ ಅವರ 100ಕ್ಕೂ ಹೆಚ್ಚು ಬೆಂಬಲಿಗರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದಾರೆ.

ಸೋಮವಾರ ನಗರದ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ 2008, 2013ರಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ್ದ ಡಾ.ಎಂ.ಸಿ.ಸುಧಾಕರ್ ಕಳೆದ ಚುನಾವಣೆಯಲ್ಲಿ ಅವರು ಬಿಜೆಪಿ ಸೇರಿದ್ದರು. ಆದರೆ, ಕೆಲ ತಿಂಗಳ ಹಿಂದೆ ಅವರು ಮತ್ತೆ ಕಾಂಗ್ರೆಸ್‍ಗೆ ವಾಪಸ್ಸಾಗಿದ್ದಾರೆ. ಅವರನ್ನು ಬೆಂಬಲಿಸಿ 100ಕ್ಕೂ ಹೆಚ್ಚು ಮುಖಂಡರು ಕಾಂಗ್ರೆಸ್ ಸೇರಿದ್ದಾರೆ.

ಮಾಜಿ ಸಂಸದ ಮಂಜುನಾಥ್ ಕುನ್ನೂರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದು, ಈ ಮೂಲಕ ಮುಖ್ಯಮಂತ್ರಿ ಬೊಮ್ಮಾಯಿ ಅವರ ತವರು ಶಿಗ್ಗಾಂವ್ ಕ್ಷೇತ್ರದ ರಾಜು ಕುನ್ನೂರು ಸೇರಿದಂತೆ ಹಲವು ಬಿಜೆಪಿ ಮುಖಂಡರು ಮಂಜುನಾಥ್ ಕುನ್ನೂರು ಅವರನ್ನು ಬೆಂಬಲಿಸಿದ್ದಾರೆ. ಇನ್ನು ಕೆ.ಆರ್.ಪೇಟೆಯ ಪ್ರಭಾವಿ ಜೆಡಿಎಸ್ ಮುಖಂಡರಾಗಿದ್ದ ದೇವರಾಜು ಅವರು ಜೆಡಿಎಸ್ ಅನ್ನು ತೊರೆದು ಅಧಿಕೃತವಾಗಿ ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದಾರೆ. ಕೆ.ಆರ್.ಪೇಟೆಯ ನೂರಾರು ಮುಖಂಡರು ಅವರನ್ನು ಬೆಂಬಲಿಸುವ ಮೂಲಕ ಕಾಂಗ್ರೆಸ್ ಸೇರಿದ್ದಾರೆ.

ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಚಿಂತಾಮಣಿ, ಶಿಗ್ಗಾಂವಿ, ಕೆ.ಆರ್.ಪೇಟೆ ಕ್ಷೇತ್ರಗಳ ನಾಯಕರು, ಕಾರ್ಯಕರ್ತರು ಏಕಕಾಲಕ್ಕೆ ಜಮಾಯಿಸಿದ್ದ ಕಾರಣ ಕೆಲಕಾಲ ನೂಕು ನುಗ್ಗಲು ಉಂಟಾಯಿತು. ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸ್ ಸಿಬ್ಬಂದಿಗಳು ಹರಸಾಹಸಪಟ್ಟರು.

Similar News