ಶಾಸಕ ನೆಹರು ಓಲೇಕಾರ್ ಅನರ್ಹತೆಗೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರಿಂದಲೇ ದೂರು

Update: 2023-03-28 14:35 GMT

ಬೆಂಗಳೂರು, ಮಾ. 28: ಕ್ರಿಮಿನಲ್ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾದ ಹಾವೇರಿಯ ಬಿಜೆಪಿ ಶಾಸಕ ನೆಹರೂ ಓಲೇಕಾರ ಅವರನ್ನು ಅನರ್ಹಗೊಳಿಸುವಂತೆ ಬಿಜೆಪಿ ಕಾರ್ಯಕರ್ತನೊಬ್ಬರು ರಾಜ್ಯಪಾಲರು, ವಿಧಾನಸಭೆ ಕಾರ್ಯದರ್ಶಿಗೆ ದೂರು ಸಲ್ಲಿಸಿದ್ದಾರೆ.

ಹಾವೇರಿಯ ಬಿಜೆಪಿ ಕಾರ್ಯಕರ್ತ ಸಂತೋಷ್ ರೆಡ್ಡಿ ಎಂಬವರು ದೂರು ನೀಡಿದ್ದು, ನೆಹರೂ ಓಲೇಕಾರ ಅನರ್ಹತೆಗೆ ಒತ್ತಾಯಿಸಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್, ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ದೂರು ನೀಡಿದ್ದಾರೆ.

ಫೆಬ್ರವರಿ 13ರಂದು ಜನಪ್ರತಿನಿಧಿಗಳ ನ್ಯಾಯಾಲಯದಿಂದ ಎರಡು ವರ್ಷ ಶಿಕ್ಷೆ ಪ್ರಕಟಿಸಿತ್ತು. ಈ ಆದೇಶಕ್ಕೆ ಇನ್ನೂ ಹೈಕೋರ್ಟ್‍ನಿಂದ ತಡೆಯಾಜ್ಞೆ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ಕಾಯ್ದೆಯಡಿ ನೆಹರೂ ಓಲೇಕಾರ್‍ರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಮನವಿ ಮಾಡಿದ್ದಾರೆ. 

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ನೆಹರೂ ಓಲೇಕಾರ ಅವರಿಗೆ ಫೆ.13ರಂದು ನ್ಯಾಯಾಲಯ ಎರಡು ವರ್ಷದ ಶಿಕ್ಷೆ ವಿಧಿಸಿತ್ತು. ಓಲೇಕಾರ್ ಈ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್‍ಗೆ ಮೊರೆ ಹೋಗಿದ್ದಾರೆ. ಆದರೆ ಹೈಕೋರ್ಟ್ ಸಿವಿಲ್ ಕೋರ್ಟ್ ನೀಡಿದ್ದ ಸಜೆಗೆ ತಡೆಯಾಜ್ಞೆ ನೀಡಿಲ್ಲ. ಜನಪ್ರತಿನಿಧಿಗಳ ಕಾಯ್ದೆಯಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

Similar News