ಚುನಾವಣಾ ನೀತಿ ಸಂಹಿತೆಯ ನೆಪದಲ್ಲಿ ಜನಸಾಮಾನ್ಯರಿಗೆ ತೊಂದರೆ ಬೇಡ: ಯು.ಟಿ.ಖಾದರ್

ಮಾಹಿತಿ-ನಿಯಂತ್ರಣ ಕೊಠಡಿ ತೆರೆಯಲು ಮನವಿ

Update: 2023-03-31 15:14 GMT

ಮಂಗಳೂರು: ಚುನಾವಣಾ ನೀತಿ ಸಂಹಿತೆಯ ನೆಪದಲ್ಲಿ ಜನಸಾಮಾನ್ಯರಿಗೆ ತೊಂದರೆ ಕೊಡುವುದನ್ನು ಅಧಿಕಾರಿಗಳು ನಿಲ್ಲಿಸಬೇಕು. ನೀತಿ ಸಂಹಿತೆಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳು ಕಿರಿಯ ಅಧಿಕಾರಿ, ಸಿಬ್ಬಂದಿ ವರ್ಗಕ್ಕೆ ಸ್ಪಷ್ಟ ನಿರ್ದೇಶನ ನೀಡಬೇಕು ಎಂದು ರಾಜ್ಯ ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹೇಳಿದ್ದಾರೆ.

ನಗರದ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನೀತಿ ಸಂಹಿತೆಯನ್ನು ಅನುಷ್ಠಾನಗೊಳಿಸುವ ಭರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಬ್ಯಾನರ್, ಫ್ಲೆಕ್ಸ್, ಬಂಟಿಂಗ್ಸ್‌ಗಳನ್ನು ತೆರವುಗೊಳಿಸಿರುವುದು ಸರಿಯಲ್ಲ. ಆ ಬ್ಯಾನರ್‌ನಲ್ಲಿ ರಾಜಕಾರಣಿಗಳ, ಜನಪ್ರತಿನಿಧಿಗಳ ಫೋಟೊ, ಅನುದಾನ ಇತ್ಯಾದಿ ವಿವರಗಳಿದ್ದರೆ ತೆರವುಗೊಳಿಸಲಿ. ಅದು ಬಿಟ್ಟು ಕೇವಲ ಧಾರ್ಮಿಕ ಕಾರ್ಯಕ್ರಮಗಳ ಬ್ಯಾನರ್‌ಗಳನ್ನು ತೆರವುಗೊಳಿಸುತ್ತಿರುವುದು ಅಕ್ಷಮ್ಯ. ಅಧಿಕಾರಿ, ಸಿಬ್ಬಂದಿ ವರ್ಗಕ್ಕೆ ಮಾಹಿತಿಯ ಕೊರತೆ ಇರುವುದರಿಂದಲೇ ಈ ಸಮಸ್ಯೆ ಸೃಷ್ಟಿಯಾಗಿದೆ. ಗೊಂದಲವೂ ನಿರ್ಮಾಣವಾಗಿದೆ. ಈ ಬಗ್ಗೆ ಮಾಹಿತಿ ಪಡೆಯಲು ಮತ್ತು ನಿಯಮ ಮೀರಿ ಕಾರ್ಯಾಚರಿಸುವ ಅಧಿಕಾರಿ, ಸಿಬ್ಬಂದಿ ವರ್ಗದ ವಿರುದ್ಧ ದೂರು ಸಲ್ಲಿಸಲು ನಿಯಂತ್ರಣ ಕೊಠಡಿ ತೆರೆಯಬೇಕು ಎಂದರು.

ಜಿಲ್ಲಾದ್ಯಂತ ನೀರಿನ ಸಮಸ್ಯೆ ಸೃಷ್ಟಿಯಾಗಿದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಈ ಸಮಸ್ಯೆಗೆ ಕ್ಷಿಪ್ರಗತಿಯಲ್ಲಿ ಪರಿಹಾರ ಕಂಡುಕೊಳ್ಳಲು ಜನಪ್ರತಿನಿಧಿಗಳಿಗೆ ಸಾಧ್ಯವಾಗುತ್ತಿಲ್ಲ.  ಮುಖ್ಯಮಂತ್ರಿ ಸಹಿತ ಸಚಿವರು ಚುನಾವಣಾ ಪ್ರಚಾರದಲ್ಲಿ ಮಗ್ನರಾಗಿದ್ದರೇ ವಿನಃ ನೀತಿ ಸಂಹಿತೆ ಜಾರಿಗೆ ಮುನ್ನ ಮೂಲಭೂತ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಿಲ್ಲ. ಸರಕಾರದ ನಿರ್ಲಕ್ಷ್ಯದಿಂದ ಇದೀಗ ಜನಸಾಮಾನ್ಯರು ಸಮಸ್ಯೆ ಎದುರಿಸುತ್ತಿದ್ದಾರೆ. ಹಾಗಾಗಿ ಜಿಲ್ಲಾಡಳಿತವು ಶೀಘ್ರ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಯು.ಟಿ. ಖಾದರ್ ಒತ್ತಾಯಿಸಿದರು.

ಗೊಂದಲವಿಲ್ಲ: ಜಿಲ್ಲೆಯ 8 ಕ್ಷೇತ್ರಗಳ ಪೈಕಿ 5 ಸ್ಥಾನಗಳಿಗೆ ಪಕ್ಷ ಈಗಾಗಲೆ ಅಭ್ಯರ್ಥಿಗಳನ್ನು ಘೋಷಿಸಿದೆ. ಇನ್ನುಳಿದ 3 ಕ್ಷೇತ್ರಗಳಿಗೆ ಶೀಘ್ರ ಅಭ್ಯರ್ಥಿಗಳನ್ನು ಘೋಷಿಸಲಿದೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಬಿಜೆಪಿ ಸರಕಾರವನ್ನು ಕಿತ್ತೊಗೆಯಲು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು, ಟಿಕೆಟ್ ಆಕಾಂಕ್ಷಿಗಳು, ಅಭ್ಯರ್ಥಿಗಳು ಕಟಿಬಬ್ಧರಾಗಿದ್ದಾರೆ ಎಂದ ಖಾದರ್, ತನ್ನ ವಿರುದ್ಧ ಯಾರೇ ಕಣಕ್ಕಿಳಿದರೂ ಕೂಡ ಮುಕ್ತವಾಗಿ ಸ್ವಾಗತಿಸುವೆ.  ಈಗಾಗಲೆ ಪಕ್ಷದ ಕಾರ್ಯಕರ್ತರು ನನ್ನ ಗೆಲುವಿಗೆ ಬಿರುಸಿನ ಪ್ರಚಾರ ಆರಂಭಿಸಿದ್ದಾರೆ ಎಂದರು.

*ಮೀಸಲಾತಿಯಲ್ಲಿ ಗೊಂದಲ: ರಾಜ್ಯ ಬಿಜೆಪಿ ಸರಕಾರ ಉದ್ದೇಶಪೂರ್ವಕವಾಗಿ ಕೊನೆಯ ಕ್ಷಣದಲ್ಲಿ ಮುಸ್ಲಿಮರ 2ಬಿ ಮೀಸಲಾತಿಯನ್ನು ರದ್ದುಗೊಳಿಸಲು ಮುಂದಾಗಿವೆ. ಈ ಹಿಂದೆ ಎಲ್ಲಾ ಮೀಸಲಾತಿಯನ್ನು ರದ್ದುಗೊಳಿಸಬೇಕು ಎಂದು ಹೈಕೋರ್ಟ್‌ಗೆ ಮೊರೆ ಹೋದವರು ಕೂಡ ಇದೇ ಬಿಜೆಪಿಗರಾಗಿದ್ದಾರೆ. ಇವರಿಗೆ ಮುಸ್ಲಿಮರು ನೆಪಮಾತ್ರ. ಭವಿಷ್ಯದಲ್ಲಿ ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ವರ್ಗದವರ ಮೀಸಲಾತಿಯನ್ನು ಕಸಿಯುವುದು ಇವರ ಷಡ್ಯಂತ್ರವಾಗಿದೆ. ಆದರೆ ಈ ವಿಚಾರದಲ್ಲಿ ಬಿಜೆಪಿಗರು ಯಶಸ್ಸು ಕಾಣುವುದಿಲ್ಲ. ರಾಜ್ಯದ ಜನರು ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲಿದ್ದಾರೆ ಎಂದರು.

ರಾಜಕೀಯ ಮೀಸಲಾತಿಯಲ್ಲೇ ಬಿಜೆಪಿ ಗೊಂದಲ ಸೃಷ್ಟಿಸಿದೆ. ಅದನ್ನು ನಿವಾರಿಸಲು ಇನ್ನೂ ಈ ಸರಕಾರಕ್ಕೆ ಆಗಿಲ್ಲ. ಇದರಿಂದ ಕಳೆದ ಒಂದುವರೆ ವರ್ಷದಿಂದ ಸ್ಥಳೀಯಾಡಳಿತದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯ ಪ್ರಕ್ರಿಯೆ ಆಗಿಲ್ಲ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕೊಡುವುದಾದರೆ ದಲಿತರಿಗೆ ಮೀಸಲಾತಿಯಲ್ಲಿ ಹೆಚ್ಚಿನ ಪಾಲು ನೀಡಬೇಕು. ಆದರೆ ಅದಕ್ಕೆ ಕೇಂದ್ರ ಸರಕಾರ ಒಪ್ಪಿಗೆ ನೀಡುತ್ತಿಲ್ಲ. ಒಟ್ಟಿನಲ್ಲಿ ಗೊಂದಲ ಸೃಷ್ಟಿಸಿ ರಾಜಕೀಯ ಲಾಭ ಪಡೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಖಾದರ್ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್, ಮುಖಂಡರಾದ ಸುಹೈಲ್ ಕಂದಕ್, ಉದಯ್ ಆಚಾರ್, ನಝೀರ್ ಮಠ ಉಪಸ್ಥಿತರಿದ್ದರು.

Similar News