ಪ್ರಜಾಪ್ರಭುತ್ವ ಮಾದರಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಅಭಿಪ್ರಾಯ ಸಂಗ್ರಹ: ಜಗದೀಶ್ ಹಿರೇಮನೆ

Update: 2023-03-31 14:53 GMT

ಉಡುಪಿ, ಮಾ.31: ಭಾರತೀಯ ಜನತಾ ಪಾರ್ಟಿ ತನ್ನ ಪಕ್ಷದ ಸಂವಿಧಾನದ ಚೌಕಟ್ಟಿನೊಳಗೆ ಹಮ್ಮಿ ಕೊಂಡಿರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗಳಲ್ಲಿ ಒಂದಾಗಿರುವ ಶಕ್ತಿಕೇಂದ್ರ ಮತ್ತು ಮೇಲ್ಪಟ್ಟ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಣೆ ಅಭಿಯಾನವು ರಾಜಕೀಯ ಪಕ್ಷಗಳಲ್ಲೇ ಒಂದು ಐತಿಹಾಸಿಕ ಹೆಜ್ಜೆಯಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನೆ ಹೇಳಿದ್ದಾರೆ.

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಇಂದು ನಡೆದ ವಿಧಾನಸಭಾ ಚುನಾವಣಾ ಮಂಡಲವಾರು ಅಭಿಪ್ರಾಯ ಸಂಗ್ರಹಣೆ ಸಭೆಯಲ್ಲಿ ರಾಜ್ಯ ತಂಡದ ನೇತೃತ್ವ ವಹಿಸಿ ಅವರು ಮಾತನಾಡುತಿದ್ದರು. ತನ್ನ ಕ್ಷೇತ್ರದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾರಾಗಬೇಕು ಎಂಬುದರ ಬಗ್ಗೆ ಪಕ್ಷದ ಸಾಮಾನ್ಯ ಕಾರ್ಯಕರ್ತ ನಿಂದಲೂ ಅಭಿಪ್ರಾಯ ಸಂಗ್ರಹಣೆ ಮಾಡುವಲ್ಲಿ ಬಿಜೆಪಿ ಮೊಟ್ಟಮೊದಲನೆಯ ಸ್ಥಾನದಲ್ಲಿ ನಿಲ್ಲುತ್ತದೆ ಎಂದರು.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸುಮಾರು 16,000ಕ್ಕೂ ಮಿಕ್ಕಿ ಶಕ್ತಿಕೇಂದ್ರಗಳ ಅಧ್ಯಕ್ಷರ ಸಹಿತ ಮಹಾ ಶಕ್ತಿಕೇಂದ್ರ, ಮಂಡಲ, ಪ್ರಕೋಷ್ಠ, ಮೋರ್ಚಾ, ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರೀಯ ಪದಾಧಿಕಾರಿಗಳು ಹಾಗೂ ಪಕ್ಷದ ಇತರ ಪ್ರಮುಖರು ಈ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ವಿಧಾನಸಭಾ ಕ್ಷೇತ್ರಕ್ಕೆ ಒಂದು ಅಥವಾ ಗರಿಷ್ಠ ಮೂರು ಮಂದಿ ಅಭ್ಯರ್ಥಿಗಳ ಹೆಸರನ್ನು ಸೂಚಿಸಲು ಅವಕಾಶ ನೀಡಲಾಗಿದೆ. ಮತದಾನ ಪ್ರಕ್ರಿಯೆಯ ಬಳಿಕ ಸೀಲ್ ಮಾಡಿದ ಬ್ಯಾಲೆಟ್ ಪೇಪರ್ ಬಾಕ್ಸ್ ಗಳನ್ನು ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಬಿಜೆಪಿ ರಾಜ್ಯಾಧ್ಯ ಕ್ಷರು ಮತ್ತು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಪರಿಶೀಲಿಸಲಿದ್ದಾರೆ ಎಂದು ಅವರು ಹೇಳಿದರು.

ಅಧ್ಯಕ್ಷತೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ವಹಿಸಿ ದ್ದರು. ವಿಧಾನ ಪರಿಷತ್ ಉಪ ಸಭಾಪತಿ ಪ್ರಾಣೇಶ್ ಹಾಗೂ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿದರು.

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 4.30ರ ತನಕ ನಡೆದ ಮಂಡಲವಾರು ಅಭಿಪ್ರಾಯ ಸಂಗ್ರಹಣೆಯಲ್ಲಿ ಉಡುಪಿ ನಗರ ಮತ್ತು ಗ್ರಾಮಾಂತರ, ಕಾಪು, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ಮಂಡಲಗಳ ಅಪೇಕ್ಷಿತ ಪದಾಧಿಕಾರಿಗಳ ಮತದಾನ ಪ್ರಕ್ರಿಯೆ ನಡೆಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಮಾಜಿ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿ.ಎಂ.ಸುಕುಮಾರ್ ಶೆಟ್ಟಿ, ಪ್ರಮೋದ್ ಮಧ್ವರಾಜ್, ಮುಖಂಡರಾದ ಮಹೇಶ್ ಠಾಕೂರ್ ಉಡುಪಿ, ವೀಣಾ ನಾಯ್ಕ್, ಶ್ರೀಕಾಂತ್ ನಾಯಕ್ ಕಾಪು, ಶಂಕರ ಅಂಕದಕಟ್ಟೆ ಕುಂದಾಪುರ, ಮಹಾವೀರ ಹೆಗ್ಡೆ ಕಾರ್ಕಳ, ದೀಪಕ್ ಕುಮಾರ್ ಶೆಟ್ಟಿ ಬೈಂದೂರು ಉಪಸ್ಥಿತರಿದ್ದರು.

Similar News