ಜನಾರ್ದನ ರೆಡ್ಡಿಯವರ KRPP ಪಕ್ಷ ಸೇರಲಿರುವ ಪಿಎಸ್ಸೈ ಹಗರಣದ ಆರೋಪಿ ಆರ್.ಡಿ.ಪಾಟೀಲ್

ಅಫ್ಜಲ್‍ಪುರ ಕ್ಷೇತ್ರದಿಂದ ಚುನಾವಣೆ ಸ್ಪರ್ಧೆಗೆ ಸಿದ್ಧತೆ

Update: 2023-04-04 15:57 GMT

ಕಲಬುರಗಿ, ಎ. 4: ಪೊಲೀಸ್ ಸಬ್ ಇನ್ಸ್‍ಪೆಕ್ಟರ್(ಪಿಎಸ್ಸೈ) ನೇಮಕಾತಿ ಅಕ್ರಮ ಆರೋಪಕ್ಕೆ ಸಿಲುಕಿ ಕಾರಾಗೃಹದಲ್ಲಿರುವ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್, ಮಾಜಿ ಸಚಿವ ಜನಾರ್ದನ ರೆಡ್ಡಿ ನೇತೃತ್ವದ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಸೇರ್ಪಡೆಯಾಗಲಿದ್ದು, ಆ ಪಕ್ಷದಿಂದಲೇ ಸ್ಪರ್ಧಿಸಲಿದ್ದಾರೆ ಎಂದು ಅವರ ಸಹೋದರ ಮಹಾಂತೇಶ್ ಪಾಟೀಲ್ ತಿಳಿಸಿದ್ದಾರೆ. 

ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಎ.10ಕ್ಕೆ ಪಟ್ದಣದ ನ್ಯಾಷನಲ್ ಫಂಕ್ಷನ್ ಹಾಲ್‍ನಲ್ಲಿ ನಡೆಯುವ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಸಮಾವೇಶದಲ್ಲಿ ಪಕ್ಷದ ಅಧ್ಯಕ್ಷ ಗಾಲಿ ಜನಾರ್ದನರೆಡ್ಡಿ ನೇತೃತ್ವದಲ್ಲಿ ಸೇರ್ಪಡೆಯಾಗಲಿದ್ದೇವೆ. ಅಫ್ಜಲ್‍ಪುರ ಕ್ಷೇತ್ರದಿಂದ ನನ್ನ ಸಹೋದರ ಸ್ಪರ್ಧಿಸಲಿದ್ದಾರೆ ಎಂದು ಹೇಳಿದರು.

ಅಫ್ಜಲ್‍ಪುರ ಕ್ಷೇತ್ರದಲ್ಲಿ 30-40 ವರ್ಷಗಳಿಂದ ಹೇಳಿಕೊಳ್ಳುವಂತಹ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಪಟ್ಟಣದಲ್ಲಿ ಜನರು ಮೂಲಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಹೀಗಾಗಿ ಬದಲಾವಣೆ ತರಲು ನಾವೆಲ್ಲ ಜನಾರ್ಧನ ರೆಡ್ಡಿ ನೇತೃತ್ವದ ಪಕ್ಷವನ್ನು ಸೇರ್ಪಡೆ ಮಾಡುತ್ತಿದ್ದೇವೆ. ಜೊತೆಗೆ ಆರ್.ಡಿ.ಪಾಟೀಲ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲಾಗುವುದು ಎಂದು ಅವರು ತಿಳಿಸಿದರು. 

Similar News