ನಮ್ಮ ಆರೋಗ್ಯದ ರಕ್ಷಣೆಗೆ ನಾವೇ ಹೊಣೆಗಾರರು

ಇಂದು ವಿಶ್ವ ಆರೋಗ್ಯ ದಿನ

Update: 2023-04-06 18:44 GMT

1948ರ ಎಪ್ರಿಲ್ 7ರಂದು ವಿಶ್ವ ಆರೋಗ್ಯ ಸಂಸ್ಥೆ ಉದಯವಾಯಿತು. ಈ ನೆನಪಿಗಾಗಿ 1950ರಂದು ಪ್ರತೀ ವರ್ಷ ಎಪ್ರಿಲ್ 7ರಂದು ‘ವಿಶ್ವ ಆರೋಗ್ಯ ದಿನ’ ಆಚರಿಸಿ, ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. 2023ರ ವಿಶ್ವ ಆರೋಗ್ಯ ದಿನದ ಧ್ಯೇಯ ವಾಕ್ಯ "Health for All-' ಅಂದರೆ ‘ಸರ್ವರಿಗೂ ಆರೋಗ್ಯ’ ಎಂಬುದಾಗಿದೆ. ವಿಶ್ವದ ಎಲ್ಲ ದೇಶಗಳ ಮತ್ತು ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ವಿಶ್ವ ಸಂಸ್ಥೆ ಆರಂಭವಾಗಿ ಸುಮಾರು 75 ವರುಷಗಳೇ ಕಳೆದಿದೆ. ಆದರೆ ಜಗತ್ತಿನ ಎಲ್ಲ ಜನರಿಗೆ ಪರಿಪೂರ್ಣ ಆರೋಗ್ಯ ಸೌಲಭ್ಯ ಇನ್ನೂ ದೊರಕುತ್ತಿಲ್ಲ. ವಿಶ್ವದ ಜನಸಂಖ್ಯೆ 800 ಕೋಟಿಯ ಅರ್ಧದಷ್ಟು ಜನಕ್ಕಾದರೂ ಸೂಕ್ತ ವೈದ್ಯಕೀಯ ಸೌಲಭ್ಯ ದೊರಕಿಸುವುದು ವಿಶ್ವ ಸಂಸ್ಥೆಯ ಮೂಲ ಆದ್ಯತೆಯಾಗಿರುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ 75ನೆಯ ವಾರ್ಷಿಕೋತ್ಸವ ಆಚರಿಸುವ ಸಂದರ್ಭದಲ್ಲಿ ಸರ್ವರಿಗೂ ಆರೋಗ್ಯ ಎಂಬ ಪರಿಕಲ್ಪನೆಯಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಭಾಗ್ಯವನ್ನು ಕಲ್ಪಿಸುವ ಕನಸು ಹೊಂದಿದೆ.

ಸರ್ವರಿಗೂ ಆರೋಗ್ಯ ಎಂದರೆ ಎಲ್ಲರಿಗೂ ಉಚಿತ ಆರೋಗ್ಯ ಸೌಲಭ್ಯ ಎಂದರ್ಥವಿಲ್ಲ. ಯಾಕೆಂದರೆ ಜಗತ್ತಿನ ಯಾವ ರಾಷ್ಟ್ರವೂ ಎಲ್ಲರಿಗೂ, ಏಕಕಾಲದಲ್ಲಿ, ಎಲ್ಲಾ ಸಮಯದಲ್ಲಿ ಉಚಿತ ಆರೋಗ್ಯ ಸೌಲಭ್ಯ ಕೊಡಲು ಸಾಧ್ಯವಾಗದು. ಆದರೂ ಎಲ್ಲರಿಗೂ ಕನಿಷ್ಠ ಮೂಲಭೂತ ವೈದ್ಯಕೀಯ ಸೌಲಭ್ಯ ನೀಡಿ ಹಂತ ಹಂತವಾಗಿ ಉನ್ನತ ವೈದ್ಯಕೀಯ ಸೌಲಭ್ಯ ನೀಡುವ ಸದುದ್ದೇಶ ಹೊಂದಿದೆ. ಮೂಲಭೂತ ಸೌಲಭ್ಯಗಳಾದ ಶುದ್ಧ ನೀರು, ಶುದ್ಧ ಗಾಳಿ, ಶುದ್ಧ ಬೆಳಕು ನೀಡಿ ರೋಗವನ್ನು ತಡೆಗಟ್ಟುವ ಪ್ರಕ್ರಿಯೆಗೆ ಹೆಚ್ಚು ಒತ್ತು ನೀಡುವ ಸದುದ್ದೇಶವಿದೆ. ಇದರ ಜೊತೆಗೆ ಉನ್ನತ ವೈದ್ಯಕೀಯ ಸೌಲಭ್ಯಗಳು, ಸಲಕರಣೆಗಳು ಮತ್ತು ಅತ್ಯಾಧುನಿಕ ವೈದ್ಯಕೀಯ ತಂತ್ರಜ್ಞಾನ ಕೂಡ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವ ಗುರುತರ ಉದ್ದೇಶ ಹೊಂದಿದೆ. ಸೂಕ್ತ ಕಾನೂನು ಮತ್ತು ಸರಕಾರದ ಕಾಯ್ದೆಗಳ ಮುಖಾಂತರ ಎಲ್ಲರಿಗೂ ಸಕಾಲದಲ್ಲಿ ಸಕಲ ವೈದ್ಯಕೀಯ ಸೌಲಭ್ಯ ತಲುಪಿಸುವ ಮಹದಾಸೆ ಹೊಂದಿದೆ. ವೈದ್ಯಕೀಯ ನೆರವು ಎನ್ನುವುದು ಬರೀ ಆಸ್ಪತ್ರೆ ಕಟ್ಟಿಸಿ ಉಚಿತ ಔಷಧಿ ನೀಡುವುದು ಅಲ್ಲ. ಜನರಿಗೆ ಪ್ರಾಥಮಿಕ ಅವಶ್ಯಕತೆಗಳನ್ನು ನೀಡಿ ರೋಗ ಬರದಂತೆ ಮತ್ತು ರೋಗ ಉಲ್ಬಣಿಸದಂತೆ ಪೂರಕವಾದ ವಾತಾವರಣ ಸೃಷ್ಟಿಸುವ ಉನ್ನತ ಧ್ಯೇಯವನ್ನು ಹೊಂದಿದೆ. ಮೆಡಿಕಲ್ ಕಾಲೇಜನ್ನು ನಿರ್ಮಿಸಿ ವೈದ್ಯರ ಸಂಖ್ಯೆ ಜಾಸ್ತಿ ಮಾಡಿ ರೋಗಕ್ಕೊಂದರಂತೆ ಪರಿಣಿತ ವೈದ್ಯರನ್ನು ಸೃಷ್ಟಿಸುವುದಲ್ಲ. ಹೊಸ ಹೊಸ ರೋಗವನ್ನು ಹುಟ್ಟಿಸುವುದಲ್ಲ. ಬದಲಾಗಿ ರೋಗದ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ರೋಗದ ಚಿಕಿತ್ಸೆಗಿಂತ ರೋಗ ತಡೆಗಟ್ಟುವುದರ ಬಗ್ಗೆ ಹೆಚ್ಚಿನ ಮಾಹಿತಿ ನೀಡಿ ಜನರನ್ನು ಜಾಣರನ್ನಾಗಿಸುವ ಸದುದ್ದೇಶ ಹೊಂದಿದೆ.

ಜೀವನ ಶೈಲಿ ಮತ್ತು ಆರೋಗ್ಯ: ಬದಲಾದ ಜೀವನಶೈಲಿ ಆಹಾರ ಪದ್ಧತಿಯಿಂದಾಗಿ ದಿನಕ್ಕೊಂದರಂತೆ ಹೊಸ ಹೊಸ ರೋಗಗಳು ಹುಟ್ಟಿಕೊಳ್ಳುತ್ತಿದೆ. ಕೆಟ್ಟ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಬರುವ ಮಧುಮೇಹ, ರಕ್ತದೊತ್ತಡ, ಹೃದಯಾಘಾತ, ಖಿನ್ನತೆ ಮುಂತಾದ ರೋಗಗಳ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತಿದೆ. ಇದರ ಜೊತೆಗೆ ಸಾಂಕ್ರಾಮಿಕ ರೋಗಗಳಾದ ಎಬೋಲಾ, ಕೋವಿಡ್-19, ಎಚ್1ಎನ್1, ಮುಂತಾದ ವೈರಾಣು ಸೋಂಕುಗಳು ಮನುಕುಲವನ್ನು ಇನ್ನಿಲ್ಲದಂತೆ ಕಾಡಿ ಮನುಷ್ಯರನ್ನು ಹೈರಾಣಾಗಿಸಿದೆ. ಇಂದಿನ ಧಾವಂತದ, ಒತ್ತಡದ ಜೀವನ ಕ್ರಮದಿಂದಾಗಿ ಯಾರಿಗೂ ಆರೋಗ್ಯದ ಬಗ್ಗೆ ಗಮನ ಹರಿಸಲು ಸಮಯವಿಲ್ಲದಿರುವುದೇ ಬಹುದೊಡ್ಡ ದುರಂತ. ಮೇಲೆ ತಿಳಿಸಿದ ಈ ಎಲ್ಲಾ ಹೆಚ್ಚಿನ ಹೊಸ ರೋಗಗಳನ್ನು ಜೀವನ ಶೈಲಿಯ ಬದಲಾವಣೆಯಿಂದಲೇ ಸರಿಪಡಿಸಿಕೊಳ್ಳಬಹುದು. ಆಹಾರ ಪದ್ಧತಿಯ ಬದಲಾವಣೆಯಿಂದ ಹೆಚ್ಚಿನ ರೋಗಗಳನ್ನು ಔಷಧಿ ಇಲ್ಲದೆ ನಿಯಂತ್ರಿಸಬಹುದು ಎಂದು ನಮಗೆ ತಿಳಿದಿದೆ. ಆದರೂ ಆಹಾರಕ್ಕಿಂತ ಜಾಸ್ತಿ ಔಷಧಿ ತಿನ್ನುವ ವರ್ಗದವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ.

‘‘ಸರ್ವರಿಗೂ ಆರೋಗ್ಯ’’ ಎಂಬ 2023ರ ವಿಶ್ವ ಆರೋಗ್ಯ ದಿನದ ಧ್ಯೇಯವಾಕ್ಯಕ್ಕೆ ಪೂರಕವಾದ ವಾತಾವರಣವನ್ನು ನಾವು ನಿರ್ಮಿಸಿಕೊಳ್ಳಬೇಕಾದ ಅನಿವಾರ್ಯತೆಯ ಕಾಲಘಟ್ಟದಲ್ಲಿ ನಾವಿಂದು ನಿಂತಿದ್ದೇವೆ. ನಮ್ಮ ಆರೋಗ್ಯವನ್ನು ನಾವು ರಕ್ಷಿಸಿಕೊಳ್ಳಲು:

 ಒತ್ತಡದ ಜೀವನ ಶೈಲಿಗೆ ತಿಲಾಂಜಲಿ ನೀಡಬೇಕಾಗಿದೆ. ಆರೋಗ್ಯಕ್ಕಿಂತ ಮಿಗಿಲಾದ ವಸ್ತು ಇನ್ನಾವುದೂ ಇಲ್ಲ. ನೆನಪಿರಲಿ ಎಷ್ಟು ಹಣ ನಾವು ಕೂಡಿಟ್ಟರೂ ಒಂದು ಕಾಯಿಲೆಗೆ ಸೂಕ್ತ ಚಿಕಿತ್ಸೆ ಪಡೆಯುವಷ್ಟರಲ್ಲಿ ನಮ್ಮ ಕೂಡಿಟ್ಟ ಹಣ ಕರಗಿ ಹೋಗಿರುತ್ತದೆ. ಈಗಿನ ಶೇ.50 ಮಂದಿ ಯುವಜನರು ವೃತ್ತಿ ಸಂಬಂಧಿತವಾದ ಖಿನ್ನತೆಯಿಂದ ಬಳಲುತ್ತಿದ್ದಾರೆ ಎಂದು ಅಂಕಿ ಅಂಶಗಳಿಂದ ಸಾಬೀತಾಗಿದೆ. ಈ ಕಾರಣದಿಂದ ಆತ್ಮಹತ್ಯೆಯಂತಹ ಘಟನೆ ಪ್ರತೀ ದಿನ ನಾವು ನೋಡುತ್ತೇವೆ, ಕೇಳುತ್ತೇವೆ ಮತ್ತು ಮರೆಯುತ್ತೇವೆ.

 ಧೂಮಪಾನ, ಮದ್ಯಪಾನ ಬಿಟ್ಟುಬಿಡಿ. ಕ್ಯಾನ್ಸರ್‌ನಂತಹ ಮಾರಕ ರೋಗಗಳು ಈ ದುಶ್ಚಟ್ಟಗಳಿಂದಲೇ ಬರುತ್ತದೆ. ರಾತ್ರಿ ಕಂಡ ಬಾವಿಗೆ ಹಗಲು ಬೀಳುವ ಮೂರ್ಖ ಕೆಲಸಕ್ಕೆ ಮುಂದಾಗಬೇಡಿ.

 ದೈನಂದಿನ ಜೀವನದಲ್ಲಿ ಬಿರುಸು ನಡಿಗೆ, ವ್ಯಾಯಾಮ, ಸ್ವಿಮ್ಮಿಂಗ್, ಸೈಕ್ಲಿಂಗ್ ಮುಂತಾದವುಗಳನ್ನು ಅಳವಡಿಸಿಕೊಂಡಲ್ಲಿ, ಅಧಿಕ ರಕ್ತದೊತ್ತಡ ಮತ್ತು ಹೃದಯಾಘಾತ ನಿಮ್ಮ ಹತ್ತಿರ ಸುಳಿಯುವುದೇ ಇಲ್ಲ.

 ಆದಷ್ಟು ಮೂಲಾಹಾರಕ್ಕೆ ಹೆಚ್ಚು ಒತ್ತು ಕೊಡಿ. ನಾರಿನಂಶ ಮತ್ತು ಪೌಷ್ಟಿಕಾಂಶ ಇರುವ ಆಹಾರ ಜಾಸ್ತಿ ಸೇವಿಸಿ.
 
 ಕೃತಕ ಸಿದ್ಧ ಆಹಾರ ಪದ್ಧತಿ ಬಿಟ್ಟು ಬಿಡಿ. ತಾಜಾ ಹಣ್ಣು ಹಂಪಲು, ನೈಸರ್ಗಿಕ ಪೇಯ ಮತ್ತು ನೀರನ್ನು ಧಾರಾಳವಾಗಿ ಸೇವಿಸಿ. ‘‘ಬೇಗ ಮಲಗಿ ಬೇಗ ಏಳು’’ ಎಂಬ ಹಿರಿಯರ ಮಾತನ್ನು ನಿಮ್ಮ ಆರೋಗ್ಯದ ಹಿತದೃಷ್ಟಿಯಿಂದ ಪಾಲಿಸಿ.

 ಅತಿಯಾದ ಮೊಬೈಲ್, ಕಂಪ್ಯೂಟರ್ ಬಳಕೆಯನ್ನು ನಿಯಂತ್ರಿಸಿ. ತಂತ್ರಜ್ಞಾನ ಬೆಳೆದಂತೆಲ್ಲಾ ಹೊಸ ಹೊಸ ಉಪಕರಣ ಬರುವುದು ಸಹಜ. ಆದರೆ ದೈನಂದಿನ ಜೀವನದ ಅತಿ ಅನಿವಾರ್ಯದಲ್ಲಿ ಮಾತ್ರ ಬಳಸಿ.

ಸ್ವಯಂ ಔಷಧಿಗಾರಿಕೆ ಬೇಡ. ನಿರಂತರವಾಗಿ ನಿಯಮಿತವಾಗಿ ವೈದ್ಯರ ಸಲಹೆ ಮತ್ತು ಮಾರ್ಗದರ್ಶನ ಇದ್ದರೆ ಯಾವ ರೋಗವೂ ನಿಮ್ಮ ಹತ್ತಿರ ಸುಳಿಯದು.

Similar News