ಮಡಿಕೇರಿ: ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರ ಕಾರಿನ ಮೇಲೆ ಗುಂಡಿನ ದಾಳಿ

Update: 2023-04-13 07:33 GMT

ಮಡಿಕೇರಿ ಎ.13 : ವಿಶ್ವ ಹಿಂದೂ ಪರಿಷತ್ ನ ಕೊಡಗು ಜಿಲ್ಲಾಧ್ಯಕ್ಷ ಹಾಗೂ ವಕೀಲ ಪಿ.ಕೃಷ್ಣಮೂರ್ತಿ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆದಿರುವುದು ವರದಿಯಾಗಿದೆ. ಬುಧವಾರ ರಾತ್ರಿ 11.30 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕುಶಾಲನಗರದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಡಿಕೇರಿಯ ನಿವಾಸಕ್ಕೆ ಆಗಮಿಸುತ್ತಿದ್ದಾಗ ಚೆಟ್ಟಳ್ಳಿ ಸಮೀಪ ಗುಂಡಿನ ದಾಳಿಯಾಗಿದೆ. ಕಾರಿಗೆ ಗುಂಡು ತಗುಲಿದ್ದು, ಕೃಷ್ಣಮೂರ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. 

ಚೆಟ್ಟಳ್ಳಿ ಗ್ರಾ.ಪಂ ಸದಸ್ಯ ಹಾಗೂ ವಕೀಲ ಬಲ್ಲಾರಂಡ ಕಂಠಿ ಕಾರ್ಯಪ್ಪ ಅವರನ್ನು ಚೆಟ್ಟಳ್ಳಿಯ ನಿವಾಸಕ್ಕೆ ಬಿಟ್ಟು ಮಡಿಕೇರಿ ಕಡೆಗೆ ಪ್ರಯಾಣ ಬೆಳೆಸಿದಾಗ ಘಟನೆ ನಡೆದಿದೆ ಎನ್ನಲಾಗಿದೆ.

ಮಡಿಕೇರಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

Similar News