ದಕ್ಷಿಣ ಭಾರತದಲ್ಲೇ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಎಚ್.ವಿಶ್ವನಾಥ್
Update: 2023-04-13 16:19 GMT
ಬೆಂಗಳೂರು, ಎ. 13: ‘ಇನ್ನು ಮುಂದೆ ಕರ್ನಾಟಕ ರಾಜ್ಯದಲ್ಲಿ ಮಾತ್ರವಲ್ಲ, ದಕ್ಷಿಣ ಭಾರತದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ’ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಎಚ್.ವಿಶ್ವನಾಥ್ ಭವಿಷ್ಯ ನುಡಿದಿದ್ದಾರೆ.
ಗುರುವಾರ ಇಲ್ಲಿನ ಶಿವಾನಂದ ವೃತ್ತ ಸಮೀಪದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯರ ಅಧಿಕೃತ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಬಸವಣ್ಣ, ಕನಕದಾಸ, ನಾರಾಯಣ ಗುರು, ಪರಿಯಾರ್ ಸಾಮಾಜಿಕ ನ್ಯಾಯ ಬಿತ್ತಿದ್ದಾರೆ. ಎಷ್ಟೇ ಶ್ರಮ ಹಾಕಿದರೂ ಬಿಜೆಪಿ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರುವುದಿಲ್ಲ’ ಎಂದು ಹೇಳಿದರು.
ರಾಜ್ಯಕ್ಕೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಬರುವುದರಿಂದ ಯಾವುದೇ ಪರಿಣಾಮ ಬೀರುವುದಿಲ್ಲ. ಅದೇ ರೀತಿಯಲ್ಲಿ ಸಿನಿಮಾ ನಟರು ಮತದಾರರನ್ನು ಆಕರ್ಷಣೆ ಮಾಡಲು ಸಾಧ್ಯವಿಲ್ಲ ಎಂದ ಅವರು, ನಟ ಕಿಚ್ಚ ಸುದೀಪ್ ಅವರೇಕೆ ರಾಜಕೀಯ ಹಂಗಿನಲ್ಲಿ ಸಿಲುಕಿದ್ದಾರೆಯೋ ತಿಳಿಯದು ಎಂದು ಪ್ರತಿಕ್ರಿಯೆ ನೀಡಿದರು.