KPCC ಕಚೇರಿಯಲ್ಲಿ ಕಾಂಗ್ರೆಸ್​ ಸೇರ್ಪಡೆಯಾದ ಲಕ್ಷ್ಮಣ ಸವದಿ

Update: 2023-04-14 15:42 GMT

ಬೆಂಗಳೂರು, ಎ.14: ಬೆಳಗಾವಿ ಜಿಲ್ಲೆ ಅಥಣಿ ಕ್ಷೇತ್ರದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಶುಕ್ರವಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವ, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಶುಕ್ರವಾರ ಬೆಳಗಾವಿಯಿಂದಲೇ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಧಾವಿಸಿದ ಲಕ್ಷ್ಮಣ ಸವದಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದರು. ಆನಂತರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ‘ರಾಜ್ಯದಲ್ಲಿ 63 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ನಾಯಕರು ವಲಸೆ ಹೋಗುತ್ತಿದ್ದಾರೆ. ಶೇ.90ರಷ್ಟು ನಾಯಕರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದು, ಕೆಲವರು ಪಕ್ಷೇತರರಾಗಿ ಸ್ಪರ್ಧಿಸುತ್ತಿದ್ದು, ಮತ್ತೇ ಕೆಲವರು ಜೆಡಿಎಸ್ ಸೇರುತ್ತಿದ್ದಾರೆ ಎಂದು ಹೇಳಿದರು.

‘ಇನ್ನು 5 ವರ್ಷಗಳ ಕಾಲ ವಿಧಾನ ಪರಿಷತ್ ಅಧಿಕಾರವಿದ್ದರೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಅವರು ಈ ಹಿಂದೆ ಸಹಕಾರ, ಸಾರಿಗೆ ಸಚಿವರಾಗಿ ತಮ್ಮದೆ ಆದ ಛಾಪು ಮೂಡಿಸಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಪ್ರಭಾವಿ ನಾಯಕರಾಗಿದ್ದಾರೆ’ ಎಂದು ಅವರು ಹೇಳಿದರು.

‘ರಾಜ್ಯದ ಎಲ್ಲ ನಾಯಕರು, ಕಾರ್ಯಕರ್ತರ ಪರವಾಗಿ ಸವದಿ ಅವರನ್ನು ತುಂಬು ಹೃದಯದಿಂದ ಪಕ್ಷಕ್ಕೆ ಸ್ವಾಗತಿಸುತ್ತೇನೆ. ಇಂದು ಪಕ್ಷದ ಪ್ರಧಾನ ಕಾರ್ಯದರ್ಶಿ, ಶಾಸಕಾಂಗ ಪಕ್ಷದ ನಾಯಕರ ಜತೆ ಸಭೆ ಮಾಡಿ ಈ ತೀರ್ಮಾನ ತೆಗೆದುಕೊಂಡಿದ್ದೇವೆ. ಬೆಳಗಾವಿಯಲ್ಲಿ ಕಾರ್ಯಕ್ರಮ ಇರುವುದರಿಂದ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ’ ಎಂದು ಅವರು ಸ್ಪಷ್ಟಣೆ ನೀಡಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಮಾತನಾಡಿ, ‘ನಾವು ರಾಜಕೀಯವಾಗಿ ಇಷ್ಟು ದಿನ ಎದುರಾಳಿಗಳಾಗಿದ್ದೆವು. ಆದರೆ ಇಂದು ಸವದಿ ಹೊಸ ನಂಬಿಕೆಯೊಂದಿಗೆ ತಮ್ಮ ಲಕ್ಷಾಂತರ ಕಾರ್ಯಕರ್ತರ ಜತೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್, ಸಿದ್ದಾರಾಮಯ್ಯ ನಾಯಕತ್ವದಲ್ಲಿ ನಂಬಿಕೆ ಇಟ್ಟು ಕಾಂಗ್ರೆಸ್ ಸೇರುವ ತೀರ್ಮಾನ ಮಾಡಿದ್ದಾರೆ’ ಎಂದರು.

ಬಿಜೆಪಿ ಪಕ್ಷವನ್ನು ಕಟ್ಟಿದ ಸವದಿ, ಈಶ್ವರಪ್ಪ, ನೆಹರೂ ಓಲೇಕಾರ್, ಲಿಂಗಣ್ಣ, ಎಂ.ಪಿ.ಕುಮಾರಸ್ವಾಮಿ, ರಘುಪತಿ ಭಟ್, ಪುಟ್ಟಣ್ಣ, ನಾಗೇಶ್, ಅಂಗಾರ, ಬೆಟ್ಟಸ್ವಾಮಿ, ಅನಿಲ್ ಬೆನಕೆ, ಮಹದೇವಪ್ಪ, ಗೂಳಿಹಟ್ಟಿ ಶೇಖರ್, ಯು.ಬಿ.ಬಣಕಾರ್, ಆರ್.ಶಂಕರ್ ಸೇರಿದಂತೆ ಅನೇಕ ನಾಯಕರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ಅವರು ದೂರಿದರು.

40 ಪರ್ಸೆಂಟ್ ಕಮಿಷನ್ ಸರಕಾರ ಈ ಬಾರಿ 40ಕ್ಕೂ ಕಡಿಮೆ ಕ್ಷೇತ್ರಗಳನ್ನು ಗೆಲ್ಲಲಿದೆ. ಈ ನಾಯಕರು, ಅಧಿಕಾರಕ್ಕಾಗಿ ಪಕ್ಷ ಸೇರುತ್ತಿಲ್ಲ. ಅವರು ಅವರ ಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿ, ಕರ್ನಾಟಕ ಬ್ರ್ಯಾಂಡ್ ಪುನರ್ ಸ್ಥಾಪನೆಗೆ ಈ ತೀರ್ಮಾನ ಮಾಡಿದ್ದಾರೆ ಎಂದು ಸುರ್ಜೆವಾಲ ಹೇಳಿದರು.

ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿ ಮಾತನಾಡಿದ ಲಕ್ಷ್ಮಣ ಸವದಿ, ‘ನನ್ನ ಕ್ಷೇತ್ರದ ಸುಮಾರು 30 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು, ಮಾರ್ಗದರ್ಶಕರ ಸೂಚನೆಯಂತೆ ಕಾಂಗ್ರೆಸ್ ಸೇರುತ್ತಿದ್ದೇನೆ. ಬಿಜೆಪಿಯಲ್ಲಿ ಯಾವ ರೀತಿ ನಿಷ್ಠೆಯಿಂದ ಕೆಲಸ ಮಾಡಿದ್ದೆನೋ, ಅದೇ ರೀತಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ರಾಜಕಾರಣದ ಉದ್ದೇಶದಿಂದ ಪರಸ್ಪರ ಟೀಕೆ ಟಿಪ್ಪಣಿ ಮಾಡಿದ್ದೆವು. ಇವೆಲ್ಲವನ್ನು ಮರೆತು ಮುಂದಿನ ದಿನಗಳಲ್ಲಿ ನನ್ನನ್ನು ಮನೆ ಮಗನಂತೆ ಭಾವಿಸುವುದಾಗಿ ತಿಳಿಸಿದ್ದಾರೆ’ ಎಂದು ಅವರು ಹೇಳಿದರು.

‘ನಾನು ಚುನಾವಣೆಯಲ್ಲಿ ಸೋತಾಗ ರಾಷ್ಟ್ರೀಯ ನಾಯಕರು ನನ್ನನ್ನು ಉಪಮುಖ್ಯಮಂತ್ರಿ ಮಾಡಿದ್ದರು. ಜತೆಗೆ 2023ರಲ್ಲಿ ನನಗೆ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದರು. ಬಿಜೆಪಿಯಲ್ಲಿ ನಾನು 13 ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿದ್ದೆ. ನಾನು ಉಪಮುಖ್ಯಮಂತ್ರಿ, ಮಂತ್ರಿ ಸ್ಥಾನ ಕೇಳಿರಲಿಲ್ಲ. ಆದರೂ ಅವರೆ ನನಗೆ ಈ ಸ್ಥಾನ ನೀಡಿದರು. ಆದರೆ ಆ ಸ್ಥಾನದಿಂದ ಕೆಳಗಿಳಿಸುವಾಗ ಒಂದು ಮಾತು ಹೇಳಲಿಲ್ಲ ಎಂದು ಸವದಿ ಬೇಸರ ವ್ಯಕ್ತಪಡಿಸಿದರು.

‘ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೊಂದಿಗಿನ ಪ್ರೀತಿ, ವಿಶ್ವಾಸ ನನ್ನನ್ನು ಕಾಂಗ್ರೆಸ್ ಪಕ್ಷದ ಕಚೇರಿಗೆ ತಂದು ನಿಲ್ಲಿಸಿದೆ. ಇಂದಿನಿಂದ ಲಕ್ಷ್ಮಣ ಸವದಿಯನ್ನು ಎಲ್ಲೆಲ್ಲಿ ಅವಶ್ಯಕತೆ ಇದೆಯೋ ಅಲ್ಲಲ್ಲಿ ಬಳಸಿಕೊಳ್ಳಿ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಸಂದರ್ಭದಲ್ಲಿ ಹೆಚ್ಚು ಸ್ಥಾನ ಗೆದ್ದು ರಾಜ್ಯಕ್ಕೆ ಉತ್ತಮ ಆಡಳಿತ ನೀಡಲು ನನ್ನ ಅಳಿಲು ಸೇವೆ ಮಾಡಲು ಸಿದ್ಧನಿದ್ದೇನೆ’ ಎಂದು ಲಕ್ಷ್ಮಣ ಸವದಿ ತಿಳಿಸಿದರು.

ಲಕ್ಷ್ಮಣ ಸವದಿ ಜೊತೆಗೆ ಮಾಜಿ ಸಚಿವ ಶಶಿಕಾಂತ ನಾಯ್ಕ್, ಸಂಘಟನೆಕಾರ ಶಂಕರ್ ಗೌಡ ಕಾಂಗ್ರೆಸ್ ಪಕ್ಷ ಸೇರಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಾ.ಎಂ.ಬಿ.ಪಾಟೀಲ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೋಳಿ, ಮಾಜಿ ಶಾಸಕ ಅಶೋಕ್ ಪಟ್ಟಣ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

‘ಬಿಜೆಪಿ ಆಂತರಿಕ ಹುನ್ನಾರಕ್ಕೆ ರಾಜ್ಯದ ಜನ ಮೇ 10ರಂದು ತಕ್ಕ ಪಾಠ ಕಲಿಸುತ್ತಾರೆ. ಎಲ್ಲ ಪಕ್ಷದಲ್ಲೂ ಲಿಂಗಾಯತ ಸಮುದಾಯದ ನಾಯಕರಿದ್ದಾರೆ. ಈಗ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಲಿಂಗಾಯತ ನಾಯಕರು ಆಗಮಿಸುತ್ತಿದ್ದಾರೆ. ಸಿಎಂ ಸ್ಪರ್ಧಿಸುವ ಶಿಗ್ಗಾಂವ್ ಸೇರಿದಂತೆ ಕಾಂಗ್ರೆಸ್ ಪಕ್ಷದ ನಾಯಕರು ರಾಜ್ಯದ 224 ಕ್ಷೇತ್ರಗಳಲ್ಲಿ ಎಲ್ಲೇ ಪ್ರಚಾರಕ್ಕೆ ಸೂಚನೆ ನೀಡಿದರೂ ನಾನು ಪ್ರಚಾರ ಮಾಡಲು ಸಿದ್ಧ’ 

-ಲಕ್ಷ್ಮಣ ಸವದಿ ಮಾಜಿ ಡಿಸಿಎಂ

Similar News