ರಾಜ್ಯದಲ್ಲಿ ಕಾಂಗ್ರೆಸ್ ನೆಲಸಮವಾಗಲಿದೆ: ಬಿ.ಎಸ್.ಯಡಿಯೂರಪ್ಪ

Update: 2023-04-21 15:30 GMT

ಬೆಂಗಳೂರು, ಎ. 21: ‘ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದ್ದು, ಈ ಬಾರಿ ಕಾಂಗ್ರೆಸ್ ಸಂಪೂರ್ಣ ನೆಲಸಮವಾಗಲಿದೆ. ಬಿಜೆಪಿ 135ರಿಂದ 140 ಸ್ಥಾನಗಳನ್ನು ಗೆದ್ದು, ಅಧಿಕಾರಕ್ಕೆ ಬರುವುದು ನಿಶ್ಚಿತ’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮಾಜಿ ಶಾಸಕ ಎಸ್.ಬಾಲರಾಜು ಹಾಗೂ ಅವರ ಬೆಂಬಲಿಗರನ್ನು ಬಿಜೆಪಿಗೆ ಬರಮಾಡಿಕೊಂಡ ಬಳಿಕ ಮಾತನಾಡಿದ ಅವರು, ‘ರವಿವಾರದಿಂದ ಚುನಾವಣಾ ಪ್ರವಾಸ ಆರಂಭವಾಗಲಿದ್ದು, ಆಗ ಯಾವ ರೀತಿ ಗಾಳಿ ಬೀಸುತ್ತಿದೆ ಎಂದು ಅರ್ಥವಾಗುತ್ತೆ. ಪ್ರಧಾನಿ ನರೇಂದ್ರಮೋದಿ ಪ್ರಚಾರಕ್ಕೆ ಇಳಿದ ನಂತರ 140ಸ್ಥಾನ ಗೆದ್ದು, ಸರಕಾರ ರಚನೆ ಮಾಡುವುದರಲ್ಲಿ ಸಂಶಯವಿಲ್ಲ. ಪಕ್ಷಕ್ಕೆ ಸೇರಲು ಅನೇಕರು ತಮ್ಮನ್ನು ಭೇಟಿಯಾಗುತ್ತಿದ್ದಾರೆ. ಬಿಜೆಪಿ ತತ್ವ-ಸಿದ್ಧಾಂತ ಒಪ್ಪಿ ಬರುವುದಾದರೆ ಅಂತವರನ್ನು ಸ್ವಾಗತಿಸಲು ಸಿದ್ಧರಾಗಿದ್ದೇವೆ ಎಂದು ಹೇಳಿದರು.

ಬಾಲರಾಜು ಅವರ ಸೇರ್ಪಡೆಯಿಂದ ಚಾಮರಾಜನಗರದಲ್ಲಿ ಬಿಜೆಪಿಗೆ ಬಲ ಬಂದಿದೆ. 1999ರಲ್ಲಿ ಕೊಳ್ಳೇಗಾಲ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಬಾಲರಾಜು ಕೇವಲ ನಾಲ್ಕು ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದರು. 2004ರಲ್ಲಿ ಪಕ್ಷೇತರರಾಗಿ ಗೆಲುವು ಕಂಡಿದ್ದರು ಎಂದು ಅವರು ಹೇಳಿದರು.

Similar News