ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಜೀವ ಬೆದರಿಕೆ: ಪ್ರಕರಣ ದಾಖಲು

Update: 2023-04-25 08:22 GMT

ಲಕ್ನೊ: ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಜೀವ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಲಕ್ನೊದಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ ಎಂದು hindustantimes.com ವರದಿ ಮಾಡಿದೆ.

ಜೀವ ಬೆದರಿಕೆ ಸಂದೇಶವು ತುರ್ತು ಸೇವೆಗಳಿಗಾಗಿ ಉತ್ತರ ಪ್ರದೇಶ ಸರ್ಕಾರ ಜಾರಿಗೆ ತಂದಿದ್ದ 112 ಸಂಖ್ಯೆಗೆ ಬಂದಿದ್ದು, ಆ ಸಂದೇಶದಲ್ಲಿ ವ್ಯಕ್ತಿಯೊಬ್ಬ "ನಾನು ಮುಖ್ಯಮಂತ್ರಿ ಯೋಗಿಯನ್ನು ಶೀಘ್ರ ಹತ್ಯೆಗೈಯ್ಯಲಿದ್ದೇನೆ" ಎಂದು ಹೇಳಿಕೊಂಡಿದ್ದಾನೆ.

ಜೀವ ಬೆದರಿಕೆ ಸಂದೇಶವನ್ನು ಸ್ವೀಕರಿಸಿದ ನಂತರ 112 ಸೇವೆಯ ನಿರ್ವಾಹಕ ಕಮಾಂಡರ್ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 506, 507 ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸರು, "112 ಸೇವೆಯು ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ಧ ಜೀವ ಬೆದರಿಕೆ ಸಂದೇಶ ಸ್ವೀಕರಿಸಿದ ನಂತರ ಅಪರಿಚಿತ ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 506, 507 ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ರ ಅಡಿ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ" ಎಂದು ತಿಳಿಸಿದ್ದಾರೆ.

Similar News