ಎ.27ರಂದು 50 ಲಕ್ಷ ಬಿಜೆಪಿ ಕಾರ್ಯಕರ್ತರ ಜೊತೆ ಪ್ರಧಾನಿ ಸಂವಾದ: ಶೋಭಾ ಕರಂದ್ಲಾಜೆ

Update: 2023-04-25 18:49 GMT

ಬೆಂಗಳೂರು, ಎ.25: ಪ್ರಧಾನಿ ನರೇಂದ್ರ ಮೋದಿ ಎ.27ರಂದು ಬೆಳಗ್ಗೆ 9.30ಕ್ಕೆ ರಾಜ್ಯದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುಯಲ್ ಮೂಲಕ ನೇರ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ತಿಳಿಸಿದರು.

ಮಂಗಳವಾರ ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 58,112 ಬೂತ್‍ಗಳಲ್ಲಿ, 1,680 ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಈ ಸಂವಾದವನ್ನು ಹಮ್ಮಿಕೊಳ್ಳಲಾಗಿದೆ. ಬೂತ್‍ಗಳಲ್ಲಿ ಟಿ.ವಿಗಳನ್ನು, ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಎಲ್‍ಇಡಿ ಸ್ಕ್ರೀನ್ ಅಳವಡಿಸಲಾಗುವುದು. ಈ ಸಂವಾದಕ್ಕಾಗಿ ಈಗಾಗಲೇ 24 ಲಕ್ಷ ಕಾರ್ಯಕರ್ತರು ಮೋದಿ ಆ್ಯಪ್ ಡೌನ್‍ಲೋಡ್ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

ಬೂತ್ ಮಟ್ಟದಲ್ಲಿ 58 ಸಾವಿರ ಸ್ಥಳಗಳಲ್ಲಿ ಈ ಆ್ಯಪ್ ಗಳ ಮೂಲಕ ಕಾರ್ಯಕರ್ತರು ಸಂವಾದವನ್ನು ವೀಕ್ಷಿಸಲಿದ್ದಾರೆ. ಎಲ್‍ಇಡಿ ಸ್ಕ್ರೀನ್ ಇರುವ ಕಡೆ ಸುಮಾರು 1 ಸಾವಿರ  ಕಾರ್ಯಕರ್ತರನ್ನು, ಬೂತ್‍ಗಳಲ್ಲಿ 200 ಕಾರ್ಯಕರ್ತರನ್ನು ಈ ಕಾರ್ಯಕ್ರಮಕ್ಕಾಗಿ ಸಂಯೋಜಿಸಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5 ಸಾವಿರ ನಮೋ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಲು ಯೋಜನೆ ರೂಪಿಸಲಾಗಿದೆ ಎಂದು ಅವರು ಹೇಳಿದರು.

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ 15 ಕಡೆ ಪ್ರಧಾನಿ ಮೋದಿ ಕಾರ್ಯಕರ್ತರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಹೊಸ ತಂತ್ರಜ್ಞಾನ ಬಳಸಿಕೊಂಡು ಇದೇ ಮೊದಲ ಬಾರಿ ಬೃಹತ್ ಪ್ರಮಾಣದಲ್ಲಿ ನೇರ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದರು. 

ಇಂದಿನಿಂದ ಎರಡು ದಿನದ ‘ವಿಶೇಷ ಮಹಾ ಪ್ರಚಾರ ಅಭಿಯಾನ’ ಆರಂಭವಾಗಿದೆ. ಎಲ್ಲ 224 ಕ್ಷೇತ್ರಗಳಲ್ಲಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಬೆಳಗ್ಗೆ ಮಠ-ಮಂದಿರಗಳಿಗೆ ಭೇಟಿ ನೀಡಿ ಆನಂತರ ರಾಷ್ಟ್ರ ನಾಯಕರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ್ದಾರೆ. ಮನೆ-ಮನೆಗೂ ಭೇಟಿ ನೀಡಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಸಾಧನೆಗಳು ಮತ್ತು ಯೋಜನೆಗಳ ಬಗ್ಗೆ ತಿಳಿಸುತ್ತಿದ್ದಾರೆ. ಅಭಿಯಾನದ ಭಾಗವಾಗಿ ಸುದ್ದಿಗೋಷ್ಠಿಗಳು, ವಿವಿಧ ಸಮುದಾಯಗಳ ಮುಖಂಡರೊಂದಿಗೆ ಸಂವಾದ, ರೋಡ್‍ಶೋಗಳು, ಸಾರ್ವಜನಿಕ ಸಭೆಗಳನ್ನು ಆಯೋಜಿಸಲಾಗಿದೆ ಎಂದು ಅವರು ಹೇಳಿದರು. 

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನವ ಕರ್ನಾಟಕ ನಿರ್ಮಾಣದ ಸಂಕಲ್ಪವನ್ನು ಹೊಂದಿದ್ದಾರೆ. ಆದರೆ ಕಾಂಗ್ರೆಸ್ ಸುಳ್ಳು, ಒಡೆದಾಳುವ, ದಾರಿತಪ್ಪಿಸುವ, ಒಂದು ಸಮುದಾಯವನ್ನು ಓಲೈಸುವ ಕೆಲಸವನ್ನು ಮಾಡುತ್ತಿದೆ. ಜನರು ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣ ತಿರಸ್ಕರಿಸಲಿದ್ದಾರೆ ಎಂದು ಹೇಳಿದರು. 
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿನಯ್ ಬಿದರೆ ಉಪಸ್ಥಿತರಿದ್ದರು.

Similar News