ಎಸ್‌ಡಿಪಿಐ, ಎಎಪಿ ಪಕ್ಷಗಳು ಬಿಜೆಪಿಯ ಬಿ-ಟೀಮ್: ಜೈರಾಂ ರಮೇಶ್

Update: 2023-05-01 10:39 GMT

ಮಂಗಳೂರು, ಮೇ 1: ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ನಿಟ್ಟಿನಲ್ಲಿ ಎಎಪಿ, ಎಸ್‌ಡಿಪಿಐ, ಎಂಐಎಂ, ಜೆಡಿಎಸ್ ಪಕ್ಷಗಳು ಬಿಜೆಪಿ ಜೊತೆ ಚುನಾವಣಾ ಹೊಂದಾಣಿಕೆ ಮಾಡಿಕೊಂಡಿವೆ. ಹಾಗಾಗಿ ಈ ಎಲ್ಲಾ ಪಕ್ಷಗಳು ಬಿಜೆಪಿಯ ಬಿ-ಟೀಂಗಳಾಗಿವೆ ಎಂದು ಮಾಜಿ ಕೇಂದ್ರ ಸಚಿವ, ರಾಜ್ಯಸಭಾ ಸದಸ್ಯ ಜೈರಾಂ ರಮೇಶ್ ಆರೋಪಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಯಾವುದೇ ವಿಧದ ಕೋಮುವಾದವನ್ನೂ ಎಂದಿಗೂ ಸಹಿಸುವುದಿಲ್ಲ. ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಕೂಡ ಇದನ್ನು ಈಗಾಗಲೆ ಸ್ಪಷ್ಟಪಡಿಸಿದ್ದಾರೆ. ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಶಕ್ತಿಮೀರಿ ಶ್ರಮಿಸುತ್ತಿದೆ. ಈ ಸಂದರ್ಭ ಕಾಂಗ್ರೆಸ್ ಜೊತೆ ಕೈ ಜೋಡಿಸಬೇಕಾದ ಎಎಪಿ, ಎಸ್‌ಡಿಪಿಐ ಮತ್ತಿತರ ಪಕ್ಷಗಳು ಬಿಜೆಪಿಗೆ ಅನುಕೂಲವಾಗುವಂತೆ ಕಾರ್ಯಾಚರಿಸುತ್ತಿವೆ ಎಂದರು.

ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಮೂರು ಅಡುಗೆ ಅನಿಲ್ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡುವುದಾಗಿ ಭರವಸೆ ನೀಡಿದೆ. ಉತ್ತರ ಪ್ರದೇಶದಲ್ಲೂ ಈ ಭರವಸೆ ನೀಡಿ ಅವರು ಅಧಿಕಾರಕ್ಕೆ ಬಂದಿದ್ದಾರೆ. ಅಲ್ಲಿ ಯಾವುದೇ ಕುಟುಂಬಕ್ಕೂ ಅಡುಗೆ ಅನಿಲ ಸಿಲಿಂಡರ್ ಉಚಿತವಾಗಿ ಸಿಕ್ಕಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜಸ್ಥಾನ, ಹಿಮಾಚಲ ಪ್ರದೇಶ ಹಾಗೂ ಛತ್ತೀಸ್ಗಡದ ಚುನಾವಣೆಯಲ್ಲಿ ಪಕ್ಷವು ನೀಡಿದ ಪ್ರಮುಖ ಭರವಸೆಗಳನ್ನು ಈಡೇರಿಸಿವೆ. ರಾಜಸ್ಥಾನದಲ್ಲಿ ಎಲ್ಲ ನಾಗರಿಕರಿಗೂ ಆರೋಗ್ಯ ವಿಮೆ ಮಾಡಿಸಿದೆ. 25 ಲಕ್ಷ ರೂ.ವರೆಗೆ ಚಿಕಿತ್ಸೆ ಉಚಿತವಾಗಿ ಸಿಗುತ್ತಿದೆ. ಹಿಮಾಚಲ ಪ್ರದೇಶ ಮತ್ತು ಛತ್ತೀಸಗಡದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿದೆ ಎಂದು ಜೈರಾಂ ರಮೇಶ್ ಹೇಳಿದರು.

ರಾಜ್ಯಕ್ಕೆ ಕೇಂದ್ರದಿಂದ ಸಿಗುವ ತೆರಿಗೆಯ ಪಾಲು ತುಂಬಾ ಕಡಿಮೆ. ಕರ್ನಾಟಕದ ಅಭಿವೃದ್ಧಿಗೆ ಬಳಕೆಯಾಗುವ ಶೇ.94ರಷ್ಟು ವರಮಾನ ರಾಜ್ಯದಲ್ಲೇ ಉತ್ಪತ್ತಿಯಾಗುತ್ತದೆ. ಹಾಗಾಗಿ ಡಬಲ್ ಇಂಜಿನ್ ಸರಕಾರದಿಂದ ರಾಜ್ಯಕ್ಕೆ ಯಾವುದೇ ಪ್ರಯೋಜನ ಇಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಸಂಸದ ಡಾ. ಅಜಯ್ ಕುಮಾರ್, ಪಕ್ಷದ ಮುಖಂಡರಾದ ಜಿ.ಎ.ಬಾವ, ಎ.ಸಿ.ವಿನಯರಾಜ್, ಅಡ್ವಕೇಟ್ ಮನೋರಾಜ್, ಪದ್ಮಪ್ರಸಾದ್ ಜೈನ್, ಜೋಕಿಂ ಡಿಸೋಜ, ಶುಭೋದಯ ಆಳ್ವ, ಲಾವಣ್ಯಾ ಬಲ್ಲಾಳ್ ಮತ್ತಿತರರು ಉಪಸ್ಥಿತರಿದ್ದರು.

Similar News