ಮಂಡ್ಯ ಜಿಲ್ಲೆಯ 6 ಕ್ಷೇತ್ರಗಳಲ್ಲಿ ಜೆಡಿಎಸ್, ಮೇಲುಕೋಟೆಯಲ್ಲಿ ದರ್ಶನ್ ಪುಟ್ಟಣ್ಣಯ್ಯಗೆ ಸಿಪಿಎಂ ಬೆಂಬಲ

Update: 2023-05-03 16:02 GMT

ಮಂಡ್ಯ, ಮೇ 3: ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಮೇಲುಕೋಟೆ ಕ್ಷೇತ್ರದಲ್ಲಿ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಹಾಗೂ ಉಳಿದ ಆರು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಬೆಂಬಲಿಸಲಾಗುವುದು ಎಂದು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ ತಿಳಿಸಿದ್ದಾರೆ.

ಬುಧವಾರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಮುವಾದಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವ ಸಲುವಾಗಿ ಪಕ್ಷವು ಈ ನಿರ್ಧಾರ ತೆಗೆದುಕೊಂಡಿದೆ. ಕೋಲಾರ ಜಿಲ್ಲೆ ಬಾಗೇಪಲ್ಲಿ, ಕೆ.ಆರ್.ಪುರಂ ಮತ್ತು ಗುಲ್ಬರ್ಗ ಗ್ರಾಮೀಣ ಕ್ಷೇತ್ರಗಳಲ್ಲಿ ಸಿಪಿಎಂ ಅಭ್ಯರ್ಥಿಗಳಿಗೆ ಜೆಡಿಎಸ್ ಬೆಂಬಲ ನೀಡಿದೆ ಎಂದರು.

ರೈತ ಚಳವಳಿಯ ದೃಷ್ಟಿಯಿಂದ ಮೇಲುಕೋಟೆ ಕ್ಷೇತ್ರದಲ್ಲಿ ಸರ್ವೋದಯ ಕರ್ನಾಟಕ ಪಕ್ಷವನ್ನು ಬೆಂಬಲಿಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದ ಅವರು, ಒಂದು ವೇಳೆ ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷವು ಬಿಜೆಪಿ ಜತೆ ಕೈಜೋಡಿಸಿ ಸರಕಾರ ಮಾಡಿದರೆ ವಿರೋಧಿಸುತ್ತೇವೆ ಎಂದು ಹೇಳಿದರು.

ಪಕ್ಷದ ಮುಖಂಡರಾದ ಎಂ.ಪುಟ್ಟಮಾದು, ಸಿ.ಕುಮಾರಿ, ಎನ್.ಎಲ್.ಭರತ್‍ರಾಜ್, ಜಿ.ರಾಮಕೃಷ್ಣ ಹಾಗೂ ಬಿ.ಹನುಮೇಶ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Similar News