ರಾಜ್ಯದಲ್ಲಿ ಮುಂದುವರಿದ ಐಟಿ ದಾಳಿ: ಮಾಜಿ ಮುಖ್ಯಮಂತ್ರಿ ಸಹೋದರಿ ಮನೆಯಲ್ಲಿ ಶೋಧ

Update: 2023-05-07 15:45 GMT

ಬೆಂಗಳೂರು, ಮೇ 7: ವಿಧಾನಸಭೆ ಚುನಾವಣೆ ನಡುವೆ ಕಾಂಗ್ರೆಸ್ ಅಭ್ಯರ್ಥಿಗಳ ಬೆಂಬಲಿಗರು ಹಾಗೂ ಆ ಪಕ್ಷದ ನಾಯಕರ ಮನೆ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಾಳಿ ಮುಂದುವರಿಸಿದ್ದು, ಈ ನಡುವೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಹೋದರಿ ನಿವಾಸದಲ್ಲೂ ಶೋಧ ನಡೆಸಲಾಗಿದೆ.

ಬೆಂಗಳೂರಿನ ಕೋರಮಂಗಲದ 1ನೆ ಬ್ಲಾಕ್‍ನಲ್ಲಿರುವ ನಿವಾಸ ಎಸ್.ಎಂ.ಕೃಷ್ಣ ಸಹೋದರಿ ಸುನೀತಾ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಎರಡು ದಿನಗಳಿಂದ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಮತ್ತೊಂದೆಡೆ, ಮಂಡ್ಯ, ಕಲಬುರ್ಗಿ, ಹಾವೇರಿ, ಬಾಗಲಕೋಟೆ ಸೇರಿದಂತೆ ರಾಜ್ಯದ ಹಲವೆಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ಪರಿಶೀಲನೆ ನಡೆಸಿದ್ದಾರೆ. ಇಲ್ಲಿನ ಕಲಬುರ್ಗಿಯಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ಬೆಂಬಲಿಗ ಎನ್ನಲಾದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಅರವಿಂದ್ ಚೌಹಾಣ್ ಮನೆ ಮೇಲೆ ಐಟಿ ದಾಳಿ ನಡೆದಿದೆ. ಕೆಲ ದಿನಗಳ ಹಿಂದಷ್ಟೇ ಬಿಜೆಪಿ ಬಿಟ್ಟು ಅರವಿಂದ್ ಚೌಹಾಣ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.

Similar News