ವಿಧಾನಸಭಾ ಚುನಾವಣೆ 2023 | ರಾಜ್ಯದ ಗಮನ ಸೆಳೆದ ಪ್ರಮುಖ ಕ್ಷೇತ್ರಗಳಿವು

Update: 2023-05-12 10:10 GMT

ಬೆಂಗಳೂರು: ವಿಧಾನಸಭಾ ಚುನಾವಣೆಯ ಫಲಿತಾಂಶ ನಾಳೆ (ಮೇ 13) ಹೊರಬೀಳಲಿದೆ. ಬೇರೆ ಬೇರೆ ಕಾರಣಗಳಿಂದಾಗಿ ಪ್ರಮುಖ ಕ್ಷೇತ್ರಗಳಾಗಿ ಪರಿವರ್ತನೆಗೊಂಡು ರಾಜ್ಯದ ಗಮನ ಸೆಳೆದ ಕ್ಷೇತ್ರಗಳ ವಿವರ ಇಲ್ಲಿವೆ...

1. ಶಿಗ್ಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕ್ಷೇತ್ರದ ಹಾಲಿ ಶಾಸಕರು, 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಯ್ಯದ್ ಅಝೀಮ್ ಪ್ರೀರ್ ಖಾದ್ರಿ ವಿರುದ್ಧ 9,265 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಬಾರಿ ಇಲ್ಲಿ ಕಾಂಗ್ರೆಸ್ ನಿಂದ ಯಾಸೀರ್ ಖಾನ್ ಪಠಾಣ್ ಕಣಕ್ಕಿಳಿದಿದ್ದಾರೆ. 

2. ವರುಣಾ: ಈ ಕ್ಷೇತ್ರದಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. 2018ರ ಚುನಾವಣೆಯಲ್ಲಿ ತನ್ನ ಮಗ ಯತೀಂದ್ರಗಾಗಿ ತ್ಯಾಗ ಮಾಡಿದ್ದ ಸಿದ್ದರಾಮಯ್ಯ, ಬಾದಾಮಿಯಲ್ಲಿ ಗೆಲುವು ಸಾಧಿಸಿದ್ದರು. ಇಲ್ಲಿ ಈ ಬಾರಿ ವಸತಿ ಸಚಿವ ಸೋಮಣ್ಣ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಸೋಮಣ್ಣ ಅವರು ಚಾಮರಾಜನಗರ ಕ್ಷೇತ್ರದಿಂದಲೂ ಸ್ಪರ್ಧಿಸುತ್ತಿದ್ದಾರೆ. 

3. ಕನಕಪುರ: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಈ ಕ್ಷೇತ್ರದ ಅಭ್ಯರ್ಥಿ. ಡಿ. ಕೆ. ಶಿವಕುಮಾರ್ ಇಲ್ಲಿ ಏಳು ಬಾರಿ ಗೆದ್ದು ಈ ಕ್ಷೇತ್ರದ ಶಾಸಕರಾಗಿದ್ದಾರೆ. ಇಲ್ಲಿ ಬಿಜೆಪಿಯಿಂದ ಸಚಿವ ಆರ್. ಅಶೋಕ್ ಕಣದಲ್ಲಿದ್ದಾರೆ. 

4.  ರಾಮನಗರ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಇಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಸೊಸೆ ಹಾಗೂ ಹೆಚ್ ಡಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಗೆದ್ದು ಶಾಸಕರಾಗಿದ್ದರು. ಈ ಬಾರಿ ನಿಖಿಲ್ ಕುಮಾರ ಸ್ವಾಮಿ ಸ್ಪರ್ಧಿಸುತ್ತಿದ್ದಾರೆ.  

5. ಕೋಲಾರ:  ಸಿದ್ದರಾಮಯ್ಯ ಅವರು ಈ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಛೆ ವ್ಯಕ್ತಪಡಿಸಿದ್ದರು. ಕೊನೆ ಕ್ಷಣದಲ್ಲಿ ಹಿಂದೆ ಸರಿದಿದ್ದರು. ಅಂತಿಮವಾಗಿ ಕೊತ್ತೂರು ಮಂಜುನಾಥ್ ಹೆಸರನ್ನು ಹೈಕಮಾಂಡ್ ಘೋಷಿಸಿದೆ. 

6. ಚನ್ನಪಟ್ಟಣ: 2018ರಲ್ಲಿ ರಾಮನಗರದ ಬದಲು ಇಲ್ಲಿಂದ ಸ್ಪರ್ಧಿಸಿದ್ದ ಎಚ್‌ಡಿ ಕುಮಾರಸ್ವಾಮಿ, ಸಿ.ಪಿ. ಯೋಗೇಶ್ವರ್ ಅವರನ್ನು ಸೋಲಿಸಿದ್ದರು. ಕುಮಾರಸ್ವಾಮಿ ಮತ್ತೆ ಅದೇ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಸಿ.ಪಿ. ಯೋಗೇಶ್ವರ್ ಕೂಡ ಮತ್ತೆ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. 

7. ಹಾಸನ: ಬಿಜೆಪಿಯ ಪ್ರೀತಂ ಗೌಡ ಕಳೆದ ಬಾರಿ ಸುಮಾರು 13 ಸಾವಿರ ಮತಗಳ ಅಂತರದಿಂದ ಎಚ್‌ಎಸ್‌ ಪ್ರಕಾಶ್‌ ಅವರನ್ನು ಸೋಲಿಸುವ ಮೂಲಕ ಜೆಡಿಎಸ್‌ ಪಕ್ಷವನ್ನ ಸೋಲಿಸಿದ್ದರು. ಈ ಬಾರಿ ಜೆಡಿಎಸ್ ನಲ್ಲಿ ಟಿಕೆಟ್ ವಿಚಾರಕ್ಕೆ ಭವಾನಿ ರೇವಣ್ಣ ಹಾಗೂ ಎಚ್‌ಎಸ್‌ ಪ್ರಕಾಶ್‌ ಪುತ್ರ ಸ್ವರೂಪ್ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಕೊನೆ ಕ್ಷಣ ಸ್ವರೂಪ್ ಹೆಸರನ್ನು ಜೆಡಿಎಸ್‌ ಅಂತಿಮಗೊಳಿಸಿದೆ. 

8. ಶಿಕಾರಿಪುರ: ಮಾಜಿ ಸಿಎಂ ಮತ್ತು ಲಿಂಗಾಯತ ಪ್ರಬಲ ನಾಯಕ ಬಿ ಎಸ್ ಯಡಿಯೂರಪ್ಪ ಅವರು ಸಕ್ರಿಯ ರಾಜಕೀಯದಿಂದ ನಿವೃತ್ತಿಯಾದ ನಂತರ ಈಗ ಅವರ ಸ್ಥಾನ ತೆರವಾಗಿದೆ. ಈಗ ಅವರ ಎರಡನೇ ಪುತ್ರ ಬಿ ವೈ ವಿಜಯೇಂದ್ರ ಅವರಿಕೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಲ್ಲಿ ಕಾಂಗ್ರೆಸ್ ಪಕ್ಷ ಗೋಣಿ ಮಾಲತೇಶ್ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ.

9. ಸೊರಬ: ಈ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪ ಅವರ ಇಬ್ಬರು ಪುತ್ರರಾದ ಬಿಜೆಪಿ ಹಾಲಿ ಶಾಸಕ ಕುಮಾರ್ ಬಂಗಾರಪ್ಪ ಮತ್ತು ಮಧು ಬಂಗಾರಪ್ಪ ಮತ್ತೆ ಕಣಕ್ಕಿಳಿದಿದ್ದಾರೆ. ಕಳೆದ ಬಾರಿ ಜೆಡಿಎಸ್ ಮಧು ಅವರಿಗೆ ಟಿಕೆಟ್ ನೀಡಿತ್ತು ಆದರೆ ಈ ಬಾರಿ ಅವರು ಕಾಂಗ್ರೆಸ್‌ನಲ್ಲಿದ್ದಾರೆ.

ನಟ ಶಿವರಾಜ ಕುಮಾರ್, ಪತ್ನಿ ಹಾಗೂ ಮಧು ಬಂಗಾರಪ್ಪ ಸಹೋದರಿ ಗೀತಾ ಇಲ್ಲಿ ಮಧು ಪರ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. 

10. ಗೋಕಾಕ: ಬೆಳಗಾವಿಯ ಪ್ರಬಲ ಜಾರಕಿಹೊಳಿ ಕುಟುಂಬದ ರಮೇಶ್ ಜಾರಕಿಹೊಳಿ ಅವರು 1999 ರಿಂದ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಕಾಂಗ್ರೆಸ್ ನಲ್ಲಿದ್ದ  ಜಾರಕಿಹೊಳಿ 2019ರಲ್ಲಿ ಬಿಜೆಪಿ ಸೇರಿದ್ದರು. ಎರಡು ವರ್ಷಗಳ ಹಿಂದೆ ಸೀಡಿ ಹಗರಣದ ನಂತರ ಜಾರಕಿಹೊಳಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 

11. ದೇವನಹಳ್ಳಿ: ಲೋಕಸಭೆಯಲ್ಲಿಯೇ ತಮ್ಮ ಎಲ್ಲಾ ಚುನಾವಣಾ ರಾಜಕೀಯವನ್ನು ಕಳೆದಿರುವ ಕೋಲಾರದ ಮಾಜಿ ಸಂಸದ ಕೆ.ಎಚ್. ಮುನಿಯಪ್ಪ, ಈ ಬಾರಿ ದೇವನಹಳ್ಳಿಯಿಂದ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. 

12.  ಗಂಗಾವತಿ: ಗಣಿ ಉದ್ಯಮಿ ಮತ್ತು ಬಿಜೆಪಿಯ ಮಾಜಿ ಸಚಿವ ಜಿ ಜನಾರ್ದನ ರೆಡ್ಡಿ ತಮ್ಮ ಹೊಸ ಪಕ್ಷ 'ಕರ್ನಾಟಕ ರಾಜ್ಯ ಪ್ರಗತಿ ಪಕ್ಷ'ದ ಅಭ್ಯರ್ಥಿಯಾಗಿ ಇಲ್ಲಿಂದ ಸ್ಪರ್ಧಿಸಲು ನಿರ್ಧರಿಸಿದ ನಂತರ ಗಂಗಾವತಿ ಇದ್ದಕ್ಕಿದ್ದಂತೆ ಮಹತ್ವ ಪಡೆದುಕೊಂಡಿದೆ. ಕಾಂಗ್ರೆಸ್ ನಿಂದ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಕಣದಲ್ಲಿದ್ದಾರೆ. 

13. ವಿಜಯಪುರ: ವಿವಾದಾತ್ಮಕ ಹೇಳಿಕೆಗಳಿಗೆ ಹೆಸರಾದ ಬಸನಗೌಡ ಪಾಟೀಲ್ ಯತ್ನಾಳ್ ಇಲ್ಲಿನ ಬಿಜೆಪಿ ಶಾಸಕ. ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಹಮೀದ್ ಮುಶ್ರಿಫ್ ಕಣಕ್ಕಿಳಿದಿದ್ದಾರೆ. ಜೆಡಿಎಸ್ ಅಭ್ಯರ್ಥಿಯಾಗಿದ್ದ ಬಂದೇನವಾಜ್ ಮಹಾಬರಿ ಕಣದಿಂದ ಹಿಂದೆ ಸರಿದು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದಾರೆ. 

14. ಬಳ್ಳಾರಿ ನಗರ: ಮಾಜಿ ಸಚಿವ, ಗಣಿ ಉದ್ಯಮಿ ಹಾಗೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಮುಖ್ಯಸ್ಥ ಜಿ.ಜನಾರ್ದನ ರೆಡ್ಡಿ ಇಲ್ಲಿಂದ ತಮ್ಮ ಪತ್ನಿ ಅರುಣಾ ಲಕ್ಷ್ಮಿ ಅವರನ್ನು ಕಣಕ್ಕಿಳಿದಿದ್ದಾರೆ. ರೆಡ್ಡಿ ಸಹೋದರ ಜಿ ಸೋಮಶೇಖರ ರೆಡ್ಡಿ ಹಾಲಿ ಬಿಜೆಪಿ ಶಾಸಕರಾಗಿದ್ದಾರೆ.

15. ಚಿತ್ತಾಪುರ: ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಇಲ್ಲಿಂದ ಪುನರಾಯ್ಕೆ ಬಯಸಿದ್ದಾರೆ. ಇಲ್ಲಿಂದ ಬಿಜೆಪಿಯು ವಂಚನೆ, ಅಕ್ರಮ, ಬೆದರಿಕೆ, ಅನ್ನಭಾಗ್ಯ ಅಕ್ಕಿ ಕಳ್ಳತನ ಸೇರಿ ವಿವಿಧ ಆರೋಪಗಳನ್ನು ಎದುರಿಸುತ್ತಿರುವ ಮಣಿಕಂಠ ರಾಠೋಡ್ ನನ್ನು ಕಣಕ್ಕಿಳಿಸಿದೆ. ಇಲ್ಲಿ ಮಣಿಕಂಠ ರಾಠೋಡ್ ಪರ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. 

16. ಕೊರಟಗೆರೆ: ಮಾಜಿ ಉಪಮುಖ್ಯಮಂತ್ರಿ ಹಾಗೂ ಐದು ಬಾರಿ ಶಾಸಕರಾಗಿದ್ದ ಜಿ.ಪರಮೇಶ್ವರ ಇಲ್ಲಿಂದ ಪುನರಾಯ್ಕೆ ಬಯಸಿದ್ದಾರೆ. 

17. ಮಂಗಳೂರು: ವಿಧಾನಸಭಾ ವಿಪಕ್ಷ ಉಪನಾಯಕ ಯು.ಟಿ ಖಾದರ್ ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ. ಬಿಜೆಪಿ ಭದ್ರಕೋಟೆ ಎಂದೇ ಹೇಳಲಾಗುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕರಾಗಿದ್ದಾರೆ. 

18. ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ನಾಲ್ಕು ಬಾರಿ ಶಾಸಕರಾಗಿದ್ದ ಸಿ ಟಿ ರವಿ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಇಲ್ಲಿ ಕಾಂಗ್ರೆಸ್ ಸಿ ಟಿ ರವಿ ಆಪ್ತರಾಗಿದ್ದ ತಮ್ಮಯ್ಯರನ್ನು ಕಣಕ್ಕಿಳಿಸಿದೆ. 

19. ಬಾದಾಮಿ: ಇದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶಾಸಕರಾಗಿರುವ ಕ್ಷೇತ್ರ. ಈ ಬಾರಿ ಕಾಂಗ್ರೆಸ್ ಇಲ್ಲಿಂದ ಭೀಮಸೇನ ಚಿಮ್ಮನಕಟ್ಟಿಯವರನ್ನು ಕಣಕ್ಕಿಳಿಸಿದೆ. 

Similar News